ಜೂನ್ 6ರವರೆಗೆ ಕುಡಿಯುವ ನೀರು ಪೂರೈಕೆ: ಜಿಲ್ಲಾಧಿಕಾರಿ ಸಸಿಕಾಂತ್ ಸೆಂಥಿಲ್
ಅತಿವೃಷ್ಟಿ-ಅನಾವೃಷ್ಟಿ ನಿರ್ವಹಣೆಯ ದ.ಕ. ಜಿಲ್ಲಾ ಮಟ್ಟದ ಸಭೆ

ಮಂಗಳೂರು, ಮೇ 20: ದ.ಕ. ಜಿಲ್ಲೆಯ ಜನರಿಗೆ ಕುಡಿಯುವ ನೀರು ಪೂರೈಸಲು ಅಗತ್ಯ ಕ್ರಮಗಳನ್ನು ಕೈಗೊಳ್ಳಲಾಗಿದ್ದು, ಜೂನ್ 6ರವರೆಗೆ ನೀರು ಪೂರೈಕೆಗೆ ಕ್ರಮ ಕೈಗೊಳ್ಳಲಾಗಿದೆ ಎಂದು ಜಿಲ್ಲಾಧಿಕಾರಿ ಸಸಿಕಾಂತ್ ಸೆಂಥಿಲ್ ಸ್ಪಷ್ಟಪಡಿಸಿದ್ದಾರೆ.
ನಗರದ ಜಿಲ್ಲಾಧಿಕಾರಿ ಕಚೇರಿಯಲ್ಲಿ ಸೋಮವಾರ ನಡೆದ ಅತಿವೃಷ್ಟಿ ಮತ್ತು ಅನಾವೃಷ್ಟಿ ನಿರ್ವಹಣೆಯ ಜಿಲ್ಲಾ ಮಟ್ಟದ ಸಭೆಯಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ಯು.ಟಿ.ಖಾದರ್ ಅವರಿಗೆ ಜಿಲ್ಲೆಯಲ್ಲಿ ಕೈಗೊಂಡಿರುವ ಕ್ರಮಗಳ ಬಗ್ಗೆ ಜಿಲ್ಲಾಧಿಕಾರಿ ಸಮಗ್ರ ಮಾಹಿತಿ ನೀಡಿದರು.
ನಗರಕ್ಕೆ ನೀರು ಪೂರೈಕೆ ಸಂಬಂಧ ಬೇಸಿಗೆಯಲ್ಲಿ ಮಳೆ ಬಾರದಿರುವುದರಿಂದ ತುಂಬೆಯಲ್ಲಿ ನೀರಿನ ಪ್ರಮಾಣ ಕುಸಿತಗೊಳ್ಳುತ್ತಿರುವುದನ್ನು ಮೊದಲೇ ಗಮನಿಸಲಾಗಿತ್ತು. ಇದೇ ಮಾದರಿಯಲ್ಲಿ ಜಿಲ್ಲೆಯಾದ್ಯಂತ ನೀರು ವಿತರಣೆ ಮತ್ತು ಪೂರೈಕೆ ಸಂಬಂಧ ಉಪವಿಭಾಗಾಧಿಕಾರಿಗಳು ಹಾಗೂ ಇಂಜಿನಿಯರ್ಗಳಿಗೆ ನೀರು ನಿರ್ವಹಣೆ ಹೊಣೆ ವಹಿಸಲಾಗಿದೆ. ಎಲ್ಲರೂ ಸೂಕ್ತ ಮುನ್ನೆಚ್ಚರಿಕೆ ವಹಿಸಿ ಎತ್ತರದ ಪ್ರದೇಶಗಳಿಗೆ ಹಾಗೂ ನೀರಿನ ಸಮಸ್ಯೆ ಇರುವ ಪ್ರದೇಶಗಳನ್ನು ಮುಂಚೆಯೇ ಗುರುತಿಸಿ ಟ್ಯಾಂಕರ್ ಮೂಲಕ ನೀರು ಪೂರೈಕೆಗೂ ವ್ಯವಸ್ಥೆ ಮಾಡಲಾಗಿದೆ ಎಂದರು.
