ಕೇಂದ್ರದ ಮಿಡ್ನೈಟ್ ಸರ್ಕಾರದಿಂದ ರೈತರಿಗೆ ತೆರಿಗೆ ಹೊರೆ: ಕೆಪಿಸಿಸಿ ವಕ್ತಾರ ಮುರಳೀಧರ್ ಹಾಲಪ್ಪ
ಮಡಿಕೇರಿಯಲ್ಲಿ ಕಾಂಗ್ರೆಸ್ ಸಭೆ

ಮಡಿಕೇರಿ, ಮಾ.20 ಕಳೆದ ಐದು ವರ್ಷಗಳ ಕಾಲ ಈ ದೇಶವನ್ನು ಆಳಿದ ಬಿಜೆಪಿ ನೇತೃತ್ವದ ಮಿಡ್ನೈಟ್ ಸರ್ಕಾರ ಜಿಎಸ್ಟಿ ನೆಪದಲ್ಲಿ ಜನಸಾಮಾನ್ಯರು ಸೇರಿದಂತೆ ರೈತರ ಮೇಲೂ ತೆರಿಗೆ ಹೊರೆಯನ್ನು ಹೊರಿಸುವ ಮೂಲಕ ಅರಾಜಕತೆಯನ್ನು ಸೃಷ್ಟಿಸಿದೆ ಎಂದು ಕೆಪಿಸಿಸಿ ವಕ್ತಾರ ಮುರಳೀಧರ್ ಹಾಲಪ್ಪ ಆರೋಪಿಸಿದ್ದಾರೆ.
ಲೋಕಸಭಾ ಚುನಾವಣೆಯ ಹಿನ್ನೆಲೆಯಲ್ಲಿ ಮಡಿಕೇರಿ ಬ್ಲಾಕ್ ಕಾಂಗ್ರೆಸ್ ಸಮಿತಿ, ಕುಶಾಲನಗರ ಬ್ಲಾಕ್, ಸೋಮವಾರಪೇಟೆ ಬ್ಲಾಕ್ ಮತ್ತು ನಾಪೋಕ್ಲು ಬ್ಲಾಕ್ ಕಾಂಗ್ರೆಸ್ ಸಮಿತಿಯ ಸಿದ್ಧತಾ ಶಿಬಿರವು ನಗರದ ಕೊಡವ ಸಮಾಜದಲ್ಲಿ ನಡೆಯಿತು.
ಸಭೆಯನ್ನುದ್ದೇಶಿಸಿ ಮಾತನಾಡಿದ ಅವರು ನೋಟು ಅಮಾನೀಕರಣ, ಜಿಎಸ್ಟಿ ಜಾರಿ, ಆರ್ಬಿಐ ಗವರ್ನರ್ ರಾಜೀನಾಮೆ, ಸಿಬಿಐ ಕಚೇರಿ ಮೇಲಿನ ದಾಳಿಗಳೆಲ್ಲವೂ ಮಧ್ಯರಾತ್ರಿಯೇ ನಡೆದಿದ್ದು, ಇದೊಂದು ಮಿಡ್ನೈಟ್ ಸರ್ಕಾರವಾಗಿದೆ ಎಂದು ಟೀಕಿಸಿದರು.
