ಬಿ.ಶ್ರೀರಾಮುಲುಗೆ ಉಪಮುಖ್ಯಮಂತ್ರಿ ಸ್ಥಾನ ನೀಡಲು ಆಗ್ರಹ
ಬೆಂಗಳೂರು, ಜು. 24: ಬಿಜೆಪಿ ಉಪಾಧ್ಯಕ್ಷ, ವಾಲ್ಮೀಕಿ ಸಮುದಾಯದ ಹಿರಿಯ ಮುಖಂಡ ಹಾಗೂ ಮೊಳಕಾಲ್ಮೂರು ಕ್ಷೇತ್ರದ ಶಾಸಕ ಬಿ.ಶ್ರೀರಾಮುಲು ಅವರನ್ನು ಉಪ ಮುಖ್ಯಮಂತ್ರಿಯನ್ನಾಗಿ ಮಾಡಬೇಕು ಎಂದು ಆಗ್ರಹಿಸಲಾಗುತ್ತಿದೆ.
ಬಿಜೆಪಿ ಹೆಚ್ಚಿನ ಸ್ಥಾನಗಳನ್ನು ಗೆಲ್ಲಲು ಪ್ರಮುಖ ಕಾರಣಕರ್ತರೂ ಆಗಿರುವ ಶ್ರೀರಾಮುಲು, ಮೀಸಲು ಕ್ಷೇತ್ರಗಳಲ್ಲಿ ಪಕ್ಷದ ಶಾಸಕರ ಗೆಲುವಿಗೆ ಶ್ರಮಿಸಿದ್ದಾರೆ. ಹೀಗಾಗಿ ಅವರಿಗೆ ಉಪಮುಖ್ಯಮಂತ್ರಿ ಸ್ಥಾನವನ್ನು ನೀಡಬೇಕು ಎಂದು ವಾಲ್ಮೀಕಿ ಸಮುದಾಯ ಸಂಘಟನೆಗಳು ಒತ್ತಾಯಿಸಿವೆ.
ಶ್ರೀರಾಮುಲು ಅವರನ್ನು ಡಿಸಿಎಂ ಹಾಗೂ ಕೊಪ್ಪಳದ ಕನಕಗಿರಿ ಕ್ಷೇತ್ರದ ಶಾಸಕ ಬಸವರಾಜ ದಡೆಸೂಗೂರು ಅವರನ್ನು ಸಚಿವರನ್ನಾಗಿ ಮಾಡಬೇಕು ಎಂದು ಕೊಪ್ಪಳದಲ್ಲಿ ಶಾಸಕ ಬಸವರಾಜ ದಡೆಸೂಗೂರು ಅವರು ಅಭಿಮಾನಿಗಳು ಮನವಿ ಮಾಡಿದ್ದಾರೆ.
ಚುನಾವಣೆ ವೇಳೆ ಪರಿವರ್ತನಾ ರ್ಯಾಲಿಯಲ್ಲಿ ಮಾತನಾಡಿದ್ದ ಯಡಿಯೂರಪ್ಪ, ರಾಜ್ಯದಲ್ಲಿ ಬಿಜೆಪಿ ಅಧಿಕಾರಕ್ಕೆ ಬಂದರೆ ಕನಕಗಿರಿ ಕ್ಷೇತ್ರ ದತ್ತು ಪಡೆದು ಅಭಿವೃದ್ಧಿಪಡಿಸುವ ವಾಗ್ದಾನ ನೀಡಿದ್ದರು. ಹೀಗಾಗಿ ಶಾಸಕರಾಗಿ ದಡೆಸೂಗೂರು ಆಯ್ಕೆಯಾಗಿದ್ದು, ಅವರನ್ನು ಸಚಿವರನ್ನಾಗಿ ಮಾಡಬೇಕೆಂದು ಆಗ್ರಹಿಸಲಾಗಿದೆ.