ಸ್ವಚ್ಛತಾ ಕಾಳಜಿ ವಹಿಸದಿದ್ದರೆ ದಂಡ: ದ.ಕ. ಜಿಪಂ ಸಿಇಒ
ಮಲೇರಿಯಾ-ಡೆಂಗ್ ನಿಯಂತ್ರಣ ಸಭೆ

ಮಂಗಳೂರು, ಜು.12: ಶಾಲಾ-ಕಾಲೇಜು, ಅಂಗನವಾಡಿ ಕಟ್ಟಡಗಳ ಸುತ್ತಮುತ್ತ, ಗುಜರಿ ಅಂಗಡಿಗಳ ಪ್ರದೇಶದಲ್ಲಿ ಸ್ವಚ್ಛತೆಯ ಬಗ್ಗೆ ಕಾಳಜಿ ವಹಿಸಬೇಕು. ಇಲ್ಲವಾದಲ್ಲಿ ದಂಡ ವಿಧಿಸಲಾಗುವುದು ಎಂದು ಜಿಪಂ ಸಿಇಒ ಡಾ.ಆರ್. ಸೆಲ್ವಮಣಿ ಎಚ್ಚರಿಕೆ ನೀಡಿದ್ದಾರೆ.
ಮಂಗಳೂರಿನ ದ.ಕ. ಜಿಪಂ ಸಭಾಂಗಣದಲ್ಲಿ ಶುಕ್ರವಾರ ನಡೆದ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ಎನ್ವಿಬಿಸಿಪಿ ಕಾರ್ಯಕ್ರಮದಡಿ ಡೆಂಗ್ ವಿರೋಧಿ ಮಾಸಾಚರಣೆ ಪ್ರಯುಕ್ತ ಅಂತರ್ ಇಲಾಖಾ ಸಮನ್ವಯ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.
ಮಂಗಳೂರಿನಲ್ಲಿ ಮಲೇರಿಯಾ ಹಾಗೂ ಡೆಂಗ್ ಹೆಚ್ಚುತ್ತಿರುವ ಪ್ರದೇಶಗಳಿಗೆ ಮಹಾನಗರ ಪಾಲಿಕೆಯ ಎಂಪಿಡಬ್ಯೂ ಕಾರ್ಮಿಕರಿಂದ ನಿರಂತರ ಸಮೀಕ್ಷೆ ಹಾಗೂ ಸೊಳ್ಳೆಗಳ ಉತ್ಪತ್ತಿ ಪ್ರದೇಶಗಳನ್ನು ನಾಶಪಡಿಸಲು ಕ್ರಮ ಕೈಗೊಳ್ಳಲು ಜಿಪಂ ಸಿಇಒ ಮಹಾನಗರ ಪಾಲಿಕೆಗೆ ನಿರ್ದೇಶನ ನೀಡಿದರು.
ಅತಿಹೆಚ್ಚು ಮಲೇರಿಯಾ ಹಾಗೂ ಡೆಂಗ್ ವರದಿಯಾಗಿರುವ ಪ್ರದೇಶಗಳಿಗಲ್ಲಿ ಆರೋಗ್ಯ ಇಲಾಖಾ ಅಧಿಕಾರಿಗಳು ನಿರಂತರ ಭೇಟಿ ನೀಡಬೇಕು. ನಿಯಂತ್ರಣದ ಬಗ್ಗೆ ಸೂಕ್ರ ಕ್ರಮ ಕೈಗೊಳ್ಳಬೇಕು ಎಂದು ಹೇಳಿದರು.
ಸಭೆಯಲ್ಲಿ ಜಿಲ್ಲಾ ಆರೋಗ್ಯಾಧಿಕಾರಿ ಡಾ.ರಾಮಕೃಷ್ಣ ರಾವ್, ಕುಟುಂಬ ಕಲ್ಯಾಣ ಅಧಿಕಾರಿ ಡಾ.ಸಿಕಂದರ್ ಪಾಷಾ, ಡಿಡಿಪಿಐ ವೈ.ಶಿವರಾಮಯ್ಯ ಹಾಗೂ ವಿವಿಧ ಇಲಾಖೆಯ ಸಮಿತಿಯ ಸದಸ್ಯರು ಉಪಸ್ಥಿತರಿದ್ದರು.







