ಫೆ.5 ರಂದು ಬಿಜೆಪಿ ತುರ್ತು ಶಾಸಕಾಂಗ ಪಕ್ಷದ ಸಭೆ
![ಫೆ.5 ರಂದು ಬಿಜೆಪಿ ತುರ್ತು ಶಾಸಕಾಂಗ ಪಕ್ಷದ ಸಭೆ ಫೆ.5 ರಂದು ಬಿಜೆಪಿ ತುರ್ತು ಶಾಸಕಾಂಗ ಪಕ್ಷದ ಸಭೆ](https://www.varthabharati.in/sites/default/files/images/articles/2019/02/4/176237.jpg)
ಬೆಂಗಳೂರು, ಫೆ.4: ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್.ಯಡಿಯೂರಪ್ಪ ಮಂಗಳವಾರ ಮಧ್ಯಾಹ್ನ ಪಕ್ಷದ ಕಚೇರಿಯಲ್ಲಿ ತುರ್ತು ಶಾಸಕಾಂಗ ಪಕ್ಷದ ಸಭೆ ಕರೆದಿದ್ದು, ಎಲ್ಲ ಶಾಸಕರು ಕಡ್ಡಾಯವಾಗಿ ಸಭೆಯಲ್ಲಿ ಪಾಲ್ಗೊಳ್ಳಬೇಕು ಎಂದು ಸೂಚನೆ ನೀಡಿದ್ದಾರೆ.
ಇಂದು ಸಂಜೆ ಪಕ್ಷದ ಕೋರ್ ಕಮಿಟಿ ಸಭೆ ನಡೆಯುವ ಹಿನ್ನೆಲೆಯಲ್ಲಿ, ಅದಕ್ಕೂ ಮೊದಲು ಪಕ್ಷದ ಶಾಸಕಾಂಗ ಸಭೆ ಕರೆದಿರುವುದು ಕುತೂಹಲ ಮೂಡಿಸಿದೆ. ಸಭೆಗೆ ಹಲವು ರಾಷ್ಟ್ರೀಯ ಮುಖಂಡರು ಪಾಲ್ಗೊಳ್ಳಲಿದ್ದು, ಈ ಸಭೆ ಮತ್ತಷ್ಟು ಮಹತ್ವ ಪಡೆದುಕೊಂಡಿದೆ.
ಫೆ.6 ರಿಂದ ಬಜೆಟ್ ಅಧಿವೇಶನ ಆರಂಭವಾಗುವ ಹಿನ್ನೆಲೆಯಲ್ಲಿ ಶಾಸಕಾಂಗ ಪಕ್ಷದ ಸಭೆ ಕರೆಯಲಾಗಿದೆ. ಬಿಜೆಪಿ ರಾಷ್ಟ್ರೀಯ ಸಂಘಟನಾ ಕಾರ್ಯದರ್ಶಿ ರಾಮ್ ಲಾಲ್ ಬೆಂಗಳೂರಿಗೆ ಆಗಮಿಸಲಿದ್ದು, ಕೋರ್ ಕಮಿಟಿ ಸಭೆಯಲ್ಲಿ ಪಾಲ್ಗೊಳ್ಳಲಿದ್ದಾರೆ.
ರಾಜ್ಯದಲ್ಲಿ ಆಪರೇಷನ್ ಕಮಲದ ಬೆಳವಣಿಗೆಗಳು ನಡೆಯುತ್ತಿವೆ ಎಂಬ ಸುದ್ದಿಯ ನಡುವೆಯೇ ಶಾಸಕಾಂಗ ಪಕ್ಷದ ಸಭೆ ಕರೆದಿರುವುದು ಕುತೂಹಲಕ್ಕೆ ಕಾರಣವಾಗಿದೆ. ಅಲ್ಲದೆ, ಮತ್ತೊಂದು ಬಾರಿ ಬಿಜೆಪಿ ಶಾಸಕರು ರೆಸಾರ್ಟ್ಗೆ ತೆರಳಿದ್ದಾರೆಯೇ ಎಂಬ ಪ್ರಶ್ನೆಗಳು ಎದುರಾಗಿದೆ.