ಹಿಂದಿ ಕಡ್ಡಾಯಕ್ಕೆ ಹೆಚ್ಚಿನ ಮಹತ್ವ ನೀಡುವ ಅಗತ್ಯವಿಲ್ಲ: ಸಿಎಂ
![ಹಿಂದಿ ಕಡ್ಡಾಯಕ್ಕೆ ಹೆಚ್ಚಿನ ಮಹತ್ವ ನೀಡುವ ಅಗತ್ಯವಿಲ್ಲ: ಸಿಎಂ ಹಿಂದಿ ಕಡ್ಡಾಯಕ್ಕೆ ಹೆಚ್ಚಿನ ಮಹತ್ವ ನೀಡುವ ಅಗತ್ಯವಿಲ್ಲ: ಸಿಎಂ](https://www.varthabharati.in/sites/default/files/images/articles/2019/01/10/172129.jpg)
ಬೆಂಗಳೂರು, ಜ.10: ಕೇಂದ್ರ ಸರಕಾರ ಹಿಂದಿ ಕಡ್ಡಾಯ ಮಾಡಲು ಮುಂದಾಗಿರುವುದಕ್ಕೆ ಹೆಚ್ಚಿನ ಮಹತ್ವ ನೀಡುವ ಅಗತ್ಯವಿಲ್ಲ ಎಂದು ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ತಿಳಿಸಿದ್ದಾರೆ.
ಗುರುವಾರ ನಗರದ ನಿಮ್ಹಾನ್ಸ್ ಸಭಾಂಗಣದಲ್ಲಿ ನ್ಯಾಯ ವಿಜ್ಞಾನ ಪ್ರಯೋಗಾಲಯಗಳ ನಿರ್ದೇಶನಾಲಯದ ವತಿಯಿಂದ ಆಯೋಜಿಸಿದ್ದ ‘ನ್ಯಾಯ ವಿಜ್ಞಾನದಲ್ಲಿ ಉದಯೋನ್ಮುಖ ಬೆಳವಣಿಗೆಗಳು’ ಕುರಿತ ರಾಷ್ಟ್ರೀಯ ಸಮ್ಮೇಳನವನ್ನು ಉದ್ಘಾಟಿಸಿದ ಬಳಿಕ ಮಾಧ್ಯಮದೊಂದಿಗೆ ಮಾತನಾಡಿದ ಅವರು, ಚುನಾವಣೆ ಸಮೀಪಿಸುತ್ತಿರುವುದರಿಂದ ಮತದಾರರನ್ನು ಸೆಳೆಯಲು ಹಲವಾರು ಯೋಜನೆಗಳನ್ನು ಜಾರಿ ಮಾಡಲು ಮುಂದಾಗಿದೆ. ಅದಕ್ಕೆ ಹೆಚ್ಚಿನ ಕಿಮ್ಮತ್ತು ನೀಡುವ ಅಗತ್ಯವಿಲ್ಲ ಎಂದರು.
ಜೆಡಿಎಸ್ ನಾಯಕರ ಮೇಲೆ ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ವಾಗ್ದಾಳಿ ನಡೆಸಿರುವ ಕುರಿತು ಮಾಧ್ಯಮದವರು ಕೇಳಿದ ಪ್ರಶ್ನೆಗೆ ಉತ್ತರಿಸಿದ ಮುಖ್ಯಮಂತ್ರಿ, ಅವರು ಜೆಡಿಎಸ್ ಪಕ್ಷದಲ್ಲಿದ್ದ ಸಂದರ್ಭದಲ್ಲಿ ಬಿಜೆಪಿ ನಾಯಕರ ಮೇಲೂ ದಿನನಿತ್ಯ ವಾಗ್ದಾಳಿ ನಡೆಸುತ್ತಿದ್ದರು. ಅವರ ಮಾತುಗಳಿಗೆ ಹೆಚ್ಚಿನ ಒತ್ತು ನೀಡುವುದಿಲ್ಲ ಎಂದು ತಿಳಿಸಿದರು.
ಜೆಡಿಎಸ್ ಹಾಗೂ ಕಾಂಗ್ರೆಸ್ ಸಮ್ಮಿಶ್ರ ಸರಕಾರ ಸುಭದ್ರವಾಗಿ ನಡೆಯುತ್ತಿದೆ. ಶಾಸಕಾಂಗ ಸಭೆಯಲ್ಲಿ ಯಾವುದೇ ಗೊಂದಲ, ಅಸಮಾಧಾನ ಇಲ್ಲ. ಆದರೂ, ಕೆಲ ಮಾಧ್ಯಮಗಳು ಗೊಂದಲ ಸೃಷ್ಟಿಸಿ ಸುದ್ದಿಯನ್ನು ಬಿತ್ತರಿಸುತ್ತಿವೆ ಎಂದು ಮಾಧ್ಯಮಗಳನ್ನು ಆಪಾದಿಸಿದರು.