'ಮೆಲ್ಕಾರ್ ಮಹಿಳಾ ಪದವಿ ಪೂರ್ವ - ಪದವಿ ಕಾಲೇಜಿ'ನ ದಶಮಾನೋತ್ಸವ ಸಂಭ್ರಮಾಚರಣೆಗೆ ಚಾಲನೆ

ಬಂಟ್ವಾಳ, ಜ.3: ಮಂಗಳೂರು ಎಜುಕೇಶನ್ ಎನ್ಹ್ಯಾನ್ಸ್ ಮೆಂಟ್ ಟ್ರಸ್ಟ್ನಡಿ ಸಜೀಪ ಮುನ್ನೂರಿನ ಮಾರ್ನಬೈಲ್ನಲ್ಲಿ ಕಾರ್ಯಾಚರಿಸುತ್ತಿರುವ 'ಮೆಲ್ಕಾರ್ ಮಹಿಳಾ ಪದವಿ ಪೂರ್ವ ಹಾಗೂ ಪದವಿ ಕಾಲೇಜಿ'ನ ದಶಮಾನೋತ್ಸವದ ಉದ್ಘಾಟನೆ ಹಾಗೂ ಮೊದಲ ದಿನದ ಕಾರ್ಯಕ್ರಮ ಗುರುವಾರ ಕಾಲೇಜಿನ ವಠಾರದಲ್ಲಿ ನಡೆಯಿತು.
ಶಾಸಕ ರಾಜೇಶ್ ನಾಯ್ಕ್ ಗಿಡಕ್ಕೆ ನೀರುಣಿಸುವ ಮೂಲಕ ಕಾರ್ಯಕ್ರಮವನ್ನು ಉದ್ಘಾಟಿಸಿದರು. ಬಳಿಕ ಮಾತನಾಡಿದ ಅವರು, ಗ್ರಾಮೀಣ ಮಟ್ಟದ ಹೆಣ್ಣು ಮಕ್ಕಳಿಗೆ ಸ್ವತಂತ್ರ ಶಿಕ್ಷಣ ನೀಡುವುದರೊಂದಿಗೆ ಶೈಕ್ಷಣಿಕವಾಗಿ ಉತ್ತಮ ಸಾಧನೆ ಮಾಡಿರುವ ಈ ವಿದ್ಯಾಸಂಸ್ಥೆಯ ಬಗ್ಗೆ ತುಂಬಾ ಸಂತೋಷವಾಗುತ್ತಿದೆ. ಗ್ರಾಮೀಣ ಪ್ರದೇಶದಲ್ಲಿರುವ ಈ ಸಂಸ್ಥೆಯ ಬಗ್ಗೆ ತಿಳಿದುಕೊಳ್ಳಲು ತಡವಾಯಿತು ಎಂದು ಬೇಸರ ವ್ಯಕ್ತಪಡಿಸಿದರು.
ಶಿಕ್ಷಣವು ಕೇವಲ ದುಡಿಯುವ ಸಾಧನವಾಗದೇ ಜ್ಞಾನ, ಸಂಸ್ಕಾರ ಬೆಳೆಸುವ ಹಾಗೂ ಬೆಸೆಯುವ ಕೇಂದ್ರವಾಗಬೇಕು. ಸಮಾಜದಲ್ಲಿ ವಿಫಲ ಅವಕಾಶದೊಂದಿಗೆ ಸಾಕಷ್ಟು ಪೈಪೋಟಿಯು ಕೂಡಾ ಇದೆ. ಇದರೊಂದಿಗೆ ಉತ್ತಮ ಸಮಾಜಕ್ಕಾಗಿ ಕೊಡುಗೆ ನೀಡುವಲ್ಲಿ ಶ್ರಮಿಸಬೇಕಾಗಿದೆ ಎಂದ ಅವರು, ಶಾಸಕನಾಗಿ ಈ ವಿದ್ಯಾಸಂಸ್ಥೆಯ ಅಭಿವೃದ್ಧಿಗಾಗಿ ಸಹಕಾರ ನೀಡುತ್ತೇನೆ ಎಂದರು.
ಕಣ್ಣೂರು ಮತ್ತು ಕ್ಯಾಲಿಕಟ್ ವಿಶ್ವವಿದ್ಯಾನಿಲಯದ ವಿಶ್ರಾಂತ ಉಪಕುಲಪತಿ ಪ್ರೊ.ಎಂ.ಅಬ್ದುಲ್ ರಹಿಮಾನ್ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿ, ಶ್ರದ್ಧೆ, ಶ್ರಮ, ಶಿಸ್ತು, ಸಾಧಿಸುವ ಛಲ ಇದ್ದರೆ ಮಾತ್ರ ಗುರಿ ತಲುಪಲು ಸಾಧ್ಯ. ಇದಕ್ಕಾಗಿ ಓದುವ ಹವ್ಯಾಸವನ್ನು ಹೆಚ್ಚೆಚ್ಚು ರೂಢಿಸಿಕೊಳ್ಳಬೇಕು ಎಂದರು.
