ಬಿಎಸ್ವೈ ಬಹುಮತ ಸಾಬೀತು ನಿಶ್ಚಿತ: ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ
ಬೆಂಗಳೂರು, ಜು.27: ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಸೋಮವಾರ ವಿಧಾನಸಭೆಯಲ್ಲಿ ಬಹುಮತ ಸಾಬೀತುಪಡಿಸುವುದು ನಿಶ್ಚಿತ ಎಂದು ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ವಿಶ್ವಾಸ ವ್ಯಕ್ತಪಡಿಸಿದರು.
ಶನಿವಾರ ನಗರದ ಡಾಲರ್ಸ್ ಕಾಲನಿಯಲ್ಲಿರುವ ಯಡಿಯೂರಪ್ಪ ನಿವಾಸಕ್ಕೆ ಭೇಟಿ ನೀಡಿದ ವೇಳೆ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಯಡಿಯೂರಪ್ಪ ಒಬ್ಬ ಹೋರಾಟಗಾರ, ರೈತ ಪರವಾದ ಪ್ರಶ್ನಾತೀತ ನಾಯಕ. ಮೊದಲ ಸಚಿವ ಸಂಪುಟ ಸಭೆಯಲ್ಲಿ ರೈತ ಪರವಾದ ನಿಲುವು ಕೈಗೊಳ್ಳುವ ಮೂಲಕ ಸರಕಾರದ ಆದ್ಯತೆಯನ್ನು ಸ್ಪಷ್ಟಪಡಿಸಿದ್ದಾರೆ ಎಂದರು.
ಯಡಿಯೂರಪ್ಪರನ್ನು ಸೌಹಾರ್ದಯುತವಾಗಿ ಭೇಟಿ ಮಾಡಿ ಅಭಿನಂದನೆ ಸಲ್ಲಿಸಿದ್ದೇನೆ. ಸಚಿವ ಸಂಪುಟ ವಿಸ್ತರಣೆ ಕುರಿತು ಹೈಕಮಾಂಡ್ ಜೊತೆ ಚರ್ಚೆ ನಡೆಸಿದ ಬಳಿಕ ಅಂತಿಮ ತೀರ್ಮಾನ ಕೈಗೊಳ್ಳಲಾಗುವುದು ಎಂದು ಪ್ರಹ್ಲಾದ್ ಜೋಶಿ ತಿಳಿಸಿದರು.
ವಿಧಾನಪರಿಷತ್ ಸದಸ್ಯ ಎನ್.ರವಿಕುಮಾರ್ ಮಾತನಾಡಿ, ಮುಖ್ಯಮಂತ್ರಿ ಯಡಿಯೂರಪ್ಪ ನೂರಕ್ಕೆ ನೂರರಷ್ಟು ಬಹುಮತ ಸಾಬೀತುಪಡಿಸಲಿದ್ದಾರೆ. ಬೇರೆ ಯಾವುದೇ ಪಕ್ಷದ ಬೆಂಬಲವಿಲ್ಲದೆ ನಾವು ವಿಶ್ವಾಸಮತದಲ್ಲಿ ಗೆಲುವು ಸಾಧಿಸಲಿದ್ದೇವೆ ಎಂದರು.
ಬಿಜೆಪಿ ಸರಕಾರಕ್ಕೆ ಜೆಡಿಎಸ್ ಪಕ್ಷ ಬಾಹ್ಯ ಬೆಂಬಲ ನೀಡುವ ವಿಚಾರದಲ್ಲಿ ಆ ಪಕ್ಷದ ವರಿಷ್ಠರು ಪ್ರಸ್ತಾವನೆ ಸಲ್ಲಿಸಿದರೆ, ನಮ್ಮ ಹೈಕಮಾಂಡ್ ಚರ್ಚಿಸಿ ಸೂಕ್ತ ತೀರ್ಮಾನ ಕೈಗೊಳ್ಳಲಿದೆ. ಬಿಜೆಪಿ ಉತ್ತಮ ಸರಕಾರ ನೀಡಲಿದೆ ಎಂದು ಅಭಿಪ್ರಾಯ ವ್ಯಕ್ತಪಡಿಸಿರುವ ಜೆಡಿಎಸ್ ಶಾಸಕರ ನಡೆ ಸ್ವಾಗತಾರ್ಹ ಎಂದು ಅವರು ಹೇಳಿದರು.