ಎಂ.ಬಿ.ಪಾಟೀಲ್ ವಿರುದ್ಧ ಯಾವುದೇ ಹೇಳಿಕೆ ನೀಡಿಲ್ಲ: ಡಿ.ಕೆ.ಶಿವಕುಮಾರ್ ಸ್ಪಷ್ಟನೆ
‘ಜನರ ಗಮನ ಬೇರೆಡೆ ಸೆಳೆಯಲು ಸುಳ್ಳು ಆರೋಪ’
![ಎಂ.ಬಿ.ಪಾಟೀಲ್ ವಿರುದ್ಧ ಯಾವುದೇ ಹೇಳಿಕೆ ನೀಡಿಲ್ಲ: ಡಿ.ಕೆ.ಶಿವಕುಮಾರ್ ಸ್ಪಷ್ಟನೆ ಎಂ.ಬಿ.ಪಾಟೀಲ್ ವಿರುದ್ಧ ಯಾವುದೇ ಹೇಳಿಕೆ ನೀಡಿಲ್ಲ: ಡಿ.ಕೆ.ಶಿವಕುಮಾರ್ ಸ್ಪಷ್ಟನೆ](https://www.varthabharati.in/sites/default/files/images/articles/2019/08/17/205604-1566052592.jpg)
ಬೆಂಗಳೂರು, ಆ. 17: ಟೆಲಿಫೋನ್ ಕದ್ದಾಲಿಕೆ ಪ್ರಕರಣ ಸಂಬಂಧ ಮಾಜಿ ಸಚಿವ ಎಂ.ಬಿ.ಪಾಟೀಲ್ ವಿರುದ್ಧ ನಾನು ಯಾವುದೇ ಹೇಳಿಕೆ ನೀಡಿಲ್ಲ. ಆದರೆ, ನಾನು ಮಾಜಿ ಗೃಹ ಗೃಚಿವ ಆರ್.ಅಶೋಕ್ ಹಾಗೂ ಬಿಜೆಪಿ ಸರಕಾರದ ವಿರುದ್ಧ ಮಾಡಿದ್ದ ಆರೋಪವನ್ನು ತಪ್ಪಾಗಿ ಅರ್ಥೈಸಲಾಗಿದೆ ಎಂದು ಮಾಜಿ ಸಚಿವ ಡಿ.ಕೆ. ಶಿವಕುಮಾರ್ ಸ್ಪಷ್ಟಪಡಿಸಿದ್ದಾರೆ.
ಟೆಲಿಪೋನ್ ಕದ್ದಾಲಿಕೆ ವಿಚಾರದಲ್ಲಿ ಹಿಂದಿನ ಗೃಹ ಸಚಿವರು ರಾಜಕೀಯ ಮಾಡುತ್ತಿದ್ದಾರೆಂದು ಹೇಳಿದ್ದು, ಬಿಜೆಪಿ ಸರಕಾರದಲ್ಲಿ ಗೃಹ ಸಚಿವರಾಗಿದ್ದ ಆರ್. ಅಶೋಕ್ ಕುರಿತೇ ಹೊರತು ಎಂ.ಬಿ.ಪಾಟೀಲ್ ರನ್ನು ಉದ್ದೇಶಿಸಿದ್ದಲ್ಲ. ಆದರೆ ಮಾಧ್ಯಮಗಳಲ್ಲಿ ಇದು ತಪ್ಪಾಗಿ ಬಿಂಬಿತವಾಗಿದೆ ಎಂದು ಅವರು ಸ್ಪಷ್ಟನೆ ನೀಡಿದರು.
ಹಿಂದಿನ ಕಾಂಗ್ರೆಸ್-ಜೆಡಿಎಸ್ ಮೈತ್ರಿ ಸರಕಾರದ ಅವಧಿಯಲ್ಲಿ ಟೆಲಿಫೋನ್ ಕದ್ದಾಲಿಕೆ ನಡೆದಿಲ್ಲ. ಅಂದಿನ ಸಿಎಂ ಕುಮಾರಸ್ವಾಮಿ ಅವರಾಗಲಿ, ಗೃಹ ಸಚಿವ ಎಂ.ಬಿ.ಪಾಟೀಲ್ ಅವರಾಗಲಿ ಈ ಕೆಲಸ ಮಾಡಿಲ್ಲ. ಹೀಗಾಗಿ ಈ ವಿಚಾರದಲ್ಲಿ ಎಂ.ಬಿ.ಪಾಟೀಲ್ ಹೆಸರನ್ನು ಎಳೆದು ತರುವ ಪ್ರಶ್ನೆಯೇ ಇಲ್ಲ ಎಂದು ತಿಳಿಸಿದ್ದಾರೆ.
