ಆರ್ಟಿಇ ಕಾಯ್ದೆಗೆ ತಿದ್ದುಪಡಿಯಿಂದ ಬಡವರಿಗೆ ಅನ್ಯಾಯ: ಹೈಕೋರ್ಟ್ಗೆ ಹೇಳಿಕೆ
![ಆರ್ಟಿಇ ಕಾಯ್ದೆಗೆ ತಿದ್ದುಪಡಿಯಿಂದ ಬಡವರಿಗೆ ಅನ್ಯಾಯ: ಹೈಕೋರ್ಟ್ಗೆ ಹೇಳಿಕೆ ಆರ್ಟಿಇ ಕಾಯ್ದೆಗೆ ತಿದ್ದುಪಡಿಯಿಂದ ಬಡವರಿಗೆ ಅನ್ಯಾಯ: ಹೈಕೋರ್ಟ್ಗೆ ಹೇಳಿಕೆ](https://www.varthabharati.in/sites/default/files/images/articles/2019/04/3/185354.jpeg)
ಬೆಂಗಳೂರು, ಎ.3: ನೆರೆಹೊರೆಯಲ್ಲಿ ಸರಕಾರಿ ಅಥವಾ ಅನುದಾನಿತ ಶಾಲೆಗಳು ಇದ್ದಲ್ಲಿ ಅಂತಹ ಕಡೆ ಶಿಕ್ಷಣ ಹಕ್ಕು ಕಾಯಿದೆಯಡಿ ಪ್ರವೇಶ ಪಡೆಯಲು ಖಾಸಗಿ ಅನುದಾನ ರಹಿತ ಶಾಲೆಗಳನ್ನು ಪರಿಗಣಿಸುವಂತಿಲ್ಲ ಎಂದು ರಾಜ್ಯ ಸರಕಾರ ಅಧಿಸೂಚನೆ ಹೊರಡಿಸಿದೆ. ಆದರೆ, ಇಂತಹ ಅಧಿಸೂಚನೆಯಿಂದ ಎಸ್ಸಿ-ಎಸ್ಟಿ, ಹಿಂದುಳಿದವರು ಹಾಗೂ ಬಡವರಿಗೆ ಅನ್ಯಾಯವಾಗುತ್ತದೆ ಎಂದು ವಕೀಲೆ ಸುಮನ್ ಹೆಗಡೆ ಹೈಕೋರ್ಟ್ಗೆ ತಿಳಿಸಿದ್ದಾರೆ.
ಶಿಕ್ಷಣ ಹಕ್ಕು ಕಾಯಿದೆ ವಿದ್ಯಾರ್ಥಿಗಳು ಹಾಗೂ ಪೋಷಕರ ಸಂಘ ಸಲ್ಲಿಸಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿ ವಿಚಾರಣೆ ಹಂಗಾಮಿ ನ್ಯಾಯಮೂರ್ತಿ ಎಲ್.ನಾರಾಯಣಸ್ವಾಮಿ ಹಾಗೂ ನ್ಯಾಯಮೂರ್ತಿ ಪಿ.ಎಸ್.ದಿನೇಶ್ಕುಮಾರ್ ಅವರಿದ್ದ ವಿಭಾಗೀಯ ನ್ಯಾಯಪೀಠದಲ್ಲಿ ವಿಚಾರಣೆ ನಡೆಯಿತು.