ಜಿಲ್ಲೆಯ ಪಂಚಾಯತ್ ವ್ಯಾಪ್ತಿಯಲ್ಲಿ ನೀರು ನಿರ್ವಹಣೆಗೆ ಜಿಪಂ ಸಿಇಒ ಡಾ.ಸೆಲ್ವಮಣಿ ಖುದ್ದು ಉಸ್ತುವಾರಿ ವಹಿಸಿ ಸಂಬಂಧಪಟ್ಟ ಕಾರ್ಯನಿರ್ವಹಣಾಧಿಕಾರಿಗಳ ಜೊತೆ ನಿರ್ವಹಣೆ ಯೋಜನೆಗಳನ್ನು ಅವಲೋಕಿಸಿದ್ದಾರೆ ಎಂದರು. ನೀರಿನ ಸಮಸ್ಯೆ ಇರುವವರಿಗೆ ಕರೆ ಮಾಡಲು 24 ಗಂಟೆ ಸಹಾಯವಾಣಿ ಕಾರ್ಯಾಚರಿಸುತ್ತಿದ್ದು, ನೀರು ಒದಗಿಸಲು ಯಾವುದೇ ಅನುದಾನದ ತೊಂದರೆ ಇಲ್ಲ ಎಂದು ಜಿಲ್ಲಾಧಿಕಾರಿ ಸಸಿಕಾಂತ್ ಸೆಂಥಿಲ್ ಹೇಳಿದರು.
ಉಳ್ಳಾಲ, ಮುಲ್ಕಿ, ಮೂಡುಬಿದಿರೆಯಲ್ಲಿ ನೀರು ನಿರ್ವಹಣೆಯ ಬಗ್ಗೆ ಕೈಗೊಂಡ ಕ್ರಮಗಳ ಬಗ್ಗೆ ಉಸ್ತುವಾರಿ ಸಚಿವರ ಪ್ರಶ್ನೆಗೆ ಉತ್ತರಿಸಿದ ಜಿಲ್ಲಾಧಿಕಾರಿ, ಟ್ಯಾಂಕರ್ ಮುಖಾಂತರ ನೀರು ಪೂರೈಕೆಗೆ ಕ್ರಮ ಕೈಗೊಳ್ಳಲಾಗಿದೆ. ಬೋರ್ವೆಲ್ ಕೊರೆಸಲು ಅನುಮತಿ ನೀಡಲಾಗಿದೆ ಎಂದರು.
ಉಳ್ಳಾಲ, ಮುಲ್ಕಿಯ ಮುಖ್ಯಾಧಿಕಾರಿಗಳು ಚುನಾವಣಾ ಕರ್ತವ್ಯಕ್ಕೆ ವರದಿ ಮಾಡಿಕೊಂಡಿದ್ದು, ನೀರು ನಿರ್ವಹಣೆಗೆ ಸಹಕಾರ ನೀಡದ ಬಗ್ಗೆ ಸರಕಾರಕ್ಕೆ ವರದಿ ಸಲ್ಲಿಸಲಾಗಿದೆ ಎಂದು ಜಿಲ್ಲಾಧಿಕಾರಿ ಹೇಳಿದರು.