ಎಂ.ಬಿ.ಪಾಟೀಲ್ ಹಾಗೂ ತಮ್ಮ ನಡುವೆ ತಂದಿಡುವ ಕೆಲಸ ವ್ಯವಸ್ಥಿತವಾಗಿ ನಡೆಯುತ್ತಿದೆ. ಇದಕ್ಕೆ ಜಾತಿ ಲೇಪ ಹಚ್ಚಲಾಗಿದೆ. ಇಂಥ ಪ್ರಯತ್ನಗಳು ಹಿಂದೆಯೂ ನಡೆದಿವೆ, ಈಗಲೂ ನಡೆಯುತ್ತಿವೆ. ಆದರೆ ಇಂಥ ಪ್ರಯತ್ನಗಳಿಂದ ತಮ್ಮಿಬ್ಬರ ಸಂಬಂಧ ಹಾಳು ಮಾಡಲು ಸಾಧ್ಯವಿಲ್ಲ. ಇಂಥ ಪ್ರಯತ್ನಗಳನ್ನು ದಾಟಿ ಮುನ್ನಡೆಯುವ ಮನೋಬಲ ಇಬ್ಬರಿಗೂ ಇದೆ ಎಂದು ಶಿವಕುಮಾರ್ ತಿಳಿಸಿದ್ದಾರೆ.
ಜನರ ಮತ್ತು ಸಂವಿಧಾನದ ಆಶೋತ್ತರಗಳಿಗೆ ವ್ಯತಿರಿಕ್ತವಾಗಿ ಅಧಿಕಾರ ಹಿಡಿದಿರುವ ಬಿಜೆಪಿ ಮುಖಂಡರಿಗೆ ಪ್ರವಾಹ ಪರಿಸ್ಥಿತಿ ನಿಭಾಯಿಸಲು ಆಗುತ್ತಿಲ್ಲ. ಜತೆಗೆ ಸಂಪುಟ ರಚನೆ ಮತ್ತಿತರ ಆಂತರಿಕ ವಿಚಾರಗಳಿಂದಲೂ ಜರ್ಝರಿತರಾಗಿದ್ದಾರೆ. ಹೀಗಾಗಿ ಜನರ ಮನಸ್ಸನ್ನು ಬೇರೆಡೆಗೆ ಸೆಳೆಯಲು, ರಾಜಕೀಯ ಕಾರಣಕ್ಕೆ ಫೋನ್ ಕದ್ದಾಲಿಕೆ ಎಂಬ ಸುಳ್ಳು ಆರೋಪವನ್ನು ತೇಲಿ ಬಿಟ್ಟಿದ್ದಾರೆ. ಆದರೆ, ಮೂರು ವಾರಗಳಿಂದ ರಾಜ್ಯದಲ್ಲಿ ಏನಾಗುತ್ತಿದೆ ಎಂಬುದು ಜನರಿಗೆ ಸ್ಪಷ್ಟವಾಗಿ ಗೊತ್ತಿದೆ. ಅವರ ಗಮನ ಸೆಳೆಯಲು ಬಿಜೆಪಿ ಯಾವುದೇ ನಾಟಕವಾಡಿದರೂ ಪ್ರಯೋಜನ ಆಗುವುದಿಲ್ಲ ಎಂದು ಶಿವಕುಮಾರ್ ವಾಗ್ದಾಳಿ ನಡೆಸಿದರು.
ಬಿಜೆಪಿ ಮುಖಂಡರು ರಾಜ್ಯದ ಸಂಕಷ್ಟಕ್ಕೆ ಸ್ಪಂದಿಸುವ ಬದ್ಧತೆ ಮತ್ತು ಇಚ್ಛಾಶಕ್ತಿ ಪ್ರದರ್ಶಿಸಲಿ. ಅದನ್ನು ಬಿಟ್ಟು ಈ ರೀತಿಯ ಸುಳ್ಳು ಆಪಾದನೆಗಳನ್ನು ಮಾಡಿಕೊಂಡು ಜನರ ದಿಕ್ಕು ತಪ್ಪಿಸುವ ಪ್ರಯತ್ನವನ್ನು ಇನ್ನಾದರೂ ಬಿಡಲಿ ಎಂದು ಶಿವಕುಮಾರ್ ಕಿವಿಮಾತು ಹೇಳಿದ್ದಾರೆ.