ಶಾಸಕರ ಸ್ಥಳೀಯ ಪ್ರದೇಶಾಭಿವೃದ್ಧಿ ನಿಧಿ: ತುರ್ತಾಗಿ ಕಾಮಗಾರಿಗಳ ಪ್ರಸ್ತಾವನೆ ಸಲ್ಲಿಸಲು ಶಾಸಕರಿಗೆ ಸಿಎಂ ಪತ್ರ
![ಶಾಸಕರ ಸ್ಥಳೀಯ ಪ್ರದೇಶಾಭಿವೃದ್ಧಿ ನಿಧಿ: ತುರ್ತಾಗಿ ಕಾಮಗಾರಿಗಳ ಪ್ರಸ್ತಾವನೆ ಸಲ್ಲಿಸಲು ಶಾಸಕರಿಗೆ ಸಿಎಂ ಪತ್ರ ಶಾಸಕರ ಸ್ಥಳೀಯ ಪ್ರದೇಶಾಭಿವೃದ್ಧಿ ನಿಧಿ: ತುರ್ತಾಗಿ ಕಾಮಗಾರಿಗಳ ಪ್ರಸ್ತಾವನೆ ಸಲ್ಲಿಸಲು ಶಾಸಕರಿಗೆ ಸಿಎಂ ಪತ್ರ](https://www.varthabharati.in/sites/default/files/images/articles/2019/08/22/206462-1566488227.jpg)
ಬೆಂಗಳೂರು, ಆ. 22: ಶಾಸಕರ ಸ್ಥಳೀಯ ಪ್ರದೇಶಾಭಿವೃದ್ಧಿ ಯೋಜನೆಯಡಿ 2018-19ರ ಬಾಕಿ ಪ್ರಸ್ತಾವನೆಗಳು ಹಾಗೂ 2019-20ರ ಅವಧಿಗೆ 2ಕೋಟಿ ರೂ. ಮೊತ್ತದ ಅಭಿವೃದ್ಧಿ ಯೋಜನೆಗಳ ಪ್ರಸ್ತಾವನೆಗಳನ್ನು ಕೂಡಲೇ ಜಿಲ್ಲಾಧಿಕಾರಿಗಳಿಗೆ ತುರ್ತಾಗಿ ಸಲ್ಲಿಸುವಂತೆ ಮುಖ್ಯಮಂತ್ರಿ ಯಡಿಯೂರಪ್ಪ, ಎಲ್ಲ ಶಾಸಕರಿಗೆ ಪತ್ರ ಬರೆದಿದ್ದಾರೆ.
ಶಾಸಕರ ಸ್ಥಳೀಯ ಪ್ರದೇಶಾಭಿವೃದ್ಧಿ ಯೋಜನೆಯಡಿ ಪ್ರತಿಕ್ಷೇತ್ರಕ್ಕೆ 2 ಕೋಟಿ ರೂ. ನೀಡಲಾಗುತ್ತಿದೆ. ಈ ಮೊತ್ತಕ್ಕೆ ಆರ್ಥಿಕ ವರ್ಷದ ಆರಂಭದಲ್ಲಿಯೆ ಕ್ರಿಯಾ ಯೋಜನೆ ಸಲ್ಲಿಸಿ, ಜೂನ್ ಅಂತ್ಯದೊಳಗೆ ಅಂತಿಮಗೊಳಿಸಿ, ಅನುಮೋದನೆ ಪಡೆದು ಕಾಮಗಾರಿ ಅನುಷ್ಠಾನಗೊಳಿಸಬೇಕಾಗಿರುತ್ತದೆ.
ಆದುದರಿಂದ ವಿಧಾನಸಭೆ ಮತ್ತು ಪರಿಷತ್ ಸದಸ್ಯರು ವೈಯಕ್ತಿಕ ಗಮನ ಹರಿಸಿ, 2018-19ನೆ ಸಾಲಿಗೆ ಸಂಬಂಧಿಸಿದಂತೆ ಉಳಿದ ಮೊತ್ತಕ್ಕೆ ಹಾಗೂ 2019-20ನೆ ಸಾಲಿಗೆ 2ಕೋಟಿ ರೂ.ಗಳ ಕಾಮಗಾರಿಗಳ ಪ್ರಸ್ತಾವನೆ ತುರ್ತಾಗಿ ಜಿಲ್ಲಾಧಿಕಾರಿಗಳಿಗೆ ನೀಡುವಂತೆ ಯಡಿಯೂರಪ್ಪ ತಿಳಿಸಿದ್ದಾರೆ.
ಈ ಪೈಕಿ ತಮ್ಮ ಕ್ಷೇತ್ರದಲ್ಲಿ ಅಗತ್ಯವಿರುವ ಅಂಗನವಾಡಿ, ಶಾಲೆ, ಆಸ್ಪತ್ರೆ ಕಟ್ಟಡಗಳು ಮತ್ತು ನೀರು ಸಂಗ್ರಹಣೆ ಮತ್ತು ಪುನಶ್ಚೇತನ ಕಾಮಗಾರಿಗಳನ್ನು ಉದ್ಯೋಗ ಖಾತರಿ ಯೋಜನೆ ಜೊತೆಗೆ ಕ್ರೋಢೀಕರಿಸಿ ತೆಗೆದುಕೊಳ್ಳುವಂತೆ ಯಡಿಯೂರಪ್ಪ ತಮ್ಮ ಪತ್ರದಲ್ಲಿ ಶಾಸಕರಿಗೆ ಸಲಹೆ ಮಾಡಿದ್ದಾರೆ.