ರಾಜ್ಯದ ಎಲ್ಲಾ ತಾಲೂಕುಗಳಲ್ಲಿ ಪತ್ರಿಕಾ ಭವನ ನಿರ್ಮಾಣಕ್ಕೆ ಕ್ರಮ: ಪತ್ರಕರ್ತರ ಸಂಘದ ರಾಜ್ಯಾಧ್ಯಕ್ಷ ಶಿವಾನಂದ
![ರಾಜ್ಯದ ಎಲ್ಲಾ ತಾಲೂಕುಗಳಲ್ಲಿ ಪತ್ರಿಕಾ ಭವನ ನಿರ್ಮಾಣಕ್ಕೆ ಕ್ರಮ: ಪತ್ರಕರ್ತರ ಸಂಘದ ರಾಜ್ಯಾಧ್ಯಕ್ಷ ಶಿವಾನಂದ ರಾಜ್ಯದ ಎಲ್ಲಾ ತಾಲೂಕುಗಳಲ್ಲಿ ಪತ್ರಿಕಾ ಭವನ ನಿರ್ಮಾಣಕ್ಕೆ ಕ್ರಮ: ಪತ್ರಕರ್ತರ ಸಂಘದ ರಾಜ್ಯಾಧ್ಯಕ್ಷ ಶಿವಾನಂದ](https://www.varthabharati.in/sites/default/files/images/articles/2019/08/27/207282-1566928834.jpg)
ಶಿವಮೊಗ್ಗ, ಆ. 27: ರಾಜ್ಯದ ಎಲ್ಲಾ ತಾಲೂಕುಗಳಲ್ಲಿ ಪತ್ರಿಕಾ ಭವನ ನಿರ್ಮಾಣಕ್ಕೆ ರಾಜ್ಯ ಸರ್ಕಾರದ ಗಮನವನ್ನು ಸೆಳೆಯಲಾಗುವುದು ಎಂದು ರಾಜ್ಯ ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷ ಶಿವಾನಂದ್ ತಗಡೂರು ಹೇಳಿದರು.
ಮಂಗಳವಾರ ತೀರ್ಥಹಳ್ಳಿ ಪಟ್ಟಣದ ಶಾಂತವೇರಿ ಗೋಪಾಲಗೌಡ ರಂಗಮಂದಿರದಲ್ಲಿ ತಾಲೂಕು ಕಾರ್ಯನಿರತ ಪತ್ರಕರ್ತರ ಸಂಘದ ಆಶ್ರಯದಲ್ಲಿ ಏರ್ಪಡಿಸಲಾಗಿದ್ದ ಪತ್ರಿಕಾ ದಿನಾಚರಣೆ, ಅಭಿನಂದನೆ ಹಾಗೂ ಉಪನ್ಯಾಸ ಸಮಾರಂಭವನ್ನು ಉದ್ಘಾಟಿಸಿ ಅವರು ಮಾತನಾಡಿದರು.
ಪತ್ರಿಕಾ ಭವನಗಳು ದೇವಾಲಯಗಳಿದ್ದಂತೆ. ಈ ಭವನಕ್ಕೆ ಜನಸಾಮಾನ್ಯರು ತಮ್ಮ ಸಮಸ್ಯೆಗಳನ್ನು ಹಾಗೂ ವಿಷಯವನ್ನು ತಿಳಿಸಲು ಬರುತ್ತಾರೆ. ಈ ಹಿನ್ನೆಲೆಯಲ್ಲಿ ಪ್ರತೀ ತಾಲೂಕು ಕೇಂದ್ರಗಳಲ್ಲಿ ಪತ್ರಿಕಾ ಭವನದ ಅವಶ್ಯಕತೆ ಇದ್ದು, ಈ ಬಗ್ಗೆ ರಾಜ್ಯ ಸರ್ಕಾರದ ಗಮನ ಸೆಳೆದು, ಪತ್ರಿಕಾ ಭವನದ ನಿರ್ಮಾಣಕ್ಕೆ ನಮ್ಮ ರಾಜ್ಯ ಸಂಘ ಮುಂದಾಗಲಿದೆ ಎಂದರು.
ಮಾಧ್ಯಮ ಕ್ಷೇತ್ರ ಹಿಂದೆಂದಿಗಿಂತಲೂ ಇತ್ತೀಚಿನ ವರ್ಷಗಳಲ್ಲಿ ವೇಗ ಹೆಚ್ಚಿಸಿಕೊಂಡಿದೆ. ಆದರೆ ಬ್ರೇಕಿಂಗ್ ನ್ಯೂಸ್ಗಳನ್ನು ನೀಡುವಂತಹ ಸಂದರ್ಭದಲ್ಲಿ ಅಚಾತುರ್ಯಗಳಾಗಬಾರದು ಎಂದು ಅಭಿಪ್ರಾಯಪಟ್ಟ ಅವರು, ವಿಷಯವನ್ನು ಜನಸಾಮಾನ್ಯರಿಗೆ ನೀಡುವಾಗ ಅದರ ಸಂಪೂರ್ಣ ಮಾಹಿತಿ ನೀಡುವಂತಿರಬೇಕು ಎಂದು ಅಭಿಪ್ರಾಯಪಟ್ಟರು.
