ಪ್ರವಾಹ ಸಂತ್ರಸ್ತರ ಕಷ್ಟಕ್ಕೆ ರಾಜ್ಯ ಸರ್ಕಾರ ಸ್ಪಂದಿಸುತ್ತಿಲ್ಲ: ಸಿದ್ದರಾಮಯ್ಯ
![ಪ್ರವಾಹ ಸಂತ್ರಸ್ತರ ಕಷ್ಟಕ್ಕೆ ರಾಜ್ಯ ಸರ್ಕಾರ ಸ್ಪಂದಿಸುತ್ತಿಲ್ಲ: ಸಿದ್ದರಾಮಯ್ಯ ಪ್ರವಾಹ ಸಂತ್ರಸ್ತರ ಕಷ್ಟಕ್ಕೆ ರಾಜ್ಯ ಸರ್ಕಾರ ಸ್ಪಂದಿಸುತ್ತಿಲ್ಲ: ಸಿದ್ದರಾಮಯ್ಯ](https://www.varthabharati.in/sites/default/files/images/articles/2019/08/28/207319-1566971611.jpeg)
ಬೆಂಗಳೂರು: ಪ್ರವಾಹ ಸಂತ್ರಸ್ತರ ಕಷ್ಟಕ್ಕೆ ರಾಜ್ಯ ಸರ್ಕಾರ ಸ್ಪಂದಿಸುತ್ತಿಲ್ಲ. ಕೇಂದ್ರ ಸರ್ಕಾರ ಯಾವುದೇ ನೆರವನ್ನು ರಾಜ್ಯಕ್ಕೆ ನೀಡುತ್ತಿಲ್ಲ ಎಂದು ಮಾಜಿ ಸಿಎಂ ಸಿದ್ದರಾಮಯ್ಯ ಅವರು ಬೆಳಗಾವಿಯಲ್ಲಿ ಹೇಳಿಕೆ ನೀಡಿದರು.
ರಾಜ್ಯದ ಆಡಳಿತವನ್ನು ಅಮಿತ್ ಷಾ ನಡೆಸುತ್ತಿದ್ದಾರೆ. ಯಡಿಯೂರಪ್ಪ ಕೇವಲ ದೆಹಲಿ ಓಡಾಟ ಮಾಡಿಕೊಂಡಿದ್ದಾರೆ. ಇದರಿಂದ ಯಾವ ಪ್ರಯೋಜನವಿಲ್ಲ. ಕೂಡಲೇ ಕೇಂದ್ರ ಸರ್ಕಾರ ಐದು ಸಾವಿರ ಕೋಟಿ ರೂ. ಪ್ರವಾಹ ಪರಿಹಾರ ನೀಡಬೇಕು. ರಾಜ್ಯದಿಂದ ಆಯ್ಕೆಯಾದ 25 ಸಂಸದರು ಏನು ಮಾಡುತ್ತಿದ್ದಾರೆ. ಜನರ ಸಮಸ್ಯೆಗೆ ಸ್ಪಂದಿಸಲು ಸರ್ಕಾರಕ್ಕೆ ಆಸಕ್ತಿಯಿಲ್ಲ ಎಂದು ಅವರು ಹೇಳಿದರು.
ಇಂದಿರಾ ಕ್ಯಾಂಟೀನ್ ಮುಚ್ಚುವ ಪ್ರಯತ್ನವನ್ನು ಸರ್ಕಾರ ಮಾಡಿದರೆ ಕಾಂಗ್ರೆಸ್ ಪ್ರತಿಭಟನೆ ನಡೆಸಲಿದೆ. ಈ ಬಗ್ಗೆ ಬಿಬಿಎಂಪಿ ಆಯುಕ್ತರ ಜತೆ ಮಾತನಾಡಿದ್ದೇನೆ. ಮುಖ್ಯಮಂತ್ರಿ ಯಡಿಯೂರಪ್ಪ ಅವರಿಗೂ ಪತ್ರ ಬರೆದು ಕೂಡಲೇ ಅನುದಾನ ಬಿಡುಗಡೆ ಮಾಡಲು ಮನವಿ ಮಾಡಲಾಗುವುದು. ಇಂದಿರಾ ಕ್ಯಾಂಟೀನ್ ಮಹತ್ವದ ಯೋಜನೆಯಾಗಿದೆ. ಸಾವಿರಾರು ಜನರ ಹಸಿವು ನೀಗಿಸುವ ಕೆಲಸಕ್ಕೆ ಯಾವ ಸರ್ಕಾರ ಕೂಡ ಅಡ್ಡಿಪಡಿಸಬಾರದು ಎಂದು ಅವರು ಹೇಳಿದರು.