'ಅಪ್ಪ-ಮಕ್ಕಳು ಕಾಂಗ್ರೆಸನ್ನು ನಿರ್ನಾಮ ಮಾಡುತ್ತಾರೆ': ವೈರಲ್ ಆಯಿತು ಯಡಿಯೂರಪ್ಪ ಹೇಳಿಕೆ
ಬೆಂಗಳೂರು, ಮೇ 23: ವಿಧಾನಸಭೆಯ ಕಲಾಪದಲ್ಲಿ ಬಿ.ಎಸ್.ಯಡಿಯೂರಪ್ಪ ಸಚಿವ ಡಿ.ಕೆ.ಶಿವಕುಮಾರ್ರನ್ನು ಉದ್ದೇಶಿಸಿ ಮಾತನಾಡುತ್ತಾ ಅಪ್ಪ, ಮಕ್ಕಳು(ದೇವೇಗೌಡ, ಕುಮಾರಸ್ವಾಮಿ, ರೇವಣ್ಣ) ಸೇರಿ ಕಾಂಗ್ರೆಸ್ನ್ನು ನಿರ್ನಾಮ ಮಾಡದಿದ್ದರೆ ನನ್ನ ಹೆಸರು ಯಡಿಯೂರಪ್ಪ ಅಲ್ಲವೆಂದು ಹೇಳಿರುವುದು ಇದೀಗ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ.
ಬಿ.ಎಸ್.ಯಡಿಯೂರಪ್ಪ ಕಲಾಪದ ವೇಳೆ ಮಾತನಾಡುತ್ತಾ, ಶಿವಕುಮಾರ್ ಅವರೇ ನೀವು ನಾಳೆ ಪಶ್ಚತ್ತಾಪ ಪಡುವವರಿದ್ದೀರಿ. ಈ ನಾಡಿನ ಜನರ ನಂಬಿಕೆ ವಿಶ್ವಾಸಕ್ಕೆ ದ್ರೋಹ ಮಾಡಿದಂತಹ ವ್ಯಕ್ತಿ(ಎಚ್.ಡಿ.ಕುಮಾರಸ್ವಾಮಿ)ಯನ್ನು ಮುಖ್ಯಮಂತ್ರಿಯನ್ನಾಗಿ ಕೂರಿಸಲು ನೀವು ರಕ್ಷಣೆ ಕೊಟ್ಟಿದ್ದೀರಿ. ಇನ್ನು ಕೆಲವೇ ತಿಂಗಳಲ್ಲಿ ಕಾಂಗ್ರೆಸ್ ಅನ್ನುವಂತಹ ಹೆಸರನ್ನು ಇಲ್ಲದಂತೆ ಅಪ್ಪ-ಮಕ್ಕಳು ಸೇರಿ ನಿರ್ನಾಮ ಮಾಡದೇ ಇದ್ದರೆ ನನ್ನನ್ನು ಯಡಿಯೂರಪ್ಪ ಎಂದು ಕರೆಯಬೇಡಿ ಎಂದು ಸವಾಲೆಸೆದಿದ್ದರು.
ಇದೀಗ ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಹೀನಾಯವಾಗಿ ಸೋತ್ತಿರುವುದರ ಹಿನ್ನೆಲೆಯಲ್ಲಿ ವಾಟ್ಸ್ ಆ್ಯಪ್, ಫೇಸ್ಬುಕ್ಗಳಲ್ಲಿ ಯಡಿಯೂರಪ್ಪ ಅವರ ಈ ಹೇಳಿಕೆ ವೈರಲ್ ಆಗಿದ್ದು, ಚರ್ಚೆಗೆ ಕಾರಣವಾಗಿದೆ.