ಮುಖ್ಯ ಅತಿಥಿಗಳಾಗಿ ಪಾಲ್ಗೊಂಡಿದ್ದ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷ ಕೆ.ವಿ.ಶಿವಕುಮಾರ್ ಮಾತನಾಡಿ, ಜಿಲ್ಲೆಯ ಪತ್ರಕರ್ತರಿಗೆ ಆರೋಗ್ಯ ಕಾರ್ಡ್, ಬಸ್ ಪಾಸ್ಗಳನ್ನು ರಾಜ್ಯ ಸರ್ಕಾರದ ವತಿಯಿಂದ ಕೊಡಿಸುವಲ್ಲಿ ರಾಜ್ಯ ಸಂಘ ಪ್ರಯತ್ನಿಸಬೇಕು ಎಂದು ಮನವಿ ಮಾಡಿದರು.
ಸಾಮಾಜಿಕ ಮಾಧ್ಯಮಗಳನ್ನು ಉತ್ತಮ ರೀತಿಯಲ್ಲಿ ಬಳಸಿಕೊಳ್ಳಬೇಕು. ಇತ್ತೀಚಿನ ದಿನಗಳಲ್ಲಿ ಇವುಗಳ ದುರುಪಯೋಗವಾಗುತ್ತಿದೆ ಎಂದು ವಿಷಾಧಿಸಿದ ಅವರು, ಈ ಬಗ್ಗೆ ಒಂದು ಅವಲೋಕನದ ಅಗತ್ಯವಿದೆ ಎಂದರು.
ಕಾರ್ಯಕ್ರಮದಲ್ಲಿ ಸನ್ಮಾನ ಸ್ವೀಕರಿಸಿ ಮಾತನಾಡಿದ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಪ್ರಧಾನ ಕಾರ್ಯದರ್ಶಿ ವೈದ್ಯ ಮಾತನಾಡಿ, ಸನ್ಮಾನಗಳು ಹಾಗೂ ಪ್ರಶಸ್ತಿಗಳು ಬಂದಾಗ ಜನಸಾಮಾನ್ಯರಲ್ಲಿ ತಪ್ಪು ಅಭಿಪ್ರಾಯಗಳು ಮೂಡುತ್ತವೆ. ಆದರೆ ನನಗೆ ಇಲ್ಲಿ ಸಿಕ್ಕಿರುವ ಸನ್ಮಾನದಿಂದ ಅತ್ಯಂತ ಸಂತೋಷವಾಗಿದೆ ಎಂದರು.
ಸಮಾರಂಭದಲ್ಲಿ ಪ್ರಗತಿಪರ ಕೃಷಿಕ ಕಡಿದಾಳ್ ದಯಾನಂದ್, ವೈದ್ಯ ಸಾಹಿತಿ ಡಾ. ವಿನಯ್ ಶ್ರೀನಿವಾಸ್, ಪಶುವೈದ್ಯ ಡಾ.ಎಂ.ಎನ್.ಯುವರಾಜ್ ಹೆಗಡೆ ಇವರುಗಳನ್ನು ಸನ್ಮಾನಿಸಲಾಯಿತು. ನಿವೃತ್ತ ಪ್ರಾಂಶುಪಾಲೆ ಡಾ. ಎಲ್.ಸಿ.ಸುಮಿತ್ರಾ ಅವರು ಮಾಧ್ಯಮಗಳು ಮತ್ತು ಸಮಾಜ ಕುರಿತು ಉಪನ್ಯಾಸ ನೀಡಿದರು.
ಸಮಾರಂಭದ ಅಧ್ಯಕ್ಷತೆಯನ್ನು ತಾಲೂಕು ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷ ಟಿ.ಕೆ. ರಮೇಶ್ ಶೆಟ್ಟಿ ವಹಿಸಿದ್ದರು. ಸಮಾರಂಭದಲ್ಲಿ ಮಾಜಿ ಸಚಿವ ಕಿಮ್ಮನೆರ ರತ್ನಾಕರ್, ಪತ್ರಕರ್ತ ಸಂಘದ ರಾಜ್ಯ ಸಮಿತಿ ಸದಸ್ಯ ಎನ್. ರವಿಕುಮಾರ್, ಟಿ.ಜೆ. ಅನಿಲ್, ಮುನ್ನೂರು ಮೋಹನ್ಶೆಟ್ಟಿ ಮೊದಲಾದವರಿದ್ದರು. ಪತ್ರಕರ್ತ ಡಾನ್ ರಾಮಣ್ಣ ಕಾರ್ಯಕ್ರಮ ನಿರೂಪಿಸಿದರು.