ಸಮಾವೇಶ, ಅಭಿನಂದನಾ ಕಾರ್ಯಕ್ರಮ ಸಹಕಾರಿ ರಂಗಕ್ಕೆ ಇನ್ನಷ್ಟು ಪ್ರೇರಣೆ ನೀಡುವಂತಾಗಲಿ: ಸಚಿವ ಖಾದರ್
► ಡಾ. ಎಂ.ಎನ್.ರಾಜೇಂದ್ರ ಕುಮಾರ್ ಗೆ ಅಭಿನಂದನೆ ಕಾರ್ಯಕ್ರಮ

ಮಂಗಳೂರು, ಜ.1: ಸಹಕಾರಿ ರತ್ನ ಡಾ. ಎಂ.ಎನ್. ರಾಜೇಂದ್ರ ಕುಮಾರ್ ಅವರು ಸಹಕಾರಿ ಸಂಘಕ್ಕೆ ಸಲ್ಲಿಸಿದ ಸೇವೆಯನ್ನು ಪರಿಗಣಿಸಿದರೆ ಅವರು ಅಭಿನಂದನೆಗೆ ಅರ್ಹ ವ್ಯಕ್ತಿ, ಜೊತೆಗೆ ನಡೆಯುವ ಸಹಕಾರಿ ಸಮಾವೇಶ ಸಹಕಾರಿ ರಂಗಕ್ಕೆ ಇನ್ನಷ್ಟು ಪ್ರೇರಣೆ ನೀಡುವ ಕಾರ್ಯಕ್ರಮವಾಗಲಿ ಎಂದು ನಗರಾಭಿವೃದ್ಧಿ ಸಚಿವ ಯು.ಟಿ.ಖಾದರ್ ಹೇಳಿದರು.
ದಕ್ಷಿಣ ಕನ್ನಡ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ ಸಭಾಂಗಣದಲ್ಲಿಂದು ಡಾ. ಎಂ.ಎನ್. ರಾಜೇಂದ್ರ ಕುಮಾರ್ ಅವರಿಗೆ ಅಭಿನಂದನೆ ಕಾರ್ಯಕ್ರಮ ಮತ್ತು ನವೋದಯ ಸ್ವಸಹಾಯ ಸಂಘಗಳ ಸಮಾವೇಶದ ಆಮಂತ್ರಣ ಪತ್ರಿಕೆ ಬಿಡುಗಡೆ ಮಾಡಿ ಅವರು ಮಾತನಾಡುತ್ತಿದ್ದರು.
ಜಿಲ್ಲೆಯ ಸಹಕಾರಿ ರಂಗವನ್ನು ಬಲಗೊಳ್ಳುವಂತೆ ಮಾಡುವಲ್ಲಿ ‘ಸಹಕಾರ ರತ್ನ’ ಡಾ.ಎಂ.ಎನ್. ರಾಜೇಂದ್ರ ಕುಮಾರ್ ಅವರು ಕಳೆದ 25 ವರ್ಷಗಳಲ್ಲಿ ಅಧ್ಯಕ್ಷರಾಗಿ ಮಹತ್ವದ ಕೊಡಗೆ ನೀಡಿದ್ದಾರೆ. ಇತಿಹಾಸ ನಿರ್ಮಿಸಿದ್ದಾರೆ. ಈ ರೀತಿಯ ದೀರ್ಘವಾದ ಸೇವೆ ನೀಡಿದ ಉದಾಹರಣೆ ವಿರಳ, ಈ ಕಾರ್ಯಕ್ರಮಕ್ಕೆ ಜಿಲ್ಲಾಡಳಿತದಿಂದ ಸಹಕಾರ ನೀಡಲಾಗುವುದು ಎಂದು ಸಚಿವ ಖಾದರ್ ತಿಳಿಸಿದರು.
ಸಹಕಾರಿ ರಂಗದಲ್ಲಿ ಗ್ರಾಹಕರಿಗೆ ಭದ್ರತೆ, ಆರ್ಥಿಕ ನೆರವು, ಲಾಭಾಂಶ ದೊರಕಿಸಿಕೊಡುವಲ್ಲಿ ರಾಜೇಂದ್ರ ಕುಮಾರ್ ಸಾಧನೆ ಮಹತ್ವದ್ದಾಗಿದೆ ಎಂದು ಶಾಸಕ ವೇದವ್ಯಾಸ ಕಾಮತ್ ಶ್ಲಾಘಿಸಿದರು.
