ಮುಂದಿನ ಸಾಹಿತ್ಯ ಸಮ್ಮೇಳನ ಕಲಬುರ್ಗಿಯಲ್ಲಿ: ಜಿಲ್ಲಾ ಉಸ್ತುವಾರಿ ಸಚಿವ ಪ್ರಿಯಾಂಕ್ ಖರ್ಗೆ ಹರ್ಷ

ಬೆಂಗಳೂರು, ಜ. 6: ಎಂಭತ್ತೈದನೆ ಅಖಿಲ ಭಾರತ ಸಾಹಿತ್ಯ ಸಮ್ಮೇಳನ ಕಲಬುರಗಿ ಜಿಲ್ಲೆಯಲ್ಲಿ ನಡೆಸಲು ಕನ್ನಡ ಸಾಹಿತ್ಯ ಪರಿಷತ್ ಕೇಂದ್ರ ಕಾರ್ಯಕಾರಿ ಸಮಿತಿ ತೀರ್ಮಾನಿಸಿದೆ.
85ನೇ ಅಖಿಲ ಭಾರತ ಸಾಹಿತ್ಯ ಸಮ್ಮೇಳನ ಕಲಬುರಗಿ ಜಿಲ್ಲೆಯನ್ನು ಆಯ್ಕೆಗೆ ಸಮಾಜಕಲ್ಯಾಣ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಪ್ರಿಯಾಂಕ್ ಖರ್ಗೆ ಹರ್ಷ ವ್ಯಕ್ತಪಡಿಸಿದ್ದು, ಕಲಬುರಗಿಯನ್ನು ಆಯ್ಕೆ ಮಾಡಿರುವುದಕ್ಕೆ ಕಸಾಪ ಕೇಂದ್ರ ಸಮಿತಿಯ ಅಧ್ಯಕ್ಷ ಮನು ಬಳಿಗಾರ ಹಾಗೂ ಸಮಿತಿಯ ಸದಸ್ಯರಿಗೆ ಧನ್ಯವಾದಗಳನ್ನು ತಿಳಿಸಿದ್ದಾರೆ.
ಪ್ರಸ್ತುತ ಧಾರವಾಡದಲ್ಲಿ ನಡೆಯುತ್ತಿರುವ 84ನೆ ಕನ್ಮಡ ಸಾಹಿತ್ಯ ಸಮ್ಮೇಳನದ ಎರಡನೆ ದಿನದಂದು ನಡೆದ ಕಾರ್ಯಕಾರಣಿ ಸಮಿತಿಯಲ್ಲಿ 85ನೆ ಸಮ್ಮೇಳನವನ್ನು ಕಲಬುರಗಿಯಲ್ಲಿ ನಡೆಸಲು ತೀರ್ಮಾಸಲಾಗಿದೆ. ಕಲಬುರಗಿ ಜಿಲ್ಲೆ ಕನ್ನಡನಾಡಿಗೆ ಹಿರಿಮೆ ತಂದುಕೊಟ್ಟ ಕನ್ನಡದ ಮೊಟ್ಟ ಮೊದಲ ಗ್ರಂಥ ಕವಿರಾಜಮಾರ್ಗ ರಚಿತವಾದ ಕನ್ನಡದ ಸೊಗಡಿನ ನೆಲವಾಗಿದ್ದು, ಕನ್ನಡದ ಹೆಮ್ಮೆಯ ಸಮ್ಮೇಳನವನ್ನು ನಡೆಸಲು ಕಲಬುರಗಿಯನ್ನು ಆಯ್ಕೆ ಮಾಡಿಕೊಂಡಿದ್ದು ಸೂಕ್ತ ಹಾಗೂ ಸಮಯೋಚಿತ ಎಂದು ಬಣ್ಣಿಸಿದ್ದಾರೆ. ಲೋಕಸಭೆ ಕಾಂಗ್ರೆಸ್ ನಾಯಕ ಎಂ.ಮಲ್ಲಿಕಾರ್ಜುನ ಖರ್ಗೆ ಅವರ ಒತ್ತಾಸೆಯ ಮೇರೆಗೆ, ಅವರ ಆಶಯಕ್ಕೆ ಸ್ಪಂದಿಸಿ ಸಾಹಿತ್ಯ ಸಮ್ಮೇಳನವನ್ನು ಕಲಬುರಗಿಗೆ ತರುವಲ್ಲಿ ಪ್ರಮುಖ ಪಾತ್ರವಹಿಸಿದ ಜಿಲ್ಲಾ ಕಸಾಪ ಅಧ್ಯಕ್ಷ ವೀರಭದ್ರ ಸಿಂಪಿ ಮತ್ತು ಪರಿಷತ್ನ ಇತರೆ ಗೌರವಾನ್ವಿತ ಸದಸ್ಯರು, ಲೇಖಕರು, ಸಾಹಿತಿಗಳು, ಬರಹಗಾರರು ಹಾಗೂ ಕನ್ಮಡಾಭಿಮಾನಿಗಳು ಈ ಸಂದರ್ಭದಲ್ಲಿ ಅಭಿನಂದನಾರ್ಹರು.
ಸಾಹಿತ್ಯ ಸಮ್ಮೇಳನವನ್ನು ಅತ್ಯಂತ ವಿಜೃಂಭಣೆಯಿಂದ ಹಾಗೂ ಅರ್ಥಪೂರ್ಣವಾಗಿ ನಡೆಸಲು ಕಲಬುರಗಿ ಜಿಲ್ಲೆಯ ಎಲ್ಲ ಸಾಹಿತ್ಯಾಸಕ್ತರು, ಕನ್ನಡಾಭಿಮಾನಿಗಳು, ಬರಹಗಾರರು ಹಾಗೂ ಸಂಘ-ಸಂಸ್ಥೆಗಳು ಮುಕ್ತ ಮನಸಿನಿಂದ ಕೈಜೋಡಿಸಿ ರಾಷ್ಟ್ರಕೂಟರ ನಾಡಿನ ಕೀರ್ತಿಯನ್ನು ರಾಷ್ಟ್ರಕ್ಕೆ ಹಾಗೂ ಹೊರರಾಷ್ಟ್ರಕ್ಕೆ ತಲುಪಿಸಬೇಕು ಎಂದು ಪ್ರಿಯಾಂಕ್ ಖರ್ಗೆ ಪ್ರಕಟಣೆಯಲ್ಲಿ ಕೋರಿದ್ದಾರೆ.





