‘ಬೆಂಗಳೂರು ಉತ್ತರದಿಂದ ಸ್ಪರ್ಧೆ’ ಬಗ್ಗೆ ಎಚ್.ಡಿ ದೇವೇಗೌಡ ಏನು ಹೇಳುತ್ತಾರೆ ?
ಬೆಂಗಳೂರು, ಮಾ.11: ಬೆಂಗಳೂರು ಉತ್ತರ ಕ್ಷೇತ್ರದಿಂದ ಸ್ಪರ್ಧೆ ಮಾಡುವ ವಿಚಾರವಾಗಿ ಇನ್ನೂ ಯಾವುದೇ ಅಂತಿಮ ತೀರ್ಮಾನವಾಗಿಲ್ಲ ಎಂದು ಜೆಡಿಎಸ್ ವರಿಷ್ಠ ಎಚ್.ಡಿ.ದೇವೇಗೌಡ ತಿಳಿಸಿದರು.
ಸೋಮವಾರ ನಗರದ ಜೆಡಿಎಸ್ ಕಚೇರಿ(ಜೆ.ಪಿ.ಭವನ)ಯಲ್ಲಿ ಲೋಕಸಭಾ ಚುನಾವಣೆ ಮತ್ತು ಸೀಟು ಹಂಚಿಕೆ ಕುರಿತು ಪಕ್ಷದ ಮುಖಂಡರೊಂದಿಗೆ ನಡೆಸಿದ ಸಭೆಯ ಬಳಿಕ ಅವರು ಸುದ್ದಿಗಾರರೊಂದಿಗೆ ಮಾತನಾಡಿದರು.
ಬೆಂಗಳೂರು ಉತ್ತರ ಕ್ಷೇತ್ರದಿಂದ ಸ್ಪರ್ಧೆ ಮಾಡುವ ವಿಚಾರ ಇನ್ನು ಅಂತಿಮವಾಗಿಲ್ಲ. ಮೈಸೂರು, ತುಮಕೂರು ಕ್ಷೇತ್ರಗಳಿಂದಲೂ ಸ್ಪರ್ಧಿಸುವಂತೆ ಕಾರ್ಯಕರ್ತರು ಹೇಳುತ್ತಿದ್ದಾರೆ. ಆದರೆ, ಇನ್ನು ಯಾವುದನ್ನು ಅಂತಿಮ ಮಾಡಿಲ್ಲ. ಕ್ಷೇತ್ರ ಆಯ್ಕೆ ಕುರಿತು ಇನ್ನೂ ಸಮಯವಿದೆ ಎಂದು ಅವರು ಹೇಳಿದರು.
ರಾಜ್ಯದಲ್ಲಿ ಕಾಂಗ್ರೆಸ್ ಹಾಗೂ ಜೆಡಿಎಸ್ ನಡುವೆ ಸೀಟುಗಳ ಹಂಚಿಕೆ ಕುರಿತು ಈಗಾಗಲೇ ನಾನು ಮಾತನಾಡಿದ್ದೇನೆ. ಇವತ್ತು ಹೊಸದಿಲ್ಲಿಯಲ್ಲಿ ಕಾಂಗ್ರೆಸ್ ಮುಖಂಡರ ಸಭೆ ನಡೆಯುತ್ತಿದೆ. ಒಂದೆರಡು ದಿನಗಳಲ್ಲಿ ಸೀಟು ಹಂಚಿಕೆ ವಿಚಾರ ಬಗೆಹರಿಸಲಾಗುವುದು ಎಂದ ಅವರು, ಪಕ್ಷದಲ್ಲಿ ಕೆಲವು ಪದಾಧಿಕಾರಿಗಳನ್ನು ಬದಲಾವಣೆ ಮಾಡುವ ಕುರಿತು ಇಂದಿನ ಸಭೆಯಲ್ಲಿ ಚರ್ಚಿಸಲಾಗಿದೆ ಎಂದರು.