ದೇಶಕ್ಕೆ ಸ್ವಾತಂತ್ರ್ಯ ಬಂದಾಗಿನಿಂದಲೂ ರೈತರಿಗೆ ಯಾವುದೇ ರೀತಿಯ ತೆರಿಗೆಯನ್ನು ವಿಧಿಸಿಲ್ಲ. ಆದರೆ ಪ್ರಧಾನಿ ನರೇಂದ್ರಮೋದಿ ನೇತೃತ್ವದ ಕೇಂದ್ರ ಸರ್ಕಾರ ಜಿಎಸ್ಟಿ ನೆಪದಲ್ಲಿ ರೈತರಿಂದಲೂ ಹಣ ಸಂಗ್ರಹಿಸುವ ಕಾರ್ಯಕ್ಕೆ ಮುಂದಾಯಿತು ಎಂದು ಆರೋಪಿಸಿದರು. ರೈತ ಸಮೂಹ ಆತ್ಮಹತ್ಯೆ ಮಾಡಿಕೊಂಡಾಗಲೂ ಸಂಕಷ್ಟಕ್ಕೆ ಸ್ಪಂದಿಸದ ಸರ್ಕಾರ ಇದೀಗ ಚುನಾವಣೆ ಸಮೀಪಿಸಿತು ಎನ್ನುವ ಕಾರಣಕ್ಕೆ ಪೊಳ್ಳು ಭರವಸೆಗಳನ್ನು ನೀಡುತ್ತಿದೆ. ಆದರೆ ರಾಜ್ಯದ ಮೈತ್ರಿ ಸರ್ಕಾರ ಅಧಿಕಾರಕ್ಕೆ ಬಂದ ದಿನದಿಂದಲೇ ರೈತರ ಸಾಲಮನ್ನಾಕ್ಕೆ ಕ್ರಮ ಕೈಗೊಂಡಿದೆ ಎಂದು ಮುರಳೀಧರ್ ಹಾಲಪ್ಪ ತಿಳಿಸಿದರು. ಕೇಂದ್ರ ಸರ್ಕಾರದ ದುರಾಡಳಿತದ ಬಗ್ಗೆ ಪ್ರತಿಯೊಬ್ಬ ಮತದಾರ ಎಚ್ಚೆತ್ತುಕೊಳ್ಳಬೇಕಾಗಿದೆ. ಮತದಾರರನ್ನು ಜಾಗೃತಿಗೊಳಿಸುವ ಕಾರ್ಯವನ್ನು ಕಾಂಗ್ರೆಸ್ ಕಾರ್ಯಕರ್ತರು ಮಾಡಬೇಕೆಂದು ಕರೆ ನೀಡಿದರು.
ತಮ್ಮ ಆಡಳಿತಾವಧಿಯಲ್ಲಿ ಭಾರತೀಯ ಮಾಧ್ಯಮಗಳಿಂದ ದೂರವೇ ಉಳಿದ ಪ್ರಧಾನಿ ಮೋದಿ ವಿದೇಶಗಳಲ್ಲಿ ಸುದ್ದಿಗೋಷ್ಟಿಗಳನ್ನು ನಡೆಸಿ ಪ್ರಚಾರ ಗಿಟ್ಟಿಸಿಕೊಂಡಿದ್ದಾರೆ. ವಿದೇಶ ಪ್ರವಾಸದಲ್ಲೇ ಬಹುತೇಕ ದಿನಗಳನ್ನು ಕಳೆದ ಪ್ರಧಾನಮಂತ್ರಿಗಳು ಭಾರತ ದೇಶದ ಜನಸಾಮಾನ್ಯರು ಹಾಗೂ ರೈತರ ಸಮಸ್ಯೆಗಳನ್ನು ಅರಿತುಕೊಳ್ಳುವಲ್ಲಿ ಸಂಪೂರ್ಣವಾಗಿ ವಿಫಲರಾಗಿದ್ದಾರೆ ಎಂದು ಆರೋಪಿಸಿದರು.
ಪುಲ್ವಾಮಾದಲ್ಲಿ ನಡೆದ ಉಗ್ರರ ದಾಳಿಯಿಂದ 40 ಕ್ಕೂ ಅಧಿಕ ಅಮಾಯಕ ಸೈನಿಕರು ಮೃತಪಟ್ಟಿದ್ದು, ಈ ಘಟನೆಗೆ ಯಾರ ವೈಫಲ್ಯ ಕಾರಣ ಎನ್ನುವುದನ್ನು ಪ್ರಶ್ನೆ ಮಾಡಬೇಕಾದ ಕಾಲ ಕೂಡಿ ಬಂದಿದೆ ಎಂದು ಮುರಳೀಧರ್ ಹಾಲಪ್ಪ ಅಭಿಪ್ರಾಯಪಟ್ಟರು.
