ಯುವ ಬರಹಗಾರರ ಚೊಚ್ಚಲ ಕೃತಿಗೆ ಪ್ರೋತ್ಸಾಹ ಧನ
ಉಡುಪಿ, ಜೂ.21: ಕನ್ನಡ ಪುಸ್ತಕ ಪ್ರಾಧಿಕಾರದ ವತಿಯಿಂದ 2018ನೇ ಸಾಲಿನ ಯುವ ಬರಹಗಾರರ ಚೊಚ್ಚಲ ಕೃತಿಗಳನ್ನು ಪ್ರಕಟಿಸಲು, ಪ್ರೋತ್ಸಾಹ ಧನ ನೀಡಲು ಅರ್ಜಿಗಳನ್ನು ಆಹ್ವಾನಿಸಲಾಗಿದೆ.
ಅರ್ಜಿದಾರರು ಕನಿಷ್ಠ 18 ರಿಂದ 35 ವರ್ಷ ವಯೋಮಿತಿಯವರಾಗಿದ್ದು, ಸ್ವ-ವಿವರವುಳ್ಳ ಮನವಿಯೊಂದಿಗೆ ದೃಢೀಕೃತ ಎಸೆಸೆಲ್ಸಿ ಪ್ರಮಾಣ ಪತ್ರದ ಪ್ರತಿ ಅಥವಾ ಅಧಿಕೃತವಾದ, ದೃಢೀಕರಿಸಲ್ಪಟ್ಟ ಜನ್ಮ ದಾಖಲಾತಿ ಪ್ರಮಾಣ ಪತ್ರದ ಪ್ರತಿಯನ್ನು ಸಲ್ಲಿಸಬೇಕು. ಅಲ್ಲದೆ ಪ್ರಸ್ತುತ ಸಲ್ಲಿಸಲಡುತ್ತಿರುವ ಕೃತಿಯು ತಮ್ಮ ಚೊಚ್ಚಲ ಕೃತಿಯಾಗಿದ್ದು, ಎಲ್ಲಿಯೂ ಪ್ರಕಟವಾಗಿಲ್ಲವೆಂದು ಸ್ವಯಂ ದೃಢೀಕರಣ ಪತ್ರ ನೀಡಬೇಕು.
ಆಯ್ಕೆಗಾಗಿ ಸಲ್ಲಿಸುವ ಹಸ್ತಪ್ರತಿಯು ಡಿ.ಟಿ.ಪಿ. ಮಾಡಿಸಿದಾಗ ಕನಿಷ್ಠ 60 ಪುಟಗಳಿರಬೇಕು. ಅನುವಾದ, ಪಠ್ಯಪುಸ್ತಕ ಹಾಗೂ ಬೇರಾವುದೇ ಪದವಿಗೆ ಸಿದ್ಧಪಡಿಸಿದ ಪ್ರಬಂಧಗಳನ್ನು ಹೊರತುಪಡಿಸಿ, ಕಥೆ, ಕಾದಂಬರಿ, ಕವನ, ನಾಟಕ, ವಿರ್ಮಶಾ ಲೇಖನ, ಪ್ರಬಂಧ ಮುಂತಾದ ಕನ್ನಡ ಸಾಹಿತ್ಯದ ಪ್ರಕಾರಗಳಿಗೆ ಸಂಬಂಧಿಸಿದ ಹಸ್ತಪ್ರತಿ ಇರಬೇಕು.
ಅರ್ಜಿಗಳನ್ನು ಜು.6ರೊಳಗೆ ಆಡಳಿತಾಧಿಕಾರಿಗಳು, ಕನ್ನಡ ಪುಸ್ತಕ ಪ್ರಾಧಿಕಾರ, ಬೆಂಗಳೂರು, ಇವರಿಗೆ ಸಲ್ಲಿಸಬೇಕು. ಹೆಚ್ಚಿನ ಮಾಹಿತಿಗಾಗಿ ದೂರವಾಣಿ ಸಂಖ್ಯೆ: 080-22484516 /22017704ನ್ನು ಸಂಪರ್ಕಿಸುವಂತೆ ಪ್ರಕಟಣೆ ತಿಳಿಸಿದೆ.







