ಸಕಲ ಸರಕಾರಿ ಗೌರವದೊಂದಿಗೆ ಗೋಪಾಲ್ ಭಂಡಾರಿ ಅಂತ್ಯಕ್ರಿಯೆ
ಹೆಬ್ರಿ, ಜು.5: ಹೃದಯಾಘಾತದಿಂದ ಗುರುವಾರ ರಾತ್ರಿ ನಿಧನರಾದ ಕಾರ್ಕಳ ಕ್ಷೇತ್ರದ ಮಾಜಿ ಶಾಸಕ ಗೋಪಾಲ್ ಭಂಡಾರಿ ಅವರ ಅಂತ್ಯಕ್ರಿಯೆ ಇಂದು ಕಾರ್ಕಳ ಹೆಬ್ರಿಯ ಅವರ ಸ್ವಗೃಹದ ಜಮೀನಿನಲ್ಲಿ ಸಕಲ ಸರಕಾರಿ ಗೌರವಗಳೊಂದಿಗೆ ನಡೆಯಿತು.
ಉಡುಪಿ ಜಿಲ್ಲಾಡಳಿತ ಹಾಗೂ ಜಿಲ್ಲಾ ಪೊಲೀಸ್ ವತಿಯಿಂದ ಅಂತಿಮ ವಿಧಿವಿಧಾನ ಸಲ್ಲಿಸುವ ಮೊದಲು ಮೂರು ಸುತ್ತು ಕುಶಾಲು ತೋಪು ಹಾರಿಸುವ ಮೂಲಕ ಗೌರವದ ವಿದಾಯ ಸಲ್ಲಿಸಲಾಯಿತು. ರಾಜ್ಯ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಹಾಗೂ ಜಿಲ್ಲಾ ಉಸ್ತುವಾರಿ ಸಚಿವೆ ಡಾ.ಜಯಮಾಲ ಸರಕಾರದ ಪರವಾಗಿ ಅಂತಿಮ ಗೌರವ ಸಲ್ಲಿಸಿದರು.
ರಾಜ್ಯ ವಿಧಾನ ಸಭೆಯ ಸ್ಪೀಕರ್ ಪ್ರತಾಪ್ಚಂದ್ರ ಶೆಟ್ಟಿ, ಮಾಜಿ ಮುಖ್ಯ ಮಂತ್ರಿ ಡಾ.ಎಂ.ವೀರಪ್ಪಮೊಯ್ಲಿ, ಶಾಸಕರಾದ ಸುನಿಲ್ ಕುಮಾರ್, ರಾಜೇ ಗೌಡ, ಮಾಜಿ ಸಚಿವರಾದ ವಿನಯಕುಮಾರ್ ಸೊರಕೆ, ಪ್ರಮೋದ್ ಮಧ್ವರಾಜ್, ಮಾಜಿ ಶಾಸಕರಾದ ಯು.ಆರ್.ಸಭಾಪತಿ, ಎ.ಜಿ.ಕೋಡ್ಗಿ, ಎಸ್ಪಿ ನಿಶಾ ಜೇಮ್ಸ್, ವಿವಿಧ ಪಕ್ಷಗಳ ಮುಖಂಡರು, ಕಾರ್ಯಕರ್ತರು, ಸರಕಾರಿ ಇಲಾಖೆಯ ಅಧಿಕಾರಿಗಳು ಅಂತಿಮ ನಮನ ಸಲ್ಲಿಸಿದರು.
ಸಂತಾಪ: ಮಾಜಿ ಶಾಸಕ ಗೋಪಾಲ ಭಂಡಾರಿ ಅಕಾಲಿಕ ಮರಣಕ್ಕೆ ಸಿಪಿಐಎಂ ಉಡುಪಿ ಜಿಲ್ಲಾ ಸಮಿತಿ ಕಾರ್ಯದರ್ಶಿ ಬಾಲಕೃಷ್ಣ ಶೆಟ್ಟಿ ಹಾಗೂ ಉಡುಪಿ ಧರ್ಮಪ್ರಾಂತ್ಯದ ಧರ್ಮಾಧ್ಯಕ್ಷ ಅ.ವಂ.ಡಾ.ಜೆರಾಲ್ಡ್ ಐಸಾಕ್ ಲೋಬೊ ತೀವ್ರ ಸಂತಾಪ ವ್ಯಕ್ತಪಡಿಸಿದ್ದಾರೆ.