ಚಲುವರಾಯಸ್ವಾಮಿ ಊಟಕ್ಕೆ ಹೋಗಿದ್ದು ತಪ್ಪಲ್ಲ: ಸಚಿವ ಝಮೀರ್
ಬೆಂಗಳೂರು, ಮೇ 3: ಚಲುವರಾಯಸ್ವಾಮಿ ಅವರು ಊಟಕ್ಕೆ ಹೋಗಿದ್ದು ತಪ್ಪಲ್ಲ, ಸ್ನೇಹಿತರ ಜೊತೆ ಊಟ ಮಾಡಿದ್ದಾರೆ. ಇದಕ್ಕೆ ಮುಖ್ಯಮಂತ್ರಿ ಕುಮಾರಸ್ವಾಮಿ ಬೇಸರ ಮಾಡಿಕೊಳ್ಳುವುದು ಸರಿಯಲ್ಲ ಎಂದು ಸಚಿವ ಝಮೀರ್ ಅಹ್ಮದ್ ಖಾನ್ ಹೇಳಿದ್ದಾರೆ.
ಶುಕ್ರವಾರ ನಗರದಲ್ಲಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, ಪಕ್ಷೇತರ ಅಭ್ಯರ್ಥಿ ಸುಮಲತಾ ಅವರೊಂದಿಗೆ ಚೆಲುವರಾಯಸ್ವಾಮಿ, ನರೇಂದ್ರಸ್ವಾಮಿ ಅವರನ್ನು ಉಪ ಚುನಾವಣೆ ಸಂದರ್ಭದಲ್ಲಿ ವಿಶ್ವಾಸಕ್ಕೆ ತೆಗೆದುಕೊಳ್ಳಲಾಗಿತ್ತು. ಆದರೆ, ಸಿಎಂ ಕುಮಾರಸ್ವಾಮಿ ಆ ಕೆಲಸ ಮಾಡಲಿಲ್ಲ. ಅವರೆಲ್ಲರೊಂದಿಗೆ ಸಮಾಲೋಚನೆ ನಡೆಸಬೇಕಿತ್ತು. ಹೀಗಾಗಿ ಚಲುವರಾಯಸ್ವಾಮಿ ಮತ್ತವರ ತಂಡ ಸಹಜವಾಗಿಯೇ ಅಸಮಾಧಾನಗೊಂಡಿದೆ. ಈ ವಿಚಾರದ ಬಗ್ಗೆ ಕುಮಾರಸ್ವಾಮಿ ಸುಮ್ಮನೆ ಇದ್ದರೂ, ಕೆಲವರು ತಮ್ಮ ಬೇಳೆ ಬೇಯಿಸಿಕೊಳ್ಳಲು ಗೊಂದಲ ಸೃಷ್ಟಿಸುತ್ತಿದ್ದಾರೆಂದು ಆಕ್ಷೇಪಿಸಿದರು.
ಪಕ್ಷೇತರ ಅಭ್ಯರ್ಥಿ ಜೊತೆ ಊಟ ಮಾಡಿದ್ದ ವಿಡಿಯೋವನ್ನು ಯಾರೂ ಬಿಡುಗಡೆ ಮಾಡಿದ್ದಾರೆಂದು ಗೊತ್ತಿಲ್ಲ. ಇದೀಗ ಎಲ್ಲರ ಕೈಯಲ್ಲಿಯೂ ಮೊಬೈಲ್ಗಳಿದ್ದು ಯಾರೂ ಬೇಕಾದರೂ ವಿಡಿಯೋ ಮಾಡಬಹುದು. ಕ್ಷಣಾರ್ಧದಲ್ಲಿ ಸಾಮಾಜಿಕ ಜಾಲತಾಣಗಳಿಗೆ ರವಾನಿಸಬಹುದಾಗಿದೆ ಎಂದು ಝಮೀರ್ ಅಹ್ಮದ್ ಖಾನ್ ತಿಳಿಸಿದರು.