ಅರ್ಜಿದಾರರ ಪರ ವಾದಿಸಿ ವಕೀಲೆ ಸುಮನ್ ಹೆಗಡೆ ಅವರು, ನೆರೆಹೊರೆಯಲ್ಲಿ ಸರಕಾರಿ ಅಥವಾ ಅನುದಾನಿತ ಶಾಲೆಗಳಿದ್ದರೆ ಅಂತಹ ಕಡೆ ಆರ್ಟಿಇಯಡಿ ಖಾಸಗಿ ಶಾಲೆಗಳಲ್ಲಿ ಪ್ರವೇಶಕ್ಕೆ ಅವಕಾಶವಿಲ್ಲ ಎಂದು ಕರ್ನಾಟಕ ಮಕ್ಕಳ ಉಚಿತ ಮತ್ತು ಕಡ್ಡಾಯ ಶಿಕ್ಷಣ ಹಕ್ಕು ನಿಯಮಗಳು-2012ರ ನಿಯಮ 4ಕ್ಕೆ ತಿದ್ದುಪಡಿ ತಂದು ರಾಜ್ಯ ಸರಕಾರ 2019ರ ಜ.30ರಂದು ಹೊರಡಿಸಿರುವ ಅಧಿಸೂಚನೆ ಶಿಕ್ಷಣ ಹಕ್ಕು ಮೂಲ ಕಾಯಿದೆ-2019ಕ್ಕೆ ತದ್ವಿರುದ್ಧವಾಗಿದೆ. ಇಂತಹ ಅಧಿಸೂಚನೆಯಿಂದ ರಾಜ್ಯದ ಬಡವರಿಗೆ ಅನ್ಯಾಯವಾಗುತ್ತದೆ. ಹೀಗಾಗಿ, ಈ ಅಧಿಸೂಚನೆಯನ್ನು ರದ್ದುಪಡಿಸಲು ನಿರ್ದೇಶಿಸಬೇಕೆಂದು ಪೀಠಕ್ಕೆ ಮನವಿ ಮಾಡಿದರು. ಸರಕಾರಿ ಶಾಲೆಗಳಲ್ಲಿ ಎಲ್ಲ ರೀತಿಯ ಮೂಲಭೂತ ಸೌಕರ್ಯಗಳು ಇರುವುದಿಲ್ಲ. ಇದರಿಂದಾಗಿ, ಪೋಷಕರು ತಮ್ಮ ಮಕ್ಕಳು ಗುಣಮಟ್ಟದ ಶಿಕ್ಷಣವನ್ನು ಕಲಿಯಲಿ ಎಂಬ ದೃಷ್ಟಿಯಿಂದ ಆರ್ಟಿಇ ಅಡಿಯಲ್ಲಿ ಖಾಸಗಿ ಶಾಲೆಗಳಿಗೆ ಸೇರಿಸಲು ಮುಂದಾಗುತ್ತಾರೆ. ಆದರೆ, ರಾಜ್ಯ ಸರಕಾರವು ಮಕ್ಕಳನ್ನು ಗುಣಮಟ್ಟದ ಶಿಕ್ಷಣದಿಂದ ವಂಚಿತರನ್ನಾಗಿಸಲು ಇಂತಹ ಅಧಿಸೂಚನೆಗಳನ್ನು ಹೊರಡಿಸುತ್ತಾರೆ. ಇಂತಹ ಅಧಿಸೂಚನೆಗಳು ಸರಕಾರದ ನಿರ್ಲಕ್ಷತನವನ್ನು ತೋರಿಸುತ್ತದೆ ಎಂದು ಪೀಠಕ್ಕೆ ತಿಳಿಸಿದರು.
ಅಡ್ವೊಕೇಟ್ ಜನರಲ್ ಉದಯ ಹೊಳ್ಳ ವಾದಿಸಿ, ಪ್ರತಿ ವರ್ಷವೂ ಸರಕಾರಿ ಶಾಲೆಗಳಿಗೆ ಮಕ್ಕಳು ಬರುವ ಸಂಖ್ಯೆ ಕಡಿಮೆ ಆಗುತ್ತಿದೆ. ಈ ಹಿನ್ನೆಲೆಯಲ್ಲಿ ರಾಜ್ಯ ಸರಕಾರವೇ ರಾಜ್ಯದಲ್ಲಿ 1 ಸಾವಿರ ಇಂಗ್ಲಿಷ್ ಮಾಧ್ಯಮ ಶಾಲೆಗಳನ್ನು ತೆರೆಯಲು ನಿರ್ಧರಿಸಿದೆ ಎಂದು ಪೀಠಕ್ಕೆ ತಿಳಿಸಿದರು. ಖಾಸಗಿ ಶಾಲೆಗಳಲ್ಲಿ ಓದುವ ಮಕ್ಕಳಿಗೆ ಇಂಗ್ಲಿಷ್ ಮಾತನಾಡಲು ಬರುತ್ತದೆ ಎಂಬುದನ್ನು ನಾನೂ ಒಪ್ಪಿಕೊಳ್ಳುತ್ತೇನೆ. ಆದರೆ, ಮಕ್ಕಳ ಭವಿಷ್ಯದ ದೃಷ್ಟಿಯಿಂದ ಹಾಗೂ ಸರಕಾರಿ ಶಾಲೆಗಳನ್ನು ಅಭಿವೃದ್ಧಿಪಡಿಸುವ ದೃಷ್ಟಿಯಿಂದ ರಾಜ್ಯ ಸರಕಾರ ಹೊರಡಿಸಿರುವ ಅಧಿಸೂಚನೆ ಸರಿಯಾಗಿಯೆ ಇದೆ ಎಂದು ಹೊಳ್ಳ ಅವರು ಪೀಠಕ್ಕೆ ತಿಳಿಸಿದರು.