‘ಕರ್ನಾಟಕದಲ್ಲಿ ಬಂಡವಾಳ ಹೂಡಿಕೆಗೆ ಜಪಾನ್ ಆಸಕ್ತಿ’
ಬೆಂಗಳೂರು, ಫೆ.5: ಹೊಸದಿಲ್ಲಿಯಲ್ಲಿರುವ ಜಪಾನ್ ದೇಶದ ರಾಯಭಾರಿ ಕೆಂಜಿ ಹಿರಾಮತ್ಸು ನೇತೃತ್ವದ ನಿಯೋಗವು ಮಂಗಳವಾರ ವಿಧಾನಸೌಧದಲ್ಲಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿಯನ್ನು ಭೇಟಿ ಮಾಡಿತು.
ಬೆಂಗಳೂರಿನ ಪೆರಿಫೆರಲ್ ರಿಂಗ್ರೋಡ್, ಎಲಿವೇಟೆಡ್ ಕಾರಿಡಾರ್ ಹಾಗೂ ಮೆಟ್ರೋ ಯೋಜನೆಗಳ ಅನುಷ್ಠಾನ ಹಾಗೂ ನಿರ್ವಹಣೆಯ ಬಗ್ಗೆ ಆಸಕ್ತಿ ಮತ್ತು ಮೆಚ್ಚುಗೆ ವ್ಯಕ್ತಪಡಿಸಿದ ರಾಯಭಾರಿ, ಬೆಂಗಳೂರಿನಲ್ಲಿ ಜಪಾನಿನ ಅನೇಕ ಕಂಪನಿಗಳು ಕಾರ್ಯನಿರ್ವಹಿಸುತ್ತಿದ್ದು, ಇಲ್ಲಿನ ಕೈಗಾರಿಕಾ ಸ್ನೇಹಿ ವಾತಾವರಣಕ್ಕೆ ರಾಜ್ಯ ಸರಕಾರಕೆ್ಕ ಅಭಿನಂದನೆಗಳನ್ನು ಸಲ್ಲಿಸಿದರು.
ಸರಕಾರ ತುಮಕೂರಿನ ವಸಂತ ನರಸಾಪುರದಲ್ಲಿ ಅಭಿವೃದ್ಧಿಪಡಿಸುತ್ತಿರುವ ಜಪಾನಿ ಕೈಗಾರಿಕಾ ಪ್ರದೇಶದಲ್ಲಿ ಜಪಾನಿನ ವಿವಿಧ ಕಂಪನಿಗಳು ಹೂಡಿಕೆ ಮಾಡಲು ಉತ್ಸುಕವಾಗಿದೆ ಎಂದು ಕೆಂಜಿ ಹಿರಾಮತ್ಸು ತಿಳಿಸಿದರು.
ರಾಜ್ಯ ಸರಕಾರದ ಅನೇಕ ಪ್ರಗತಿ ಯೋಜನೆಗಳಲ್ಲಿ ಜಪಾನ್ ದೇಶದ ಸಹಭಾಗಿತ್ವವಿದೆ ಎಂದ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ, ತುಮಕೂರಿನಲ್ಲಿ ಜಪಾನಿ ಕೈಗಾರಿಕಾ ಪ್ರದೇಶಕ್ಕಾಗಿ 519.55 ಎಕರೆ ಪ್ರದೇಶವನ್ನು ಮೀಸಲಿಟ್ಟಿದ್ದು, ಇಲ್ಲಿತಲೆ ಎತ್ತಲಿರುವ ಈ ಕೈಗಾರಿಕಾ ನಗರ, ಚೆನ್ನೈ-ಬೆಂಗಳೂರು ಕೈಗಾರಿಕಾ ಕಾರಿಡಾರಿನ ಪ್ರಮುಖ ಭಾಗವಾಗಲಿದೆ ಎಂದರು.
ಇಲ್ಲಿ ಭಾರಿ ಇಂಜಿನಿಯರಿಂಗ್ ಮತ್ತು ಯಂತ್ರೋಪಕರಣಗಳು, ಆಟೋಮೇಟಿವ್ ಮತ್ತು ಆಟೋ ಬಿಡಿಭಾಗಗಳು ಹಾಗೂ ಏರೋ ಸ್ಪೇಸ್ ಬಿಡಿಭಾಗಗಳನ್ನು ಉತ್ಪಾದಿಸುವ ಘಟಕಗಳನ್ನು ಸ್ಥಾಪಿಸಲಾಗುವುದು. ಕೈಗಾರಿಕಾ ಪ್ರದೇಶದಲ್ಲಿ ಮೂಲಭೂತ ಸೌಕರ್ಯಗಳಾದ ಕಾಂಕ್ರೀಟ್ ರಸ್ತೆ, ಒಳಚರಂಡಿ ವ್ಯವಸ್ಥೆ ಸೇರಿದಂತೆ ನೀರು ಸಂಸ್ಕರಣಾ ಘಟಕ, ವಿದ್ಯುತ್ ಉಪ ಕೇಂದ್ರ ಸ್ಥಾಪನೆ, ನೀರು ಸರಬರಾಜು ಮುಂತಾದ ಕಾಮಗಾರಿಗಳು ಪ್ರತಿಯಲ್ಲಿವೆ ಎಂದು ಅವರು ತಿಳಿಸಿದರು.
ಈ ಸಂದರ್ಭದಲ್ಲಿ ಭಾರಿ ಮತ್ತು ಮಧ್ಯಮ ಕೈಗಾರಿಕೆ ಸಚಿವ ಕೆ.ಜೆ.ಜಾರ್ಜ್, ಜಪಾನ್ ರಾಯಭಾರಿ ಕಚೇರಿಯ ಪ್ರಥಮ ಕಾರ್ಯದರ್ಶಿ ಉತೇಕ್, ಬೆಂಗಳೂರಿನಲ್ಲಿರುವ ಜಪಾನಿನ ಕೌನ್ಸಲ್ ಜನರಲ್ ತಕಯುಕಿ ಕಿತಗಾವ, ವೈಸ್ ಕೌನ್ಸಲ್ ಮಿತ್ಸುಹಿರೊ ಅಮಾವ್, ಮುಖ್ಯಮಂತ್ರಿಗಳ ಅಪರ ಮುಖ್ಯಕಾರ್ಯದರ್ಶಿ ಡಾ.ಇ.ವಿ.ರಮಣರೆಡ್ಡಿ, ಕೈಗಾರಿಕಾ ಇಲಾಖೆ ಪ್ರಧಾನ ಕಾರ್ಯದರ್ಶಿ ಗೌರವ್ ಗುಪ್ತಾ, ಬೆಂಗಳೂರು ನೀರು ಸರಬರಾಜು ಮತ್ತು ಒಳಚರಂಡಿ ಮಂಡಳಿ ಅಧ್ಯಕ್ಷ ಹಾಗೂ ವ್ಯವಸ್ಥಾಪಕ ನಿರ್ದೇಶ ತುಷಾರ್ ಗಿರಿನಾಥ್ ಉಪಸ್ಥಿತರಿದ್ದರು.







