ಉಡುಪಿ: ರಾಜ್ಯ ಸಹಕಾರಿ ಪ್ರಶಸ್ತಿ ವಿಜೇತರಿಗೆ ಅಭಿನಂದನೆ

ಉಡುಪಿ, ಡಿ.25: ಕರ್ನಾಟಕ ರಾಜ್ಯದ ‘ಸಹಕಾರ ರತ್ನ’ ಹಾಗೂ ‘ಶ್ರೇಷ್ಠ ಸಹಕಾರಿ’ ಪ್ರಶಸ್ತಿ ವಿಜೇತರಾದ ಉಡುಪಿ ಜಿಲ್ಲೆಯ ಮೂವರು ಸಹಕಾರಿಗಳಿಗೆ ಸನ್ಮಾನ ಹಾಗೂ ಸಾರ್ವಜನಿಕ ಅಭಿನಂದನಾ ಕಾರ್ಯಕ್ರಮ ಪರ್ಯಾಯ ಪಲಿಮಾರು ಮಠ ಹಾಗೂ ಸಾರ್ವಜನಿಕ ಅಭಿನಂದನಾ ಸಮಿತಿಯ ವತಿಯಿಂದ ಇಂದು ಉಡುಪಿ ಶ್ರೀಕೃಷ್ಣ ಮಠದ ರಾಜಾಂಗಣದಲ್ಲಿ ನಡೆಯಿತು.
ಕರ್ನಾಟಕ ರಾಜ್ಯದ ‘ಸಹಕಾರ ರತ್ನ’ ಪ್ರಶಸ್ತಿ ಪಡೆದ ಉಡುಪಿ ಕೋ ಆಪರೇಟಿವ್ ಟೌನ್ ಬ್ಯಾಂಕ್ನ ಅಧ್ಯಕ್ಷ ಕೆ.ಕೃಷ್ಣರಾಜ ಸರಳಾಯ, ಉಡುಪಿ ಜಿಲ್ಲಾ ಮಹಿಳಾ ಮಂಡಳಿಗಳ ಒಕ್ಕೂಟದ ಅಧ್ಯಕ್ಷೆ ಸರಳ ಕಾಂಚನ್ ಹಾಗೂ ‘ಶ್ರೇಷ್ಠ ಸಹಕಾರಿ’ ಪ್ರಶಸ್ತಿ ಪಡೆದ ಬಡಗುಬೆಟ್ಟು ಕ್ರೆಡಿಟ್ ಕೋ-ಆಪರೇಟಿವ್ ಸೊಸೈಟಿಯ ಪ್ರದಾನ ವ್ಯವಸ್ಥಾಪಕ ಜಯಕರ ಶೆಟ್ಟಿ ಇಂದ್ರಾಳಿ ಇವರನ್ನು ಪರ್ಯಾಯ ಪಲಿಮಾರು ಮಠದ ಶ್ರೀ ವಿದ್ಯಾಧೀಶತೀರ್ಥರು ‘ಶ್ರೀಕೃಷ್ಣಾನುಗ್ರಹ’ ಪ್ರಶಸ್ತಿ ನೀಡಿ ಸನ್ಮಾನಿಸಿದರು. ಬಳಿಕ ಸಮಿತಿಯ ವತಿಯಿಂದ ಮೂವರನ್ನು ಸಾರ್ವಜನಿಕವಾಗಿ ಅಭಿನಂದಿಸಿ ಸನ್ಮಾನಿಸಲಾಯಿತು.
‘ಜೀವನದಲ್ಲಿ ಸಹಕಾರಿ ತತ್ವವನ್ನು ಅಳವಡಿಸಿಕೊಳ್ಳುವುದು ಅತೀ ಅಗತ್ಯ. ಜಿಲ್ಲೆಯಲ್ಲಿ ಸಹಕಾರಿ ಬ್ಯಾಂಕ್ಗಳ ಮೂಲಕ ನೂರಾರು ಮಂದಿ ಬದುಕು ಕಟ್ಟಿಕೊಂಡಿದ್ದಾರೆ. ಈ ಕ್ಷೇತ್ರದಲ್ಲಿ ಸಾಧನೆ ಮಾಡಿದವರನ್ನು ಗೌರವಿಸುವುದು ನಮ್ಮ ಆದ್ಯ ಕರ್ತವ್ಯ’ ಎಂದು ಪಲಿಮಾರು ಶ್ರೀಗಳು ತಮ್ಮ ಆರ್ಶೀವಚನದಲ್ಲಿ ತಿಳಿಸಿದರು.
ಶಾಸಕ ಕೆ.ರಘುಪತಿ ಭಟ್, ಮಾಜಿ ಶಾಸಕ ಪ್ರಮೋದ್ ಮಧ್ವರಾಜ್, ಡಾ. ಜಿ. ಶಂಕರ್ ಫ್ಯಾಮಿಲಿ ಟ್ರಸ್ಟ್ನ ಪ್ರವರ್ತಕ ನಾಡೋಜ ಡಾ. ಜಿ. ಶಂಕರ್, ಸಹಕಾರ ಸಂಘಗಳ ಉಪನಿಬಂಧಕ ಪ್ರವೀಣ್ ನಾಯಕ್, ನಿಬಂಧಕಿ ಚಂದ್ರಪ್ರತಿಮಾ, ಅಭಿನಂದನಾ ಸಮಿತಿ ಅಧ್ಯಕ್ಷ ಪುರುಷೋತ್ತಮ ಶೆಟ್ಟಿ, ಮಹಿಳಾ ಒಕ್ಕೂಟದ ಅಧ್ಯಕ್ಷೆ ವಸಂತಿ ರಾವ್ ಕೊರಡ್ಕಲ್, ತುಳುಕೂಟದ ಅಧ್ಯಕ್ಷ ವಿ.ಜಿ ಶೆಟ್ಟಿ, ಅಭಿನಂದನಾ ಸಮಿತಿ ಕಾರ್ಯದರ್ಶಿ ಬಿ.ವಿ. ಲಕ್ಷ್ಮೀನಾರಾಯಣ ಉಪಸ್ಥಿತರಿದ್ದರು.
ಬಿ.ವಿ.ಲಕ್ಷ್ಮೀನಾರಾಯಣ ಅತಿಥಿಗಳನ್ನು ಸ್ವಾಗತಿಸಿದರೆ, ಪ್ರಶಾಂತ್ ಶೆಟ್ಟಿ ಹಾವಂಜೆ ಕಾರ್ಯಕ್ರಮ ನಿರೂಪಿಸಿದರು.