ಸಫಾಯಿ ಕರ್ಮಚಾರಿ ಆಯೋಗದ ಅನುದಾನ ಬಳಕೆಯಲ್ಲಿ ನಿರ್ಲಕ್ಷ್ಯ: ಜಗದೀಶ್ ಹಿರೇಮನಿ
![ಸಫಾಯಿ ಕರ್ಮಚಾರಿ ಆಯೋಗದ ಅನುದಾನ ಬಳಕೆಯಲ್ಲಿ ನಿರ್ಲಕ್ಷ್ಯ: ಜಗದೀಶ್ ಹಿರೇಮನಿ ಸಫಾಯಿ ಕರ್ಮಚಾರಿ ಆಯೋಗದ ಅನುದಾನ ಬಳಕೆಯಲ್ಲಿ ನಿರ್ಲಕ್ಷ್ಯ: ಜಗದೀಶ್ ಹಿರೇಮನಿ](https://www.varthabharati.in/sites/default/files/images/articles/2019/02/26/179700.jpg)
ಬೆಂಗಳೂರು, ಫೆ.26: ಸಫಾಯಿ ಕರ್ಮಚಾರಿ ಆಯೋಗದಲ್ಲಿರುವ 120 ಕೋಟಿ ರೂ.ಗಳಲ್ಲಿ ಕಳೆದ ಎರಡು ವರ್ಷಗಳಿಂದ ಒಂದೇ ಒಂದು ರೂಪಾಯಿಯನ್ನು ರಾಜ್ಯ ಸರಕಾರ ಬಳಕೆ ಮಾಡಿಲ್ಲ ಎಂದು ರಾಷ್ಟ್ರೀಯ ಸಫಾಯಿ ಕರ್ಮಚಾರಿಗಳ ಆಯೋಗದ ಸದಸ್ಯ ಜಗದೀಶ್ ಹಿರೇಮನಿ ಆರೋಪಿಸಿದರು.
ಮಂಗಳವಾರ ವಿಧಾನಸೌಧದಲ್ಲಿ ಸುದ್ದಿಗೋಷ್ಠಿಯನ್ನುದ್ದೇಶಿಸಿ ಮಾತನಾಡಿದ ಅವರು, 120 ಕೋಟಿ ರೂ.ಗಳಲ್ಲಿ ಕೇಂದ್ರ ಸರಕಾರದ್ದು 70 ಕೋಟಿ ರೂ. ಹಾಗೂ ರಾಜ್ಯ ಸರಕಾರದ 50 ಕೋಟಿ ರೂ.ಗಳು ಸೇರಿವೆ. ಈ ಅನುದಾನವನ್ನು ಸರಕಾರ ರೈತರ ಸಾಲ ಮನ್ನಾ ಯೋಜನೆಗೆ ಬಳಸಿಕೊಂಡಿದೆ ಎಂಬ ಆರೋಪ ಕೇಳಿ ಬಂದಿದೆ ಎಂದರು.
ಸಫಾಯಿ ಕರ್ಮಚಾರಿಗಳ ಪರವಾಗಿರುವ ಕಾರ್ಯಕ್ರಮಗಳ ಅನುಷ್ಠಾನದಲ್ಲಿ ಕರ್ನಾಟಕವು ದೇಶದ ಇತರ ರಾಜ್ಯಗಳಿಗಿಂತ ಮುಂಚೂಣಿಯಲ್ಲಿದೆ. ಆದರೆ, ಸಫಾಯಿ ಕರ್ಮಚಾರಿಗಳ ಕಲ್ಯಾಣಕ್ಕಾಗಿ ಜಾರಿಗೆ ತರುವ ಯೋಜನೆಗಳನ್ನು ಸಮರ್ಪಕವಾಗಿ ಬಳಸಿಕೊಳ್ಳುವುದರಲ್ಲಿ ಹಿಂದೆ ಬಿದ್ದಿದೆ ಎಂದು ಅವರು ದೂರಿದರು.