ಮೂಡಬಿದಿರೆ ಮತ್ತು ಬಂಟ್ವಾಳದಲ್ಲಿ ಎರಡು ದಿನಕ್ಕೊಮ್ಮೆ ನೀರು ಪೂರೈಸುತ್ತಿದ್ದು, ಬಂಟ್ವಾಳದಲ್ಲಿ ನೀರು ಪೂರೈಕೆ ಸಂಬಂಧ ಇದ್ದ ಸಮಸ್ಯೆಯನ್ನು ಸರಿಪಡಿಸಲಾಗಿದೆ ಎಂದು ಉಪವಿಭಾಗ ಅಧಿಕಾರಿ ರವಿಚಂದ್ರ ನಾಯಕ್ ಹೇಳಿದರು. ಪುತ್ತೂರಿನಲ್ಲಿ ನೀರಿಗೆ ಸಮಸ್ಯೆಯಾಗಿಲ್ಲ ಎಂದು ಉಪವಿಭಾಗ ಅಧಿಕಾರಿ ಕೃಷ್ಣಮೂರ್ತಿ ಸಭೆಗೆ ಮಾಹಿತಿ ನೀಡಿದರು.
ಜಿಪಂ ಸಿಇಒ ಡಾ.ಸೆಲ್ವಮಣಿ ಸಭೆಗೆ ಮಾಹಿತಿ ನೀಡಿ, ಮಂಗಳೂರು ಮತ್ತು ಬಂಟ್ವಾಳ ತಾಲೂಕಿನ ಕೆಲವು ಪ್ರದೇಶಗಳಲ್ಲಿ ನೀರಿನ ಅಭಾವವಿದ್ದು, ಪ್ರತೀ ತಾಲೂಕಿಗೆ ಬರ ನಿರ್ವಹಣೆಗೆ 25 ಲಕ್ಷ ರೂ.ನ್ನು ನೀಡಲಾಗಿದೆ ಎಂದರು.
ಪ್ರತೀ ವರ್ಷವೂ ಎದುರಾಗುತ್ತಿರುವ ನೀರಿನ ಸಮಸ್ಯೆ ಪರಿಹಾರಕ್ಕೆ ಶಾಶ್ವತ ಪರಿಹಾರದ ಅಗತ್ಯವನ್ನು ಅವರು ಜಿಲ್ಲಾ ಉಸ್ತುವಾರಿ ಸಚಿವರ ಮುಂದಿಟ್ಟರು. ಪುತ್ತೂರಿನ ಕೆಲವು ಪ್ರದೇಶಗಳಲ್ಲಿ ನೀರಿದ್ದರೂ ಲೋ ವೋಲ್ಟೇಜ್ ಸಮಸ್ಯೆಯಿದೆ ಎಂದರು.
ಇನ್ನು ಮಳೆಗಾಲವನ್ನು ಎದುರಿಸಲು ಎಲ್ಲ ರಾಜಕಾಲುವೆಗಳನ್ನು ಸ್ವಚ್ಛಗೊಳಿಸಲಾಗಿದ್ದು, ಮಹಾನಗರ ಪಾಲಿಕೆ ಆಯುಕ್ತರು, ಉಪವಿಭಾಗಾಧಿಕಾರಿಗಳು ಹಾಗೂ ಪಂಚಾಯತ್ನಲ್ಲಿ ಕೈಗೊಂಡಿರುವ ಕ್ರಮಗಳ ಬಗ್ಗೆ ಸಿಇಒ ಪಿಪಿಟಿ ಮೂಲಕ ಮಾಹಿತಿ ನೀಡಿದರು.
ಎಲ್ಲ ಇಲಾಖೆಗಳ ಅಧಿಕಾರಿಗಳು ಸಭೆಯಲ್ಲಿದ್ದರು.