ಕಾಂಗ್ರೆಸ್ ಜಿಲ್ಲಾಧ್ಯಕ್ಷ ಕೆ.ಕೆ.ಮಂಜುನಾಥ್ ಕುಮಾರ್ ಮಾತನಾಡಿ, ಬೂತ್ ಮಟ್ಟದ ಕಾರ್ಯಕರ್ತರನ್ನು ಹುರಿದುಂಬಿಸಲು ಸಿದ್ಧತಾ ಶಿಬಿರವನ್ನು ಆಯೋಜಿಸಲಾಗಿದ್ದು, ಚುನಾವಣೆಯ ಸಂದರ್ಭ ಕಾರ್ಯಕರ್ತರು ಆತ್ಮಸ್ಥೈರ್ಯದಿಂದ ಕಾರ್ಯ ನಿರ್ವಹಿಸಬೇಕೆಂದು ಕರೆ ನೀಡಿದರು. ಮೈತ್ರಿ ಪಕ್ಷದ ಅಭ್ಯರ್ಥಿಯ ಗೆಲುವು ಪ್ರತಿಯೊಬ್ಬ ಕಾರ್ಯಕರ್ತನ ಗೆಲುವಾಗಿದ್ದು, ಪಂದ್ಯದ ರೂಪದಲ್ಲಿ ಚುನಾವಣೆಯನ್ನು ಸಂಘಟಿತರಾಗಿ ಎದುರಿಸಬೇಕು. ವೈಯುಕ್ತಿಕ ಭಿನ್ನಾಭಿಪ್ರಾಯಗಳನ್ನು ಮರೆತು ಗೆಲುವಿಗಾಗಿ ಶ್ರಮಿಸುವಂತೆ ತಿಳಿಸಿದರು.
ಜಿಲ್ಲೆಯಲ್ಲಿ ಕಳೆದ ವರ್ಷ ಸಂಭವಿಸಿದ ಪ್ರಕೃತಿ ವಿಕೋಪದಿಂದ ಹಲವು ಪ್ರದೇಶಗಳು ನಾಶವಾಗಿವೆ. ಕಾಫಿ, ಕರಿಮೆಣಸು ನೆಲಕಚ್ಚಿದೆ, ರೈತರು, ಬೆಳೆಗಾರರು ಅತೀವ ನೋವು ಅನುಭವಿಸುತ್ತಿದ್ದಾರೆ. ಆದರೆ ಈ ಬಗ್ಗೆ ತಲೆಕೆಡಿಸಿಕೊಳ್ಳದ ಕೊಡಗು-ಮೈಸೂರು ಕ್ಷೇತ್ರದ ಸಂಸದ ಪ್ರತಾಪ್ ಸಿಂಹ ಚುನಾವಣೆ ಸಮೀಪಿಸುತ್ತಿರುವ ಹೊತ್ತಿನಲ್ಲಿ ಕೊಡಗು ಜಿಲ್ಲೆಗೆ ರೈಲ್ವೆ ಮಾರ್ಗ ತರುವುದಾಗಿ ಹೇಳಿಕೆಗಳನ್ನು ನೀಡುವ ಮೂಲಕ ಜನರ ಕಣ್ಣಿಗೆ ಮಣ್ಣೆರಚುವ ಪ್ರಯತ್ನ ಮಾಡುತ್ತಿದ್ದಾರೆ ಎಂದು ಮಂಜುನಾಥ್ ಕುಮಾರ್ ಆರೋಪಿಸಿದರು. ಕಳೆದ ಐದು ವರ್ಷಗಳ ತಮ್ಮ ಆಡಳಿತಾವಧಿಯಲ್ಲಿ ಕೊಡಗಿಗೆ ಯಾವುದೇ ಕೊಡುಗೆಯನ್ನು ನೀಡದ ಪ್ರತಾಪ್ ಸಿಂಹಗೆ ಮತದಾರರು ತಕ್ಕ ಪಾಠ ಕಲಿಸಲಿದ್ದಾರೆ ಎಂದು ಭವಿಷ್ಯ ನುಡಿದರು.
