ಬ್ರಹ್ಮಾವರ ವಲಯ ಮಟ್ಟದ ಕ್ರೀಡಾಕೂಟದ ಪೂರ್ವಭಾವಿ ಸಭೆ
ಉಡುಪಿ, ಜು.11: ಉಡುಪಿ ಜಿಲ್ಲಾ ಪಂಚಾಯತ್, ಸಾರ್ವಜನಿಕ ಶಿಕ್ಷಣ ಇಲಾಖೆ, ಕ್ಷೇತ್ರ ಶಿಕ್ಷಣಾಧಿಕಾರಿಯವರ ಕಛೇರಿ ಬ್ರಹ್ಮಾವರ ಹಾಗೂ ಹೂಡೆ ಸಾಲಿಹಾತ್ ಆಂಗ್ಲ ಮಾಧ್ಯಮಗಳ ಸಂಯುಕ್ತ ಆಶ್ರಯದಲ್ಲಿ 2019-20ನೇ ಶೈಕ್ಷಣಿಕ ಸಾಲಿನ ಬ್ರಹ್ಮಾವರ ತಾಲೂಕು ಮಟ್ಟದ ಕ್ರೀಡಾಕೂಟ ಹಾಗೂ ಪಂದ್ಯಾಟಗಳ ಪೂರ್ವಭಾವಿ ಸಭೆ ಇತ್ತೀಚೆಗೆ ಶಾಲೆಯಲ್ಲಿ ಜರಗಿತು.
ಸಭೆಯನ್ನು ಗಿಡಕ್ಕೆ ನೀರು ಎರೆಯುವುದರ ಮೂಲಕ ಉದ್ಘಾಟಿಸಿದ ಉಡುಪಿ ಜಿಲ್ಲಾ ದೈಹಿಕ ಪರಿವೀಕ್ಷಣಾಧಿಕಾರಿ ಮಧುಕರ ಮಾತನಾಡಿ, ಕ್ರೀಡಾಸ್ಫೂರ್ತಿ ಯಿಂದ ವಿದ್ಯಾರ್ಥಿಗಳು ಆರೋಗ್ಯವಂತರಾಗಿರಲು ಸಾಧ್ಯ. ಇತ್ತೀಚಿಗಿನ ಜೀವನ ಶೈಲಿಯನ್ನು ಗಮನಿಸಿದರೆ ವಿದ್ಯಾರ್ಥಿಗಳಲ್ಲಿ ದೈಹಿಕ ಪರಿಶ್ರಮ ಕಡಿಮೆ ಯಾಗುತ್ತಿರುವುದು ಕಂಡುಬರುತ್ತದೆ. ಹೀಗಾಗಿ ಆರೋಗ್ಯವಂತ ಸಮಾಜಕ್ಕಾಗಿ ದೈಹಿಕ ಶಿಕ್ಷಣಕ್ಕೆ ಹೆಚ್ಚು ಒತ್ತು ನೀಡುವ ಕೆಲಸ ಮಾಡಬೇಕು ಎಂದರು.
ಸಾಲಿಹಾತ್ ಸಮೂಹ ಶಿಕ್ಷಣ ಸಂಸ್ಥೆಗಳ ಆಡಳಿತಾಧಿಕಾರಿ ಅಸ್ಲಂ ಹೈಕಾಡಿ, ತಾಲೂಕು ದೈಹಿಕ ಶಿಕ್ಷಣ ಪರಿವೀಕ್ಷಣಾಧಿಕಾರಿ ಭುಜಂಗ ಶೆಟ್ಟಿ, ಬ್ರಹ್ಮಾವರ ವಲಯ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಅಧ್ಯಕ್ಷ ದಿನಕರ ಶೆಟ್ಟಿ, ಜಿಲ್ಲಾ ಕಾರ್ಯದರ್ಶಿ ಪ್ರಕಾಶ್ ಬಿ.ಬಿ., ಬ್ರಹ್ಮಾವರ ವಲಯ ಅನುದಾನಿತ ಶಾಲಾ ಶಿಕ್ಷಕರ ಸಂಘದ ಅಧ್ಯಕ್ಷ ಶಾಂತರಾಜ ಶೆಟ್ಟಿ, ಉಡುಪಿ ವಲಯ ಅಧ್ಯಕ್ಷ ಅರುಣ ಶೆಟ್ಟಿ, ಬ್ರಹ್ಮಾವರ ವಲಯ ದೈಹಿಕ ಶಿಕ್ಷಣ ಶಿಕ್ಷಕರ ಸಂಘದ ಅಧ್ಯಕ್ಷ ಸತೀಶ್ಚಂದ್ರ ಶೆಟ್ಟಿ, ಗರಡಿಮಜಲು ಕ್ಲಸ್ಟರ್ ಸಿಆರ್ಪಿ ಜ್ಯೋತಿಕಲಾ ಉಪಸ್ಥಿತರಿದ್ದರು.
ಶಾಲಾ ಆಡಳಿತಾಧಿಕಾರಿ ಅಸ್ಲಂ ಹೈಕಾಡಿ ಸ್ವಾಗತಿಸಿದರು. ಶಿಕ್ಷಕ ಸತೀಶ್ಚಂದ್ರ ಶೆಟ್ಟಿ ವಂದಿಸಿದರು. ಶಿಕ್ಷಕ ಶ್ರೀಕಾಂತ್ ಸಾಮಂತ ಕಾರ್ಯಕ್ರಮ ನಿರೂಪಿಸಿದರು.