ಸ್ವರ್ಣೋದ್ಯಮಿಗಳ ದರೋಡೆ ಪ್ರಕರಣ: ಆರೋಪಿಗಳಿಗೆ 10ವರ್ಷ ಜೈಲು
ಕುಂದಾಪುರ, ಜೂ.8: ನಾಲ್ಕೂವರೆ ವರ್ಷಗಳ ಹಿಂದೆ ಬೈಂದೂರು ಸಮೀಪ ಉಪ್ಪುಂದದಲ್ಲಿ ನಡೆದ ಸ್ವರ್ಣೋದ್ಯಮಿಗಳ ದರೋಡೆ ಪ್ರಕರಣದ ಐವರು ಆರೋಪಿಗಳಿಗೆ 10 ವರ್ಷಗಳ ಕಾರಾಗೃಹ ಶಿಕ್ಷೆ ಹಾಗೂ ತಲಾ 20 ಸಾವಿರ ರೂ. ದಂಡ ವಿಧಿಸಿ ಕುಂದಾಪುರದ ಹೆಚ್ಚುವರಿ ಮತ್ತು ಜಿಲ್ಲಾ ಸತ್ರ ನ್ಯಾಯಾ ಲಯ ಶುಕ್ರವಾರ ತೀರ್ಪು ನೀಡಿದೆ.
ರವಿ ಜತ್ತನ್, ಶಿವ ಪ್ರಕಾಶ್, ಚಂದ್ರಹಾಸ, ಪ್ರದೀಪ್ ಪೂಜಾರಿ ಹಾಗೂ ದುರ್ಗಾಪ್ರಸಾದ್ ಶಿಕ್ಷೆಗೆ ಗುರಿಯಾದ ಆರೋಪಿಗಳು. ಇವರು 2014ರ ಅ.7 ರಂದು ಬೈಂದೂರು ತಾಲೂಕು ಉಪ್ಪುಂದ ಗ್ರಾಮದ ಸೋನರಕೇರಿ ಬಳಿಯ ಗದ್ದೆಯಲ್ಲಿ ಹೋಗುತ್ತಿದ್ದ ಉಪ್ಪುಂದದ ಚಿನ್ನದ ಅಂಗಡಿಯ ಮಾಲಕ ಸುಧೀಂದ್ರ ಶೇಟ್, ಅವರ ತಂದೆ ಗಣೇಶ್ ಶೇಟ್ ಹಾಗೂ ತಂಗಿಯನ್ನು ಅಡ್ಡಗಟ್ಟಿ ಚೂರಿಯಿಂದ ಇರಿದು ಸುಮಾರು 12ಲಕ್ಷ ರೂ. ಮೌಲ್ಯದ ಚಿನ್ನಾಭರಣಗಳನ್ನು ದರೋಡೆಗೈದಿದ್ದರು. ಈ ಬಗ್ಗೆ ಬೈಂದೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು.
ಈ ಬಗ್ಗೆ ವಿಚಾರಣೆ ನಡೆಸಿದ ನ್ಯಾಯಾಲಯ ಜೂ.3ರಂದು ಐವರು ಆರೋಪಿಗಳನ್ನು ದೋಷಿಗಳೆಂದು ತೀರ್ಪು ನೀಡಿ, ಶಿಕ್ಷೆಯ ಪ್ರಮಾಣವನ್ನು ಜೂ.7ಕ್ಕೆ ಪ್ರಕಟಿಸುವುದಾಗಿ ತಿಳಿಸಿತ್ತು. ಅದರಂತೆ ನ್ಯಾಯಾಧೀಶ ಪ್ರಕಾಶ ಖಂಡೇರಿ ಶುಕ್ರವಾರ ಶಿಕ್ಷೆ ಪ್ರಮಾಣವನ್ನು ಪ್ರಕಟಿಸಿದರು.
ಅಭಿಯೋಜನೆ ಪರವಾಗಿ ಜಿಲ್ಲಾ ಸರಕಾರಿ ಅಭಿಯೋಜಕ ಬೇಳೂರು ಪ್ರಕಾಶ್ಚಂದ್ರ ಶೆಟ್ಟಿ ವಾದಿಸಿದ್ದರು.