2 ಲಕ್ಷ ಮಂದಿ ಭಾಗವಹಿಸುವ ನಿರೀಕ್ಷೆ
ಸಮಾರಂಭದಲ್ಲಿ ಸುಮಾರು 2 ಲಕ್ಷ ಜನರಿಗೆ ಊಟ, ಉಪಹಾರದ ವ್ಯವಸ್ಥೆ ಮಾಡಲಾಗಿದೆ. ಜ.18ರಂದು 9 ಸಾವಿರ ಮಂದಿ ಉತ್ತರ ಕನ್ನಡ ಹಾಗೂ ಶಿವಮೊಗ್ಗದಿಂದ ಭಾಗವಹಿಸಲಿದ್ದಾರೆ. ಸಮಾರಂಭದಲ್ಲಿ ಸಚಿವರು, ಸಂಸದರು, ಮಾಜಿ ಸಚಿವರು ಭಾಗವಹಿಸಲಿದ್ದಾರೆ. ದಕ್ಷಿಣ ಕನ್ನಡ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ ಅಧ್ಯಕ್ಷರಾಗಿ 25 ವರ್ಷ ಪೂರ್ಣಗೊಳಿಸುತ್ತಿರುವ ಸಂದರ್ಭದಲ್ಲಿ ಅಧ್ಯಕ್ಷರ ಸೇವಾವಧಿಯ ರಜತ ಮಹೋತ್ಸವದ ಅಂಗವಾಗಿ ಅಭಿನಂದನಾ ಕಾರ್ಯಕ್ರಮ ಹಾಗೂ ನವೋದಯ ಸ್ವಸಹಾಯ ಸಂಘಗಳ ವಿಂಶತಿ ಸಮಾವೇಶ ಜ.19ರಂದು ನೆಹರು ಮೈದಾನದಲ್ಲಿ ನಡೆಯಲಿದೆ.
ಧರ್ಮಸ್ಥಳದ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆ ಅಧ್ಯಕ್ಷತೆಯಲ್ಲಿ ನಡೆಯಲಿರುವ ಕಾರ್ಯಕ್ರಮವನ್ನು ಮುಖ್ಯಮಂತ್ರಿ ಎಚ್.ಡಿ.ಕುಮಾರ ಸ್ವಾಮಿ ಉದ್ಘಾಟಿಸಲಿದ್ದಾರೆ.
ಮೆರವಣಿಗೆ, ವಿಂಶತಿ ಸ್ಮರಣ ಸಂಚಿಕೆ ಮತ್ತು ಆಕರ ಗ್ರಂಥ ಬಿಡುಗಡೆ ಕಾರ್ಯಕ್ರಮ ನಡೆಯಲಿದೆ. ಸಹಕಾರಿ ವಸ್ತು ಸಂಗ್ರಹಾಲಯ ಉದ್ಘಾಟನೆ ಈ ಸಂದರ್ಭದಲ್ಲಿ ನಡೆಯಲಿದೆ ಎಂದು ಅಭಿನಂದನಾ ಸಮಿತಿಯ ಅಧ್ಯಕ್ಷ ಐಕಳ ಬಾವ ದೇವಿ ಪ್ರಸಾದ್ ಶೆಟ್ಟಿ ಬೆಳಪು ತಿಳಿಸಿದ್ದಾರೆ.
ಆಮಂತ್ರಣ ಪತ್ರ ಬಿಡುಗಡೆ ಸಮಾರಂಭದಲ್ಲಿ ಅಭಿನಂದನಾ ಸಮಿತಿಯ ಗೌರವಾಧ್ಯಕ್ಷ ಮಾಜಿ ಸಚಿವ ಕೆ. ಅಮರನಾಥ ಶೆಟ್ಟಿ, ಕಾರ್ಯಾಧ್ಯಕ್ಷ ಶಶಿಕುಮಾರ್ ರೈ, ಪದಾಧಿಕಾರಿಗಳಾದ ರವಿರಾಜ ಹೆಗ್ಡೆ, ಭಾಸ್ಕರ ಎಸ್.ಕೋಟ್ಯಾನ್, ಸದಾಶಿವ ಉಳ್ಳಾಲ್, ಸವಣೂರು ಸೀತಾರಾಮ ರೈ, ಎಸ್.ಬಿ. ಜಯರಾಮ ರೈ, ರವಿರಾಜ ಹೆಗ್ಡೆ, ಯಶ್ಪಾಲ್ ಸುವರ್ಣ, ಮಾಜಿ ಶಾಸಕ ಪದ್ಮನಾಭ ಕೊಟ್ಟಾರಿ, ಸರಳಾ ಕಾಂಚನ್, ನಿರಂಜನ ಭಾವಂತಬೆಟ್ಟು ಮೊದಲಾದವರು ಉಪಸ್ಥಿತರಿದ್ದರು.