ಸಿದ್ದರಾಮಯ್ಯರನ್ನು ಭೇಟಿಯಾಗಲಿರುವ ಉಮೇಶ್ ಕತ್ತಿ
![ಸಿದ್ದರಾಮಯ್ಯರನ್ನು ಭೇಟಿಯಾಗಲಿರುವ ಉಮೇಶ್ ಕತ್ತಿ ಸಿದ್ದರಾಮಯ್ಯರನ್ನು ಭೇಟಿಯಾಗಲಿರುವ ಉಮೇಶ್ ಕತ್ತಿ](https://www.varthabharati.in/sites/default/files/images/articles/2019/08/22/206404-1566462994.jpg)
ಬೆಂಗಳೂರು, ಆ.22: ಸಚಿವ ಸ್ಥಾನ ಕೈ ತಪ್ಪಿದ ಹಿನ್ನೆಲೆಯಲ್ಲಿ ಅಸಮಾಧಾನಗೊಂಡಿರುವ ಬಿಜೆಪಿ ಶಾಸಕ ಉಮೇಶ್ ಕತ್ತಿ ಅವರು ಮಾಜಿ ಮುಖ್ಯ ಮಂತ್ರಿ ಸಿದ್ದರಾಮಯ್ಯರನ್ನು ಭೇಟಿಯಾಗುವ ನಿಟ್ಟಿನಲ್ಲಿ ಚಿಂತನೆ ನಡೆಸಿದ್ದಾರೆ. ಈಗಾಗಲೇ ಸಿದ್ದರಾಮಯ್ಯ ಅವರೊಂದಿಗೆ ದೂರವಾಣಿ ಮೂಲಕ ಮಾತುಕತೆ ನಡೆಸಿದ್ದಾರೆ. ಇಂದು ಸಂಜೆ ಅವರನ್ನು ಉಮೇಶ್ ಕತ್ತಿ ಭೇಟಿಯಾಗುವ ಸಾಧ್ಯತೆ ಇದೆ ಎನ್ನಲಾಗಿದೆ.
ಸಿದ್ದರಾಮಯ್ಯ ಕಣ್ಣು ನೋವಿನ ಕಾರಣದಿಂದಾಗಿ ತಮ್ಮ ದಿಲ್ಲಿ ಭೇಟಿಯನ್ನು ರದ್ದು ಮಾಡಿ ಮನೆಯಲ್ಲಿಯೇ ಉಳಿದುಕೊಂಡಿದ್ದಾರೆ. ಇದರಿಂದಾಗಿ ಸಮಯ ನೋಡಿ ಸಿದ್ದರಾಮಯ್ಯರನ್ನು ಕತ್ತಿ ಭೇಟಿಯಾಗಲಿದ್ದಾರೆ ಎಂದು ಮೂಲಗಳು ತಿಳಿಸಿವೆ.
ಸಚಿವ ಸ್ಥಾನ ತಪ್ಪಿದ ಹಿನ್ನೆಲೆಯಲ್ಲಿ ಉಮೇಶ್ ಕತ್ತಿ ಅವರು ಮುಖ್ಯ ಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರನ್ನು ಭೇಟಿಯಾಗಿದ್ದರು. ಈ ವೇಳೆ ಸಚಿವಸ್ಥಾನ ಕೈ ತಪ್ಪಿದ ಕಾರಣಕ್ಕೆ ಅಸಮಾಧಾನ ವ್ಯಕ್ತಪಡಿಸಿದರು. ಆಗ ಬಿಎಸ್ ವೈ ಅವರು ತಮ್ಮ ಅಸಹಾಯಕತೆಯನ್ನು ವ್ಯಕ್ತಪಡಿಸಿದರು ಎನ್ನಲಾಗಿದೆ.
ಉಮೇಶ್ ಕತ್ತಿಯ ಹೆಸರು ಬಿಎಸ್ ವೈ ತಯಾರಿಸಿದ ಸಂಭಾವ್ಯ ಸಚಿವರ ಪಟ್ಟಿಯಲ್ಲಿದ್ದರೂ, ಅವರ ಹೆಸರನ್ನು ದಿಲ್ಲಿಯಲ್ಲಿ ಬಿಜೆಪಿ ಹೈಕಮಾಂಡ್ ಕೈ ಬಿಟ್ಟಿತ್ತು ಎಂದು ತಿಳಿದು ಬಂದಿದೆ.