ದ.ಕ. ಜಿಲ್ಲೆಗೆ ಬೆಂಕಿ ಹಚ್ಚುವ ಹೇಳಿಕೆ: ಪ್ರಕರಣ ರದ್ದು ಕೋರಿ ಹೈಕೋರ್ಟ್ ಮೆಟ್ಟಿಲೇರಿದ ಸಂಸದ ನಳಿನ್
![ದ.ಕ. ಜಿಲ್ಲೆಗೆ ಬೆಂಕಿ ಹಚ್ಚುವ ಹೇಳಿಕೆ: ಪ್ರಕರಣ ರದ್ದು ಕೋರಿ ಹೈಕೋರ್ಟ್ ಮೆಟ್ಟಿಲೇರಿದ ಸಂಸದ ನಳಿನ್ ದ.ಕ. ಜಿಲ್ಲೆಗೆ ಬೆಂಕಿ ಹಚ್ಚುವ ಹೇಳಿಕೆ: ಪ್ರಕರಣ ರದ್ದು ಕೋರಿ ಹೈಕೋರ್ಟ್ ಮೆಟ್ಟಿಲೇರಿದ ಸಂಸದ ನಳಿನ್](https://www.varthabharati.in/sites/default/files/images/articles/2019/08/6/204084-1565105389.jpg)
ಬೆಂಗಳೂರು, ಆ.6: ದಕ್ಷಿಣ ಕನ್ನಡ ಜಿಲ್ಲೆಗೆ ಬೆಂಕಿ ಹಚ್ಚುವುದಾಗಿ ವಿವಾದಾತ್ಮಕ ಹೇಳಿಕೆ ನೀಡಿದ ಹಿನ್ನೆಲೆಯಲ್ಲಿ ತಮ್ಮ ವಿರುದ್ಧ ದಾಖಲಾಗಿರುವ ಎಫ್ಐಆರ್ ಹಾಗೂ ಚಾರ್ಜ್ಶೀಟ್ ರದ್ದುಕೋರಿ ದ.ಕ.ಸಂಸದ ನಳಿನ್ಕುಮಾರ್ ಕಟೀಲ್ ಹೈಕೋರ್ಟ್ಗೆ ಅರ್ಜಿ ಸಲ್ಲಿಸಿದ್ದಾರೆ.
ಅರ್ಜಿಯು ಇನ್ನಷ್ಟೇ ವಿಚಾರಣೆಗೆ ಬರಬೇಕಾಗಿದೆ. 2017ರಲ್ಲಿ ನಳಿನ್ಕುಮಾರ್ ಕಟೀಲ್ ಅವರು ಬಿಜೆಪಿ ಕಾರ್ಯಕರ್ತ ಕಾರ್ತಿಕ್ ರಾಜ್ನನ್ನು ಕೊಲೆ ಮಾಡಿದ ಆರೋಪಿಗಳನ್ನು ಬಂಧಿಸದಿದ್ದರೆ ಇಡೀ ದಕ್ಷಿಣ ಕನ್ನಡ ಜಿಲ್ಲೆಗೆ ಬೆಂಕಿ ಹಚ್ಚುವುದಾಗಿ ವಿವಾದಾತ್ಮಕ ಹೇಳಿಕೆ ನೀಡಿದ್ದರು. ಈ ಹಿನ್ನೆಲೆಯಲ್ಲಿ ಉಳ್ಳಾಲ ನಿವಾಸಿ ಸಂತೋಷ್ ಕುಮಾರ್ ಶೆಟ್ಟಿ ಎಂಬುವವರು ನಳಿನ್ಕುಮಾರ್ ಕಟೀಲ್ ವಿರುದ್ಧ ಕೊಣಾಜೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿದ್ದರು. ಹಾಗೂ ಕೊಣಾಜೆ ಪೊಲೀಸರೂ ತಾವೆ ಖುದ್ದಾಗಿ ಪ್ರಕರಣ ದಾಖಲಿಸಿಕೊಂಡು ಮಂಗಳೂರು ಜೆಎಂಎಫ್ಸಿ ಕೋರ್ಟ್ಗೆ ತನಿಖೆ ನಡೆಸಿ ಜಾರ್ಜ್ಶೀಟ್ ಸಲ್ಲಿಸಿದ್ದರು.
ಸದ್ಯ ಈ ದೂರಿನ ವಿಚಾರಣೆ ಬೆಂಗಳೂರಿನ ಸಿಸಿಎಚ್ ಕೋರ್ಟ್ನಲ್ಲಿ ನಡೆಯುತ್ತಿದೆ. ಇದೇ ಕೇಸ್ನಲ್ಲಿ ಸೋಮವಾರ್ ಕಟೀಲ್ ವಿರುದ್ಧ ಸಿಸಿಎಚ್ ಕೋರ್ಟ್ ಜಾಮೀನು ರಹಿತ ವಾರೆಂಟ್ ಜಾರಿ ಮಾಡಿದೆ. ಅರ್ಜಿದಾರರ ಪರವಾಗಿ ಅರುಣ್ ಶ್ಯಾಮ ವಾದಿಸಲಿದ್ದಾರೆ.