ರಾಜ್ಯದಲ್ಲಿ ಜೆಡಿಎಸ್ ಹಾಗೂ ಕಾಂಗ್ರೆಸ್ ಮೈತ್ರಿ ಸರ್ಕಾರವಿದ್ದು, ಲೋಕಸಭಾ ಚುನಾವಣೆಯಲ್ಲೂ ಮೈತ್ರಿ ಮುಂದುವರೆದಿದೆ. ಕೊಡಗು-ಮೈಸೂರು ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿಯ ಗೆಲುವಿಗೆ ಜೆಡಿಎಸ್ನ ನೆರವು ಅಗತ್ಯವಾಗಿ ಬೇಕಾಗಿದ್ದು, ಈ ನಿಟ್ಟಿನಲ್ಲಿ ಹೊಂದಾಣಿಕೆಯಿಂದ ಕಾರ್ಯನಿರ್ವಹಿಸುವಂತೆ ಮಂಜುನಾಥ್ ಕುಮಾರ್ ಸಲಹೆ ನೀಡಿದರು.
ರಾಜ್ಯ ಮಹಿಳಾ ಕಾಂಗ್ರೆಸ್ ಘಟಕದ ಅಧ್ಯಕ್ಷೆ ಬಿ.ಪುಷ್ಪಾ ಅಮರನಾಥ್, ವಿಧಾನ ಪರಿಷತ್ ಸದಸ್ಯರಾದ ವೀಣಾಅಚ್ಚಯ್ಯ, ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಹಾಗೂ ಜಿಲ್ಲಾ ಉಸ್ತುವರಿ ಮಂಜುಳಾ ರಾಜ್, ಮಡಿಕೇರಿ ವಿಧಾನಸಭಾ ಕ್ಷೇತ್ರದ ಉಸ್ತುವಾರಿ ವೆಂಕಪ್ಪ ಗೌಡ, ಮಾಜಿ ಸಚಿವೆ ಸುಮಾ ವಸಂತ್, ಕೆಪಿಸಿಸಿ ಉಪಾಧ್ಯಕ್ಷ ಮಿಟ್ಟು ಚಂಗಪ್ಪ, ಮಾಜಿ ಸಚಿವ ಎಂ.ಸಿ. ನಾಣಯ್ಯ, ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಕೆ.ಪಿ.ಚಂದ್ರಕಲಾ, ಸದಸ್ಯ ಟಿ.ಪಿ.ರಮೇಶ್, ನಗರಸಭಾ ಅಧ್ಯಕ್ಷೆ ಕಾವೇರಮ್ಮ ಸೋಮಣ್ಣ, ಮಹಿಳಾ ಕಾಂಗ್ರೆಸ್ನ ಜಿಲ್ಲಾಧ್ಯಕ್ಷೆ ಸುರಯ್ಯ ಅಬ್ರಾರ್, ಪ್ರಮುಖರಾದ ನೆರವಂಡ ಉಮೇಶ್, ಕೆ.ಎ.ಯಾಕುಬ್, ಬ್ಲಾಕ್ ಅಧ್ಯಕ್ಷರಾದ ಅಪ್ರು ರವೀಂದ್ರ, ಕೆ.ಎಂ. ಲೋಕೇಶ್, ವಿ.ಪಿ.ಶಶಿಧರ್, ಎಲ್ಲಾ ಬ್ಲಾಕ್ ಅಧ್ಯಕ್ಷರುಗಳು, ಕೆಪಿಸಿಸಿ ಸದಸ್ಯರು ಹಾಗೂ ಪಕ್ಷದ ಕಾರ್ಯಕರ್ತರು ಶಿಬಿರದಲ್ಲಿ ಪಾಲ್ಗೊಂಡಿದ್ದರು.








