ರಫೇಲ್ ಪ್ರಕರಣ: ಸಮಯ ಕೋರಿ ಕೇಂದ್ರ ಸಲ್ಲಿಸಿದ್ದ ಅರ್ಜಿ ತಿರಸ್ಕರಿಸಿದ ಸುಪ್ರೀಂ ಕೋರ್ಟ್

ಹೊಸದಿಲ್ಲಿ,ಎ.30: ಫ್ರಾನ್ಸ್ನಿಂದ 36 ರಫೇಲ್ ಯುದ್ಧವಿಮಾನಗಳನ್ನು ಖರೀದಿಸುವ ಭಾರತ ಜೊತೆಗಿನ ಒಪ್ಪಂದವನ್ನು ಪ್ರಶ್ನಿಸಿ ಹಾಕಲಾಗಿದ್ದ ಅರ್ಜಿಗಳನ್ನು ತಳ್ಳಿಹಾಕಿದ್ದ ಸರ್ವೋಚ್ಛ ನ್ಯಾಯಾಲಯದ ಡಿಸೆಂಬರ್ ತಿಂಗಳ ಆದೇಶವನ್ನು ಮರುಪರಿಶೀಲಿಸುವಂತೆ ಕೋರಿ ಹಾಕಲಾಗಿರುವ ಅರ್ಜಿಗಳಿಗೆ ಮೇ ನಾಲ್ಕರ ಒಳಗಾಗಿ ಪ್ರತಿಕ್ರಿಯೆ ಸಲ್ಲಿಸುವಂತೆ ಸುಪ್ರೀಂ ಕೋರ್ಟ್ ಕೇಂದ್ರ ಸರಕಾರಕ್ಕೆ ಸೂಚಿಸಿದೆ.
ಈ ಬಗ್ಗೆ ಪ್ರತಿಕ್ರಿಯೆ ಸಲ್ಲಿಸಲು ನಾಲ್ಕು ವಾರಗಳ ಸಮಯಾವಕಾಶ ನೀಡಬೇಕೆನ್ನುವ ಕೇಂದ್ರದ ಮನವಿಯನ್ನು ಶ್ರೇಷ್ಠ ನ್ಯಾಯಾಲಯ ತಳ್ಳಿಹಾಕಿದೆ. ಮುಖ್ಯ ನ್ಯಾಯಾಧೀಶ ರಂಜನ್ ಗೊಗೊಯಿ ನೇತೃತ್ವದ ಪೀಠ ಸದ್ಯ ತೀರ್ಪಿನ ಮರುಪರಿಶೀಲನೆಯ ವಿಚಾರಣೆಯನ್ನು ಮೇ 6ಕ್ಕೆ ನಿಗದಿಪಡಿಸಿದೆ.
ರಫೇಲ್ ಒಪ್ಪಂದಕ್ಕೆ ಕ್ಲೀನ್ ಚಿಟ್ ನೀಡಿದ ಸುಪ್ರೀಂ ಕೋರ್ಟ್ನ ಡಿಸೆಂಬರ್ 14,2018ರ ತೀರ್ಪನ್ನು ಮರುಪರಿಶೀಲಿಸುವಂತೆ ಕೋರಿ ಮಾಜಿ ಕೇಂದ್ರ ಸಚಿವರಾದ ಅರುಣ್ ಶೌರಿ ಮತ್ತು ಯಶವಂತ್ ಸಿನ್ಹಾ ಹಾಗೂ ನ್ಯಾಯವಾದಿ ಪ್ರಶಾಂತ್ ಭೂಷಣ್ ಅರ್ಜಿ ಸಲ್ಲಿಸಿದ್ದರು.
ಒಪ್ಪಂದದ ಬಗ್ಗೆ ಸಂಶಯ ವ್ಯಕ್ತಪಡಿಸಲು ಇದು ಸಂದರ್ಭವಲ್ಲ ಮತ್ತು 36 ಯುದ್ಧವಿಮಾನಗಳ ಖರೀದಿಯಂತಹ ಸೂಕ್ಷ್ಮ ವಿಷಯದಲ್ಲಿ ನ್ಯಾಯಾಲಯ ಮಧ್ಯ ಪ್ರವೇಶಕ್ಕೆ ಯಾವುದೇ ಕಾರಣವಿಲ್ಲ ಎಂದು ಹೇಳಿ ಸರ್ವೋಚ್ಚ ನ್ಯಾಯಾಲಯ ಈ ಮನವಿಗಳನ್ನು ತಳ್ಳಿ ಹಾಕಿತ್ತು.