ತಳಮಟ್ಟದಿಂದ ರಾಜ್ಯದ ಸರ್ವಾಂಗೀಣ ಅಭಿವೃದ್ಧಿ ಗುರಿ: ಮುಖ್ಯಮಂತ್ರಿ ಕುಮಾರಸ್ವಾಮಿ

ಮಂಡ್ಯ, ಫೆ.27: ತಾಲೂಕು ಮಟ್ಟದಿಂದಲೇ ಸಮಗ್ರ ಅಭಿವೃದ್ಧಿಗೆ ಒತ್ತು ನೀಡುವ ಮೂಲಕ ರಾಜ್ಯದ ಸರ್ವಾಂಗೀಣ ಅಭಿವೃದ್ಧಿ ಗುರಿ ಮುಟ್ಟಲಾಗುವುದು. ಈ ನಿಟ್ಟಿನಲ್ಲಿ ತಾಲೂಕಿಗೆ ಕನಿಷ್ಠ ತಲಾ 1 ಸಾವಿರ ಕೋಟಿಯಂತೆ ಮಂಡ್ಯ ಜಿಲ್ಲೆಯ ಸಮಗ್ರ ಅಭಿವೃದ್ಧಿಗೆ 5 ಸಾವಿರ ಕೋಟಿ ರೂ. ನಿಗದಿ ಮಾಡಲಾಗಿದೆ ಎಂದು ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಸ್ಪಷ್ಟಪಡಿಸಿದ್ದಾರೆ.
ಜಿಲ್ಲೆಯ ಏಳು ವಿಧಾನಸಭಾ ಕ್ಷೇತ್ರಗಳಲ್ಲೂ ಜೆಡಿಎಸ್ ಶಾಸಕರನ್ನು ಆಯ್ಕೆ ಮಾಡಿದ್ದೀರಿ. ಆ ಮೂಲಕ ಮುಖ್ಯಮಂತ್ರಿಯಾಗಲು ನೆರವು ನೀಡಿದ್ದೀರಿ. ಈ ಋಣ ತೀರಿಸುವುದು ನನ್ನ ಜವಾಬ್ದಾರಿಯಾಗಿದೆ ಎಂದಿದ್ದಾರೆ.
ನಗರದ ಸರಕಾರಿ ಮಹಾವಿದ್ಯಾಲಯದ ಆವರಣದಲ್ಲಿ ಸುಮಾರು 5 ಸಾವಿರ ಕೋಟಿ ರೂ.ಗಳ ವಿವಿಧ ಅಭಿವೃದ್ಧಿ ಕಾಮಗಾರಿಗೆ ಬುಧವಾರ ಚಾಲನೆ ನೀಡಿ ಮಾತನಾಡಿದ ಅವರು, ಅಭಿವೃದ್ಧಿ ವಿಷಯದಲ್ಲಿ ಜಿಲ್ಲೆಯನ್ನು ಈ ಹಿಂದಿನವರು ನಿರ್ಲಕ್ಷಿಸಿದ್ದಾರೆ. ಅದನ್ನು ಸರಿಪಡಿಸುವ ಕೆಲಸವನ್ನು ತಾವು ಮಾಡುತ್ತಿರುವುದಾಗಿ ಸ್ಪಷ್ಟಪಡಿಸಿದರು.
ಮೈಸೂರು ಸಕ್ಕರೆ ಕಾರ್ಖಾನೆಗೆ ಎಷ್ಟೇ ಅನುದಾನ ನೀಡಿದರೂ ಪುನಶ್ಚೇತನಗೊಳ್ಳಲಿಲ್ಲ. ಹಾಗಾಗಿ ಹೊಸ ಕಾರ್ಖಾನೆಯನ್ನೇ ಆರಂಭಿಸಲು ಉದ್ದೇಶಿಸಲಾಗಿದ್ದು, 450 ಕೋಟಿ ಮೀಸಲಿರಿಸಿರುವುದಾಗಿ ಹೇಳಿದರು. 48 ಕೋಟಿ ಸಾಲದ ಸಮಸ್ಯೆಯಿಂದ ಬಳಲುತ್ತಿರುವ ಪಾಂಡವಪುರ ಸಕ್ಕರೆ ಕಾರ್ಖಾನೆ ಪುನರಾರಂಭಗೊಳ್ಳುವ ಸೂಚನೆ ನೀಡಿದ ಅವರು, ಸದ್ಯದಲ್ಲಿಯೇ ಕಬ್ಬು ಅರೆಯುವ ಕಾರ್ಯ ಆರಂಭಗೊಳ್ಳುವ ವಿಶ್ವಾಸ ವ್ಯಕ್ತಪಡಿಸಿದರು.