ಆಧುನಿಕ ಯುಗದಲ್ಲಿ ತಂತ್ರಜ್ಞಾನದಿಂದ ಅಂಗೈಯಲ್ಲಿ ಎಲ್ಲ ಮಾಹಿತಿ ಲಭ್ಯವಾಗುತ್ತಿದೆ. ಇದು ಒಂದು ಸಾಧನ ಮಾತ್ರ. ಆದರೆ, ಹೆಚ್ಚೆಚ್ಚು ಪುಸ್ತಕ ಓದುವುದರಿಂದ ಜ್ಞಾನ ವೃದ್ಧಿಯ ಜೊತೆಗೆ ಸಂಶೋಧನಾ ಮನೋಭಾವ ಬೆಳೆಯಲು ಸಾಧ್ಯ ಎಂದ ಅವರು, ಬಡತನದಿಂದ ಅದೆಷ್ಟು ಗ್ರಾಮೀಣ ಮಕ್ಕಳು ಶಿಕ್ಷಣದಿಂದ ವಂಚಿರಾಗುತ್ತಿದ್ದಾರೆ. ಈ ವಿಚಾರದಲ್ಲಿ ಹೆಣ್ಣು ಮಕ್ಕಳಿಗೋಸ್ಕರ ಎಸ್.ಎಂ.ರಶೀದ್ ಹಾಜಿ ವಿದ್ಯಾ ಸಂಸ್ಥೆಯನ್ನು ಸ್ಥಾಪಿಸಿರುವುದು ಅಭಿನಂದನೀಯ ಎಂದರು.
ಮಂಗಳೂರು ವಿಶ್ವವಿದ್ಯಾನಿಲಯದ ಉಪಕುಲಪತಿ ಪ್ರೊ.ಈಶ್ವರ್ಮು ಖ್ಯ ಅತಿಥಿಗಳಾಗಿ ಭಾಗವಹಿಸಿ ಮಾತನಾಡಿ, ಕಳೆದ 10 ವರ್ಷಗಳಿಂದ ಗ್ರಾಮೀಣ ಹೆಣ್ಣು ಮಕ್ಕಳನ್ನು ಗುರಿಯಾಗಿಸಿಕೊಂಡು ಗುಣಮಟ್ಟ ಹಾಗೂ ಮೌಲ್ಯಯುತ ಶಿಕ್ಷಣವನ್ನು ನೀಡುವುದರೊಂದಿಗೆ ವಿದ್ಯಾರ್ಥಿನಿಯರ ಸಂಖ್ಯೆ ಹೆಚ್ಚಿಸುತ್ತಾ ಬಂದಿದ್ದು, ಈ ಸಂಸ್ಥೆಯು ಮುಂದೆಯು ಶೈಕ್ಷಣಿಕವಾಗಿ ಗುರುತಿಸಿಕೊಳ್ಳಲಿ ಎಂದು ಹಾರೈಸಿದರು.
ವೇದಿಕೆಯಲ್ಲಿ ಎಕೆ ಗ್ರೂಪ್ ಆಫ್ ಕಂಪೆನಿಯ ಎಂ.ಡಿ. ಎ.ಕೆ.ನಿಯಾಝ್, ಅಬ್ದುಲ್ ಸಮದ್ ಸಿಎ, ಅಬ್ದುಲ್ ಅಝೀಝ್ ಅಡ್ವಕೇಟ್, ರಿಫಾಝ್ ಅಹ್ಮದ್ ಉಪಸ್ಥಿತರಿದ್ದರು.
ಮಂಗಳೂರು ಎಜುಕೇಶನ್ ಎನ್ಹ್ಯಾನ್ಸ್ ಮೆಂಟ್ ಟ್ರಸ್ಟ್ ಅಧ್ಯಕ್ಷ ಎಸ್.ಎಂ.ರಶೀದ್ ಹಾಜಿ ಸಂಸ್ಥೆ ನಡೆದು ಬಂದ ಹಾದಿಯ ಬಗ್ಗೆ ಪ್ರಾಸ್ತಾವಿಕವಾಗಿ ಮಾತನಾಡಿ ಸ್ವಾಗತಿಸಿದರು.
ಕಾಲೇಜು ಪ್ರಾಂಶುಪಾಲ ಅಬ್ದುಲ್ಲತೀಫ್ ವಾರ್ಷಿಕ ವರದಿ ಮಂಡಿಸಿದರು. ಉಪ ಪ್ರಾಂಶುಪಾಲೆ ಸುನೀತಾ ಬಹುಮಾನ ವಿಜೇತರ ಪಟ್ಟಿ ವಾಚಿಸಿದರು. ಇದೇ ವೇಳೆ ಮುಖ್ಯ ಅತಿಥಿಗಳಿಗೆ ದಶಮಾನೋತ್ಸವದ ಸ್ಮರಣಿಕೆ ನೀಡಿ ಗೌರವಿಸಲಾಯಿತು. ಕಳೆದ ಸಾಲಿನಲ್ಲಿ ಹೆಚ್ಚು ಅಂಕ ಗಳಿಸಿದ ವಿದ್ಯಾರ್ಥಿಗಳಿಗೆ ಬಹುಮಾನಗಳನ್ನು ವಿತರಿಸಲಾಯಿತು.
ವಿದ್ಯಾರ್ಥಿಗಳಾದ ಫಝೀನಾ, ತಂಶೀರಾ ಕಿರಾಅತ್ ಪಠಿಸಿದರು. ಲುತ್ಫಾ ವಂದಿಸಿದರು. ಫಾತಿಮಾ ಸುಹಾನ ಕಾರ್ಯಕ್ರಮ ನಿರೂಪಿಸಿದರು.