ಮಳೆ ಬಂದರೆ ನೀರು ರೇಷನಿಂಗ್ ಸ್ಥಗಿತ
ಮಂಗಳೂರು ಮಹಾನಗರಪಾಲಿಕೆ ವ್ಯಾಪ್ತಿಯಲ್ಲಿ ನೀರು ನಿರ್ವಹಣೆಗೆ ತೆರೆದ ಬಾವಿ ಹಾಗೂ ಬೋರ್ವೆಲ್ಗಳನ್ನು ಗುರುತಿಸಲಾಗಿದೆ. ಹೊಸದಾಗಿ 11 ಬೋರ್ವೆಲ್ಗಳು ಸೇರಿದಂತೆ ಒಟ್ಟು 135 ಬೋರ್ವೆಲ್ಗಳಿವೆ. 48 ತೆರೆದ ಬಾವಿಗಳಿದ್ದು, 26 ಬಾವಿಗಳನ್ನು ಸ್ವಚ್ಛಗೊಳಿಸಲಾಗಿದೆ. ಇನ್ನುಳಿದ ಬಾವಿಗಳನ್ನು ಎರಡು ದಿನಗಳೊಳಗಾಗಿ ಸ್ವಚ್ಛಗೊಳಿಸಲಾಗುವುದು. ನೀರಿನ ಶುದ್ಧತೆಯನ್ನು ಪರಿಶೀಲಿಸಲಾಗಿದೆ. ಮಳೆ ಬಂದರೆ ನೀರಿನ ರೇಷನಿಂಗ್ನ್ನು ಸ್ಥಗಿತಗೊಳಿಸಲಾಗುವುದು ಎಂದು ತಿಳಿಸಿದರು.
ಮಳೆಗಾಲ ಎದುರಿಸಲು ಜಿಲ್ಲಾಡಳಿತ ಸನ್ನದ್ಧ
ಮಳೆಗಾಲವನ್ನು ಎದುರಿಸಲು ದೋಣಿಗಳು, ಹೋಂಗಾರ್ಡ್ ಹಾಗೂ ಉಪಕರಣಗಳನ್ನು ಚೆಕ್ಲಿಸ್ಟ್ ಮಾಡಿದ್ದು ಎಲ್ಲವೂ ಸನ್ನದ್ಧ ಸ್ಥಿತಿಯಲ್ಲಿದೆ. ದುರಂತ ಸಂಭವಿಸಿದರೆ 24 ಗಂಟೆ ಹೆಚ್ಚೆಂದರೆ 48 ಗಂಟೆಯೊಳಗೆ ಪರಿಹಾರ ನೀಡಲು ಕ್ರಮ ಕೈಗೊಳ್ಳಲಾಗಿದೆ. ಕಂಟ್ರೋಲ್ ರೂಮ್ ಈಗಾಗಲೇ ವ್ಯವಸ್ಥಿತವಾಗಿದ್ದು, ಸೆಟ್ಲೈಟ್ ಫೋನ್ ಸಹ ನೀಡಲಾಗಿದೆ ಎಂದು ಜಿಲ್ಲಾಧಿಕಾರಿ ಸಸಿಕಾಂಥ್ ಸೆಂಥಿಲ್ ಹೇಳಿದರು.
ಜಿಲ್ಲೆಯಲ್ಲಿ ಮಳೆಗಾಲದಲ್ಲಿ ಮೂರು ಘಾಟಿಗಳಲ್ಲಿ ಭೂಕುಸಿತ ಸಂಭವಿಸುವ ಮುನ್ಸೂಚನೆಗಳಿದ್ದು, ನಿರ್ವಹಣೆ ಹೊಣೆ ಲೋಕೋಪಯೋಗಿ ಇಲಾಖೆಗೆ ನೀಡುವಂತೆ ಜಿಲ್ಲಾಧಿಕಾರಿಯು ಸಚಿವರಿಗೆ ಹೇಳಿದರು. ಈಗಾಗಲೇ ಪುತ್ತೂರು ಉಪವಿಭಾಗಾಧಿಕಾರಿಗೆ ಭೂಕುಸಿತ ನಿರ್ವಹಣೆಗೆ ನಿಗದಿತ ಘಾಟಿಗಳಲ್ಲಿ ಜೆಸಿಬಿ ಹಾಗೂ ಸಿಬ್ಬಂದಿಯನ್ನು ಇರಿಸಲು ಸೂಚಿಸಲಾಗಿದೆ ಎಂದು ಅವರು ತಿಳಿಸಿದರು.







