ಬರ್ತ್ ಡೇ ಪಾರ್ಟಿ ಮುಗಿಸಿ ತೆರಳುತ್ತಿದ್ದ ವೇಳೆ ಕಾರು ಪಲ್ಟಿ: ನಾಲ್ವರು ಸ್ಥಳದಲ್ಲೇ ಮೃತ್ಯು
ಐವರಿಗೆ ಗಂಭೀರ ಗಾಯ
![ಬರ್ತ್ ಡೇ ಪಾರ್ಟಿ ಮುಗಿಸಿ ತೆರಳುತ್ತಿದ್ದ ವೇಳೆ ಕಾರು ಪಲ್ಟಿ: ನಾಲ್ವರು ಸ್ಥಳದಲ್ಲೇ ಮೃತ್ಯು ಬರ್ತ್ ಡೇ ಪಾರ್ಟಿ ಮುಗಿಸಿ ತೆರಳುತ್ತಿದ್ದ ವೇಳೆ ಕಾರು ಪಲ್ಟಿ: ನಾಲ್ವರು ಸ್ಥಳದಲ್ಲೇ ಮೃತ್ಯು](https://www.varthabharati.in/sites/default/files/images/articles/2019/08/24/206746-1566649564.jpeg)
ಬೆಂಗಳೂರು, ಆ.24: ಚಾಲಕನ ನಿಯಂತ್ರಣ ತಪ್ಪಿ ಕಾರು ಪಲ್ಟಿಯಾದ ಪರಿಣಾಮ ನಾಲ್ವರು ಸ್ಥಳದಲ್ಲೇ ಮೃತಪಟ್ಟಿದ್ದು, ಐವರಿಗೆ ಗಂಭೀರವಾಗಿ ಗಾಯಗೊಂಡಿರುವ ಘಟನೆ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿ ತಾಲೂಕಿನ ಹಂದರಹಳ್ಳಿ ಬಳಿ ನಡೆದಿದೆ ಎಂದು ವರದಿಯಾಗಿದೆ.
ರಮೇಶ್(30), ಮಂಜುನಾಥ್(26), ಅಶೋಕ್ ರೆಡ್ಡಿ(26) ಮತ್ತು ಗೌರೀಶ್(23) ಮೃತ ದುರ್ದೈವಿಗಳು ಎಂದು ತಿಳಿದುಬಂದಿದೆ.
ಚಿಕ್ಕಬಳ್ಳಾಪುರ ಜಿಲ್ಲೆಯ ಬಾಗೇಪಲ್ಲಿ ತಾಲೂಕಿನ ನಕ್ಕಲಪಲ್ಲಿ ಗ್ರಾಮದವರು ಎಂದು ತಿಳಿದು ಬಂದಿದೆ. ಒಂಬತ್ತು ಮಂದಿ ಬೆಂಗಳೂರಿನ ಆವಲಹಳ್ಳಿ ಬಳಿ ಕಾರ್ಖಾನೆಯಲ್ಲಿ ಕೆಲಸ ಮಾಡುತ್ತಿದ್ದು, ಒಂದೇ ಕಡೆ ವಾಸಿಸುತ್ತಿದ್ದರು.
ಶುಕ್ರವಾರ ಮಧ್ಯರಾತ್ರಿ ಸ್ನೇಹಿತನ ಹುಟ್ಟುಹಬ್ಬವನ್ನು ಆಚರಿಸಿದ್ದಾರೆ. ನಂತರ ಶನಿವಾರ ರಜೆಯಿದ್ದ ಕಾರಣಕ್ಕೆ ಕಾರಿನಲ್ಲಿ ನಂದಿಬೆಟ್ಟಕ್ಕೆ ತೆರಳುತ್ತಿದ್ದರು. ಕಾರಿನಲ್ಲಿ ಹೊಸಕೋಟೆ ಬಳಿಯಿರುವ ಆವಲಹಳ್ಳಿಯಿಂದ ದೇವನಹಳ್ಳಿ ಮಾರ್ಗವಾಗಿ ಹೋಗುತ್ತಿದ್ದರು. ಆದರೆ, ಮುಂಜಾನೆ ಹಂದರಹಳ್ಳಿ ಬಳಿ ಕಾರು ಚಾಲಕನ ನಿಯಂತ್ರಣ ತಪ್ಪಿಪಲ್ಟಿಯಾಗಿ, ಈ ದುರ್ಘಟನೆ ಸಂಭವಿಸಿದೆ ಎನ್ನಲಾಗಿದೆ.