ಮಣಿಪಾಲದಲ್ಲಿ ಸುಸ್ಥಿರ ಸಂಚಾರ ವ್ಯವಸ್ಥೆ ರೂಪಿಸಲು ಯೋಜನೆ: ಜಿಲ್ಲಾಧಿಕಾರಿ

ಉಡುಪಿ, ಜೂ.29: ಮಣಿಪಾಲದಲ್ಲಿ ಸಂಚಾರ ದಟ್ಟಣೆಯನ್ನು ತಪ್ಪಿಸಲು ಹಾಗೂ ಸುಸ್ಥಿರ ಸಂಚಾರ ವ್ಯವಸ್ಥೆಗಾಗಿ ಜಿಲ್ಲಾಡಳಿತ ಹಾಗೂ ಮಣಿಪಾಲ ಮಾಹೆಯ ಸಹಯೋಗದಲ್ಲಿ ವ್ಯವಸ್ಥಿತ ಯೋಜನೆಯನ್ನು ರೂಪಿಸಲಾಗುವುದು ಎಂದು ಉಡುಪಿ ಜಿಲ್ಲಾಧಿಕಾರಿ ಹೆಪ್ಸಿಬಾ ರಾಣಿ ಕೊರ್ಲಪಾಟಿ ತಿಳಿಸಿದ್ದಾರೆ.
ಉಡುಪಿ ಜಿಲ್ಲಾಧಿಕಾರಿ ಕಚೇರಿಯಲ್ಲಿ ಶನಿವಾರ ನಡೆದ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡುತಿದ್ದರು. ಮಣಿಪಾಲದಲ್ಲಿ ಸಂಚಾರ ದಟ್ಟಣೆ ಯಿಂದ ವಾಹನ ಸವಾರರಿಗೆ ಮತ್ತು ಪಾದಚಾರಿಗಳಿಗೆ ತೊಂದರೆಯಾಗುತ್ತಿದೆ. ಪ್ರಸ್ತುತ ಮಣಿಪಾಲದಲ್ಲಿ ರಾಷ್ಟ್ರೀಯ ಹೆದ್ದಾರಿ ಕಾಮಗಾರಿ ನಡೆಯುತ್ತಿರುವುದ ರಿಂದ ಈ ಸಮಯದಲ್ಲೇ ಸುಸ್ಥಿರ ಸಂಚಾರ ವ್ಯವಸ್ಥೆಗೆ ಯೋಜನೆ ರೂಪಿಸಿದರೆ ಅನುಷ್ಠಾನ ಮಾಡಲು ಸುಲಭವಾಗಲಿದೆ. ಈ ಕುರಿತಂತೆ ಮಣಿಪಾಲ ವಿವಿ ಆರ್ಕಿಟೆಕ್ ವಿಭಾಗದಿಂದ ಸೂಕ್ತ ಯೋಜನೆ ತಯಾರಿಸಿ ನೀಡುವಂತೆ ಸೂಚಿಸಲಾಗಿದೆ ಎಂದರು.
ಸುಸ್ಥಿರ ಸಂಚಾರ ವ್ಯವಸ್ಥೆ ಯೋಜನೆ ರೂಪಿಸುವಾಗ ಪಾದಚಾರಿಗಳಿಗೆ ಪುಟ್ಪಾತ್ ವ್ಯವಸ್ಥೆ, ವಾಹನ ನಿಲುಗಡೆಗೆ ಸೂಕ್ತ ವ್ಯವಸ್ಥೆ, ಬಸ್ ನಿಲುಗಡೆಗೆ ವ್ಯವಸ್ಥೆ, ಬೈಸಿಕಲ್ ಟ್ರಾಕ್ ಸೇರಿದಂತೆ ಸಂಚಾರಿ ಸಂಬಂಧಿತ ಎಲ್ಲಾ ರೀತಿಯ ಅವಶ್ಯಕತೆಗಳನ್ನು ಪೂರೈಸಲಾಗುವುದು. ಹೀಗೆ ಈ ಯೋಜನೆಯನ್ನು ಅತ್ಯಂತ ವ್ಯವಸ್ಥಿತವಾಗಿ ತಯಾರಿಸಲಾಗುವುದು. ಈ ಕುರಿತಂತೆ ರಾಷ್ಟ್ರೀಯ ಹೆದ್ದಾರಿ ಅಧಿಕಾರಿಗಳೊಂದಿಗೆ ಕೂಡ ಸಭೆ ನಡೆಸಿ ಸೂಕ್ತ ಸೂಚನೆ ನೀಡಲಾಗುವುದು ಎಂದು ಅವರು ಹೇಳಿದರು.
ಸಭೆಯಲ್ಲಿ ಮಣಿಪಾಲ ಮಾಹೆಯ ಆರ್ಕಿಟೆಕ್ ವಿಭಾಗದ ಮುಖ್ಯಸ್ಥರು ಹಾಗೂ ಮಣಿಪಾಲ ಸಂಸ್ಥೆಯ ಪ್ರಮುಖರು ಉಪಸ್ಥಿತರಿದ್ದರು.







