‘ಪಡಿತರ ಚೀಟಿ: ಸುಳ್ಳು ಮಾಹಿತಿ ನೀಡಿದವರ ವಿರುದ್ಧ ಕ್ರಮ’
ಮಂಗಳೂರು, ಫೆ.12: ತಪ್ಪು ಮಾಹಿತಿಯನ್ನು ನೀಡಿ ಬಿಪಿಎಲ್/ಅಂತ್ಯೋದಯ ಪಡಿತರ ಚೀಟಿಗಳನ್ನು ಹೊಂದಿರುವ ಬಗ್ಗೆ ತನಿಖೆ ನಡೆಸಲಾಗುತ್ತಿದ್ದು, ಇಂತಹ ಪಡಿತರ ಚೀಟಿದಾರರು ಸ್ವಯಂ ಪ್ರೇರಿತರಾಗಿ ತಾಲೂಕು ಕಚೇರಿಯ ಆಹಾರ ಶಾಖೆಗೆ ಪಡಿತರ ಚೀಟಿಗಳ ಮಾಹಿತಿ ನೀಡಬೇಕು. ತಪ್ಪಿದಲ್ಲಿ ಸಂಬಂಧಪಟ್ಟವರ ವಿರುದ್ದ ಕ್ರಮ ಕೈಗೊಳ್ಳಲಾಗುವುದು ಎಂದು ಮಂಗಳೂರು ತಾಲೂಕಿನ ತಹಶೀಲ್ದಾರರು ತಿಳಿಸಿದ್ದಾರೆ.
ತಾಲೂಕಿನಲ್ಲಿರುವ ಬಿಪಿಎಲ್(ಆದ್ಯತಾ ಪಡಿತರ ಚೀಟಿ) ಪಡಿತರ ಚೀಟಿಗಳ ಪಟ್ಟಿಯನ್ನು ಗಮನಿಸಿದಾಗ ಬಿಪಿಎಲ್ ಪಡಿತರ ಚೀಟಿ ಹೊಂದಲು ಅನರ್ಹರಾಗಿರುವ ಕುಟುಂಬಗಳು ತನಿಖಾ ಸಮಯದಲ್ಲಿ ಸುಳ್ಳು ಮಾಹಿತಿ ನೀಡಿ/ಇಲಾಖಾ ಮಾನದಂಡಗಳನ್ನು ಮರೆಮಾಚಿ ಬಿಪಿಎಲ್ ಪಡಿತರ ಚೀಟಿಗಳನ್ನು ಪಡೆದುಕೊಂಡಿರುವುದು ಕಂಡುಬಂದಿದೆ.
ಜೀವನೋಪಾಯಕ್ಕಾಗಿ ಸ್ವತಃ ಓಡಿಸುವ ಒಂದು ವಾಣಿಜ್ಯ ವಾಹನ (ಟ್ರಾಕ್ಟರ್, ಮ್ಯಾಕ್ಸಿಕ್ಯಾಬ್, ಟ್ಯಾಕ್ಸಿ) ಹೊಂದಿದ ಕುಟುಂಬವನ್ನು ಹೊರತುಪಡಿಸಿ ನಾಲ್ಕು ಚಕ್ರದ ಬಿಳಿ ಬೋರ್ಡ್ನ ವಾಹನವನ್ನು ಹೊಂದಿರುವುದು, ಕುಟುಂಬದಲ್ಲಿ ಸರಕಾರಿ ನೌಕರಿದಾರರು ಇರುವುದು, ಆದಾಯ ತೆರಿಗೆ ಪಾವತಿಸುವ ಕುಟುಂಬಗಳು, ಒಂದೇ ಮನೆಯಲ್ಲಿ ವಾಸವಿದ್ದು ಒಂದಕ್ಕಿಂತ ಹೆಚ್ಚು ಪಡಿತರ ಚೀಟಿಗಳನ್ನು ಹೊಂದಿರುವುದು, 7.5 ಎಕರೆಗಿಂತ ಹೆಚ್ಚಿನ ‘ಡಿ’ ವರ್ಗದ ಅಥವಾ ತತ್ಸಮಾನ ಭೂಮಿ ಹೊಂದಿರುವುದು, ವಾರ್ಷಿಕ 1,20,000 ಕ್ಕಿಂತ ಹೆಚ್ಚು ಆದಾಯ ಹೊಂದಿರುವ ಕುಟುಂಬಗಳು, ನಗರ ಪ್ರದೇಶದಲ್ಲಿ 1,000 ಚದರ ಅಡಿಗಿಂತ ಹೆಚ್ಚು ವಿಸ್ತೀರ್ಣದ ಪಕ್ಕಾ ಮನೆಯನ್ನು ಹೊಂದಿರುವ ಕುಟುಂಬಗಳು, ಮರಣ ಹೊಂದಿರುವ ಹೆಸರನ್ನು ಪಡಿತರ ಚೀಟಿಯಿಂದ ತೆಗೆಯದೇ ಇರುವುದು/ ಪಡಿತರ ಚೀಟಿಯನ್ನು ರದ್ದುಗೊಳಿಸದೇ ಇರುವಂತಹ ಅಂಶಗಳಿಗೆ ಒಳಪಡುವ ಕುಟುಂಬಗಳು ಫೆ.25ರೊಳಗೆ ಸ್ವಯಂ ಪ್ರೇರಿತವಾಗಿ ತಾಲೂಕು ಕಚೇರಿಗೆ ಮಾಹಿತಿ ನೀಡಬೇಕು ಎಂದು ಮಂಗಳೂರು ತಹಶೀಲ್ದಾರರು ಪ್ರಕಟನೆಯಲ್ಲಿ ತಿಳಿಸಿದ್ದಾರೆ.







