ರೈತರ ಸಾಲಮನ್ನಾ: ಅಧಿಕಾರಿಗಳೊಂದಿಗೆ ಮುಖ್ಯಮಂತ್ರಿ ಕುಮಾರಸ್ವಾಮಿ ಸಭೆ

ಬೆಂಗಳೂರು, ಮೇ 8: ರೈತರ ಸಾಲಮನ್ನಾ ಯೋಜನೆ ಅನುಷ್ಠಾನ ಕುರಿತಂತೆ ಮುಖ್ಯಮಂತ್ರಿ ಕುಮಾರಸ್ವಾಮಿ ಅಧ್ಯಕ್ಷತೆಯಲ್ಲಿ ಉನ್ನತ ಮಟ್ಟದ ಸಭೆ ನಡೆಸಿ ಸಾಲಮನ್ನಾ ಯೋಜನೆಯನುಸಾರ ಶೀಘ್ರ ಕ್ರಮ ಕೈಗೊಳ್ಳಬೇಕೆಂದು ಅಧಿಕಾರಿಗಳಿಗೆ ಸೂಚಿಸಿದರು.
ಬುಧವಾರ ಇಲ್ಲಿನ ಸಿಎಂ ಗೃಹ ಕಚೇರಿ ಕೃಷ್ಣಾದಲ್ಲಿ ಅಧಿಕಾರಿಗಳ ಜತೆ ಸಭೆ ನಡೆಸಿ ಕುಮಾರಸ್ವಾಮಿ, ಅಧಿಕಾರಿಗಳಿಂದ ಮಾಹಿತಿ ಪಡೆದರು. ಸಾಲಮನ್ನಾ ಯೋಜನೆಯನ್ನು ಕ್ರಮಬದ್ಧವಾಗಿ ಅನುಷ್ಠಾನಗೊಳಿಸಲಾಗುತ್ತಿದೆ. 2018ರ ಡಿಸೆಂಬರ್ ತಿಂಗಳಿನಿಂದ ರೈತರ ಸಾಲವನ್ನು ಹಂತಹಂತವಾಗಿ ಅವರ ಖಾತೆಗೆ ಜಮಾ ಮಾಡಲಾಗುತ್ತಿದೆ. ಈವರೆಗೆ ಸಹಕಾರ ಸಂಘಗಳ 8.3 ಲಕ್ಷ ರೈತರಿಗೆ 3,500 ಕೋಟಿ ರೂ.ಸಾಲಮನ್ನಾ ಮೊತ್ತ ಬಿಡುಗಡೆ ಮಾಡಲಾಗಿದೆ. ಸಹಕಾರ ಸಂಘಗಳಲ್ಲಿ ರೈತರು ಅರ್ಹತೆ ಪಡೆದ ದಿನದಂದು ಅವರ ಖಾತೆಗೆ ಹಣ ಬಿಡುಗಡೆ ಮಾಡಲಾಗುತ್ತಿದೆ ಎಂದು ಸಹಕಾರ ಇಲಾಖೆಯ ಪ್ರಧಾನ ಕಾರ್ಯದರ್ಶಿ ನಾಗಾಂಬಿಕಾ ದೇವಿ ವಿವರ ನೀಡಿದರು.