ಕೃಷ್ಣರಾಜಪೇಟೆಯಲ್ಲಿ ನೀರಿಲ್ಲದೆ ಬೆಳೆಗಳು ಒಣಗುತ್ತಿರುವ ಬಗ್ಗೆ ರೈತರು ಗಮನ ಸೆಳೆದಿದ್ದರು. ತಕ್ಷಣ ನೀರು ಬಿಡುಗಡೆ ಮಾಡುವಂತೆ ಆದೇಶ ನೀಡಲಾಗಿದೆ. ನಾಲೆಗಳನ್ನು ಅಭಿವೃದ್ಧಿಪಡಿಸಲು 500 ಕೋಟಿ ಮೀಸಲಿರಿಸಿರುವುದಾಗಿ ವಿವರಿಸಿದರು.
ಉದ್ಯೋಗ ಸೃಷ್ಟಿಗೆ ಮೈತ್ರಿ ಸರಕಾರ ಹೆಚ್ಚಿನ ಒತ್ತು ನೀಡುತ್ತಿದ್ದು, ಮಂಡ್ಯ ಜಿಲ್ಲೆಯ ನಾಗಮಂಗಲ ಸೇರಿದಂತೆ ರಾಜ್ಯದ 9 ಜಿಲ್ಲೆಗಳಲ್ಲಿ ಕೈಗಾರಿಕಾ ಪ್ರದೇಶವನ್ನು ಅಭಿವೃದ್ಧಿಪಡಿಸಲಾಗುತ್ತಿದೆ. ಪ್ರತಿ ವರ್ಷ 50 ಸಾವಿರ ಉದ್ಯೋಗ ಸೃಷ್ಟಿಸುವ ಗುರಿ ಇರಿಸಿಕೊಳ್ಳಲಾಗಿದೆ ಎಂದು ಮುಖ್ಯಮಂತ್ರಿಗಳು ಹೇಳಿದರು.
ಜಿಲ್ಲೆಯ ಪ್ರತಿ ಮನೆಗೆ ಕಾವೇರಿ ನದಿಯಿಂದ ಶುದ್ಧ ಕುಡಿಯುವ ನೀರು ಪೂರೈಸಲು ನಿರ್ಧರಿಸಲಾಗಿದ್ದು, ಒಂದೂವರೆ ಸಾವಿರ ಕೋಟಿ ಮೀಸಲಿರಿಸಲಾಗಿದೆ. ತಾವು ಅಧಿಕಾರಕ್ಕೆ ಬಂದ ದಿನದಿಂದಲೂ ಮಂಡ್ಯ, ಹಾಸನ ಜಿಲ್ಲೆಗಳ ಅಭಿವೃದ್ಧಿಗೆ ಒತ್ತು ನೀಡುತ್ತಿರುವುದಾಗಿ ಟೀಕಿಸಿ ವ್ಯಂಗ್ಯ ಮಾಡುತ್ತಿದ್ದರೂ ಆದ್ಯತೆಯಲ್ಲಿ ಬದಲಾವಣೆ ಮಾಡಿಲ್ಲವೆಂದರು.
ಸಚಿವರಾದ ಸಿ.ಎಸ್.ಪುಟ್ಟರಾಜು, ಡಿ.ಸಿ.ತಮ್ಮಣ್ಣ, ಜಿ.ಟಿ.ದೇವೇಗೌಡ, ಸಾ.ರಾ.ಮಹೇಶ್, ಸಂಸದ ಎಲ್.ಆರ್.ಶಿವರಾಮೇಗೌಡ ಹಾಗೂ ಜಿಲ್ಲೆಯ ಎಲ್ಲ ಶಾಸಕರು (ಶ್ರೀರಂಗಪಟ್ಟಣ ಶಾಸಕ ರವೀಂದ್ರ ಶ್ರೀಕಂಠಯ್ಯ ಹೊರತಪಡಿಸಿ) ಉಪಸ್ಥಿತರಿದ್ದರು.