ರಾಜ್ಯದಲ್ಲಿ ಮಲದ ಗುಂಡಿಗೆ ಮನುಷ್ಯರನ್ನು ಇಳಿಸಿ ಸ್ವಚ್ಛಗೊಳಿಸುವ ಪದ್ಧತಿ ಇನ್ನೂ ಜೀವಂತವಾಗಿದ್ದು, ನಾವು ಸಮೀಕ್ಷೆ ಮಾಡಿದ ಆರು ಜಿಲ್ಲೆಗಳಲ್ಲಿ ಸಾವಿರಕ್ಕೂ ಹೆಚ್ಚು ಜನ ಸಿಕ್ಕಿದ್ದಾರೆ. ರಾಜ್ಯದಲ್ಲಿ ಸುಮಾರು 10 ಸಾವಿರ ಮಂದಿ ಈ ಕಾಯಕ ಮಾಡುವವರು ಇರಬಹುದು ಎಂದು ಅಂದಾಜಿಸಲಾಗಿದೆ ಎಂದು ಜಗದೀಶ್ ಹಿರೇಮನಿ ತಿಳಿಸಿದರು.
2018ಕ್ಕೂ ಹಿಂದೆ ನಾವು ಸಮೀಕ್ಷೆ ಮಾಡಿದಾಗ 788 ಜನ ಸಿಕ್ಕಿದ್ದರೂ, ಇವರಿಗೆ ಪುನರ್ವಸತಿ ಕಲ್ಪಿಸಲಾಗಿದೆ. ಒಳಚರಂಡಿ ಸ್ವಚ್ಛತಾ ಕಾರ್ಯ ಮಾಡುವ ಸಫಾಯಿ ಕರ್ಮಚಾರಿಗಳಿಗೆ ಯಂತ್ರೋಪಕರಣ ನೀಡಬೇಕು, ಯಂತ್ರೋಪಕರಣ ಬಳಸದೆ ಇರುವುದು ಸಾವಿನ ಪ್ರಮಾಣ ಹೆಚ್ಚಲು ಪ್ರಮುಖ ಕಾರಣವಾಗಿದೆ ಎಂದು ಅವರು ಹೇಳಿದರು.
ತಮಿಳುನಾಡಿನಲ್ಲಿ ಸಫಾಯಿ ಕರ್ಮಚಾರಿಗಳ ಸಾವಿನ ಸಂಖ್ಯೆ ಹೆಚ್ಚಿದೆ. ಸ್ವಚ್ಛತಾ ಕಾರ್ಯದಲ್ಲಿ ಯಂತ್ರೋಪಕರಣ ಬಳಸುವುದರಿಂದ ಸಾವಿನ ಪ್ರಮಾಣ ಕಡಿಮೆ ಮಾಡಬಹುದು. ಸಫಾಯಿ ಕರ್ಮಚಾರಿಗಳಿಗೆ ಸರಕಾರದಿಂದ ಸಿಗಬೇಕಾದ ಸೌಲಭ್ಯಗಳು ಸಿಗುತ್ತಿಲ್ಲ ಎಂದು ಜಗದೀಶ್ ಹಿರೇಮನಿ ತಿಳಿಸಿದರು.
ವಸತಿ ಸೌಲಭ್ಯ ಸೇರಿದಂತೆ ಅವರಿಗೆ ದೊರೆಯಬೇಕಾದ ಎಲ್ಲ ಸೌಲಭ್ಯ ನೀಡಬೇಕು. ತಮಿಳುನಾಡು, ತೆಲಂಗಾಣ ಸೇರಿದಂತೆ ಅನೇಕ ರಾಜ್ಯಗಳಲ್ಲಿ ಸಫಾಯಿ ಕರ್ಮಚಾರಿಗಳಿಗೆ ಪ್ರಧಾನಮಂತ್ರಿ ಆವಾಸ್ ಯೋಜನೆಯಡಿ ಮನೆಗಳನ್ನು ನಿರ್ಮಿಸಿ ಕೊಡಲಾಗಿದೆ. ಸ್ವ ಉದ್ಯೋಗ ಮಾಡಲು ಕೇಂದ್ರ ಸರಕಾರದ ವಿವಿಧ ಯೋಜನೆಗಳಡಿಯಲ್ಲಿ ನೆರವು ಪಡೆಯಲು ಅವಕಾಶವಿದೆ ಎಂದು ಅವರು ತಿಳಿಸಿದರು.