ವಾಣಿಜ್ಯ ಬ್ಯಾಂಕುಗಳಲ್ಲಿ 7.5ಲಕ್ಷ ರೈತರಿಗೆ 3,930ಕೋಟಿ ರೂ.ಗಳನ್ನು ಬಿಡುಗಡೆ ಮಾಡಲಾಗಿದೆ. ಇನ್ನೂ 1.5 ಲಕ್ಷ ರೈತರ ಸುಮಾರು 900 ಕೋಟಿ ರೂ.ಸಾಲಮನ್ನಾ ಮೊತ್ತ ಬಿಡುಗಡೆಗೆ ಸಿದ್ಧವಾಗಿದ್ದು ಮೇ 23ರ ನಂತರ ಬಿಡುಗಡೆ ಮಾಡಲಾಗುವುದು. ಒಟ್ಟಾರೆಯಾಗಿ ವಾಣಿಜ್ಯ ಬ್ಯಾಂಕು ಹಾಗೂ ಸಹಕಾರಿ ಬ್ಯಾಂಕುಗಳ 15.5ಲಕ್ಷ ರೈತರ 7,417ಕೋಟಿ ರೂ.ಮನ್ನಾ ಮಾಡಲಾಗಿದೆ ಎಂದು ಆರ್ಥಿಕ ಇಲಾಖೆಯ ಹೆಚ್ಚುವರಿ ಪ್ರಧಾನ ಕಾರ್ಯದರ್ಶಿ ಐಎಸ್ಎನ್ ಪ್ರಸಾದ್ ತಿಳಿಸಿದರು.
ರೈತರ ಸಾಲಮನ್ನಾ ಯೋಜನೆ ವೈಜ್ಞಾನಿಕವಾಗಿ ಅನುಷ್ಠಾನಗೊಳಿಸಲಾಗುತ್ತಿದ್ದು, ನಿಯಮಗಳ ವ್ಯಾಪ್ತಿಯಲ್ಲಿ ಬರುವ ಎಲ್ಲ ರೈತರ ಸಾಲಮನ್ನಾ ಈ ಆರ್ಥಿಕ ವರ್ಷದಲ್ಲೇ ಆಗಲಿದೆ. ರೈತರ ಸಾಲಮನ್ನಾ ಯೋಜನೆಗೆ ಹಣಕಾಸು ಕೊರತೆ ಇರುವುದಿಲ್ಲ ಹಾಗೂ ಈಗಾಗಲೆ ಪ್ರಕಟಿಸಿರುವ ಯೋಜನಗಳಿಗೆ ಸಾಲಮನ್ನಾದಿಂದ ಯಾವುದೇ ಅಡ್ಡಿಯೂ ಆಗುವುದಿಲ್ಲ ಎಂದು ಅವರು ಸ್ಪಷ್ಟಪಡಿಸಿದರು.
ಸಭೆಯಲ್ಲಿ ಲೋಕೋಪಯೋಗಿ ಸಚಿವ ಎಚ್.ಡಿ.ರೇವಣ್ಣ, ಸಹಕಾರ ಸಚಿವ ಬಂಡಪ್ಪ ಕಾಶೆಂಪೂರ್, ಪಶುಸಂಗೋಪನಾ ಸಚಿವ ನಾಡಗೌಡ ಹಾಗೂ ಸಹಕಾರ ಹಾಗೂ ಹಣಕಾಸು ಇಲಾಖೆಯ ಹಿರಿಯ ಅಧಿಕಾರಿಗಳು ಪಾಲ್ಗೊಂಡಿದ್ದರು.
‘ಸಾಲಮನ್ನಾ ಯೋಜನೆಯ ಅನುಷ್ಠಾನವನ್ನು ಅತ್ಯಂತ ಗಂಭೀರವಾಗಿ ಪರಿಗಣಿಸಿ ಎಲ್ಲ ಪ್ರಕ್ರಿಯೆಗಳನ್ನು ವಾರಕ್ಕೊಮ್ಮೆ ಪರಿಶೀಲಿಸುವಂತೆ ಸಹಕಾರ ಸಚಿವರಿಗೆ ಹಾಗೂ ಸಹಕಾರ ಮತ್ತು ಆರ್ಥಿಕ ಇಲಾಖೆಯ ಹಿರಿಯ ಅಧಿಕಾರಿಗಳಿಗೆ ಕಟ್ಟುನಿಟ್ಟಿನ ಸೂಚನೆ ನೀಡಲಾಗಿದೆ’
-ಕುಮಾರಸ್ವಾಮಿ, ಮುಖ್ಯಮಂತ್ರಿ







