ಎಪಿಪಿ ನೇಮಕದಲ್ಲಿ ಅಕ್ರಮ ಕಳಂಕಿತರ ವಿರುದ್ಧ ಕೈಗೊಳ್ಳುವ ಕ್ರಮದ ಬಗ್ಗೆ ತಿಳಿಸಿ: ಹೈಕೋರ್ಟ್
ಬೆಂಗಳೂರು, ಜು.17: ಸಹಾಯಕ ಸರಕಾರಿ ಅಭಿಯೋಜಕರ(ಅಸಿಸ್ಟೆಂಟ್ ಪಬ್ಲಿಕ್ ಪ್ರಾಸಿಕ್ಯೂಟರ್-ಎಪಿಪಿ) ನೇಮಕದಲ್ಲಿ ನಡೆದಿರುವ ಅಕ್ರಮ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಪಟ್ಟಿಯಲ್ಲಿ ಹೆಸರಿಸಿರುವ ಕಳಂಕಿತ 61 ಮಂದಿ ವಿರುದ್ಧ ಯಾವ ಕ್ರಮ ಕೈಗೊಳ್ಳಲಾಗುತ್ತದೆ. ಅಲ್ಲದೆ, ಈ ವಿಚಾರದಲ್ಲಿ ಸರಕಾರದ ನಿಲುವು ಏನು ಎಂಬುದನ್ನು ಜು.31ಕ್ಕೆ ತಿಳಿಸಲು ಹೈಕೋರ್ಟ್ ರಾಜ್ಯ ಸರಕಾರಕ್ಕೆ ಸೂಚಿಸಿದೆ.
ಈ ಕುರಿತು ಸಮಾಜ ಪರಿವರ್ತನಾ ಸಮುದಾಯದ ಸಂಸ್ಥಾಪಕ ಅಧ್ಯಕ್ಷ ಎಸ್.ಆರ್.ಹಿರೇಮಠ ಮತ್ತು ಸುಧಾ ಕಟ್ಟಾ ಸಲ್ಲಿಸಿರುವ ಸಾರ್ವಜನಿಕ ಹಿತಾಸಕ್ತಿ ಅರ್ಜಿ ವಿಚಾರಣೆ ಮುಖ್ಯ ನ್ಯಾಯಮೂರ್ತಿ ಎ.ಎಸ್.ಓಕ್ ಮತ್ತು ನ್ಯಾಯಮೂರ್ತಿ ಎಚ್.ಟಿ.ನರೇಂದ್ರಪ್ರಸಾದ್ ಅವರಿದ್ದ ವಿಭಾಗೀಯ ನ್ಯಾಯಪೀಠದಲ್ಲಿ ನಡೆಯಿತು. ಎಪಿಪಿಗಳ ನೇಮಕದಲ್ಲಿ 61 ಮಂದಿ ವಿರುದ್ಧ ಆರೋಪಪಟ್ಟಿ ಸಲ್ಲಿಕೆಯಾಗಿದೆ. ಹೀಗಾಗಿ, ಇವರುಗಳನ್ನು ಸೇವೆಯಲ್ಲಿ ಮುಂದುವರಿಸುವ ಬಗ್ಗೆ ಸರಕಾರ ಕ್ರಮ ಕೈಗೊಳ್ಳಬೇಕಾಗುತ್ತದೆ ಎಂದು ನ್ಯಾಯಪೀಠವು ತಿಳಿಸಿತು.
ಅರ್ಜಿದಾರರ ಪರ ವಾದಿಸಿದ ವಕೀಲ ಡಿ.ಉಮಾಪತಿ ಅವರು, ಎಪಿಪಿ ನೇಮಕ ಅಕ್ರಮದಲ್ಲಿ ಲೋಕಾಯುಕ್ತ ಪೊಲೀಸರು ತನಿಖೆ ನಡೆಸಿ 2018ರಲ್ಲಿ 61 ಅಭ್ಯರ್ಥಿಗಳು ಹಾಗೂ ಅಭಿಯೋಜನಾ ಇಲಾಖೆ ಅಧಿಕಾರಿಗಳ ವಿರುದ್ಧ ಆರೋಪಪಟ್ಟಿಯನ್ನು ಸಲ್ಲಿಸಿದೆ. ಆದರೆ ಆನಂತರ ಆ ಪ್ರಕರಣದ ವಿಚಾರಣೆ ಮುಕ್ತಾಯವಾಗಿ ಯಾರಿಗೂ ಶಿಕ್ಷೆ ಆಗಿಲ್ಲ, ಸರಕಾರವೂ ಕಳಂಕಿತ ಎಪಿಪಿಗಳ ವಿರುದ್ಧ ಯಾವುದೇ ಕ್ರಮ ಕೈಗೊಂಡಿಲ್ಲ ಎಂದು ಪೀಠಕ್ಕೆ ತಿಳಿಸಿದರು.
ಅಭಿಯೋಜನಾ ಇಲಾಖೆ 2012ರಲ್ಲಿ 197 ಎಪಿಪಿಗಳ ಹುದ್ದೆ ಭರ್ತಿಗೆ ಅಧಿಸೂಚನೆ ಹೊರಡಿಸಿತ್ತು. ಅದಕ್ಕಾಗಿ 2013ರಲ್ಲಿ ಪ್ರಿಲಿಮಿನರಿ ಹಾಗೂ 2014ರಲ್ಲಿ ಮುಖ್ಯಪರೀಕ್ಷೆ ನಡೆದಿತ್ತು. 197 ಮಂದಿಯನ್ನು ನೇಮಕ ಮಾಡಿ ಅವರಿಗೆ ನೇಮಕ ಪತ್ರಗಳನ್ನೂ ಸಹ ನೀಡಲಾಗಿತ್ತು. ಆನಂತರ 2014ರಲ್ಲಿ ಉತ್ತರ ಪತ್ರಿಕೆಗಳ ಗೋಲ್ಮಾಲ್ ವಿಚಾರ ಹೊರಬಂದಿತ್ತು. ಆಗ ಲೋಕಾಯುಕ್ತ ಕೋರ್ಟ್ ತನಿಖೆಗೆ ಆದೇಶ ನೀಡಿತ್ತು. ಸಮಗ್ರ ತನಿಖೆ ನಡೆಸಿದ್ದ ಲೋಕಾಯುಕ್ತ ಪೊಲೀಸರು 2018ರ ಮಾ.15ರಂದು ಅಧೀನ ನ್ಯಾಯಾಲಯದಲ್ಲಿ ಆರೋಪ ಪಟ್ಟಿಯನ್ನು ಸಲ್ಲಿಸಿದ್ದರು.