ಜ್ಯೋತಿರಾದಿತ್ಯ ಸಿಂಧಿಯಾ ಯಾರ ಮೇಲೂ ಕೋಪಗೊಂಡಿಲ್ಲ: ಕಮಲನಾಥ್

ಹೊಸದಿಲ್ಲಿ, ಆ.30: ರಾಜ್ಯದಲ್ಲಿ ಕಾಂಗ್ರೆಸ್ನ್ನು ಯಾರು ಮುನ್ನಡೆಸಬೇಕೆಂಬ ಕುರಿತು ಜ್ಯೋತಿರಾದಿತ್ಯ ಸಿಂಧಿಯಾ ಜೊತೆ ತಾನು ಹಗ್ಗಜಗ್ಗಾಟ ನಡೆಸುತ್ತಿದ್ದೇನೆ ಎಂಬ ವರದಿಯನ್ನು ತಳ್ಳಿಹಾಕಿದ ಮಧ್ಯಪ್ರದೇಶ ಮುಖ್ಯಮಂತ್ರಿ ಕಮಲನಾಥ್, ‘‘ಸಿಂಧಿಯಾ ಅಸಮಾಧಾನಗೊಂಡಿದ್ದಾರೆ ಎಂದು ನನಗನಿಸುತ್ತಿಲ್ಲ’’ ಎಂದರು.
ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾ ಗಾಂಧಿ ಅವರನ್ನು ಭೇಟಿಯಾಗಲು ದಿಲ್ಲಿಗೆ ಬಂದಿರುವ ಕಮಲನಾಥ್ ಸುದ್ದಿಗಾರರೊಂದಿಗೆ ಮಾತನಾಡಿದರು.
‘‘ಮಧ್ಯಪ್ರದೇಶದಲ್ಲಿ ಪಕ್ಷದ ಸಂಘಟನೆಯ ಬಗ್ಗೆ ಚರ್ಚಿಸಲಾಗಿದೆ.ಲೋಕಸಭಾ ಚುನಾವಣೆಯ ಬಳಿಕ ನೂತನ ರಾಜ್ಯ ಕಾಂಗ್ರೆಸ್ ಅಧ್ಯಕ್ಷರನ್ನು ನೇಮಿಸಬೇಕು ಎಂದು ನಾನು ಪದೇ ಪದೇ ಹೇಳುತ್ತಾ ಬಂದಿದ್ದೇನೆ. ಈ ವಿಚಾರವನ್ನು ಇಂದು ಮತ್ತೊಮ್ಮೆ ಪ್ರಸ್ತಾವಿಸಿದ್ದೇನೆ’’ ಎಂದು ಕಮಲನಾಥ್ ಹೇಳಿದರು.
ಮಧ್ಯಪ್ರದೇಶದ ಕಾಂಗ್ರೆಸ್ ಅಧ್ಯಕ್ಷ ಪದವಿ ಸಿಗದಿದ್ದರೆ ಸಿಂಧಿಯಾ ಬಿಜೆಪಿಗೆ ಸೇರ್ಪಡೆಯಾಗುತ್ತಾರೆ ಎಂಬ ವರದಿಯ ಕುರಿತು ಪ್ರತಿಕ್ರಿಯಿಸಿದ ಕಮಲನಾಥ್,‘‘ಈ ವರದಿಯಲ್ಲಿ ಸತ್ಯಾಂಶವಿಲ್ಲ. ಅವರು ಯಾರ ಮೇಲೂ ಕೋಪಗೊಂಡಿಲ್ಲ. ನೂತನ ಅಧ್ಯಕ್ಷ ಸ್ಥಾನಕ್ಕೆ ಹಲವು ಹೆಸರುಗಳನ್ನು ಚರ್ಚಿಸಲಾಗಿದೆ. ಯಾರನ್ನೇ ಅಧ್ಯಕ್ಷರನ್ನಾಗಿ ಆಯ್ಕೆ ಮಾಡಿದರೂ ಅವರೊಂದಿಗೆ ಕೆಲಸ ಮಾಡಲು ನಾನು ಸಿದ್ಧನಿದ್ದೇನೆ’’ ಎಂದು ಕಮಲನಾಥ್ ಹೇಳಿದ್ದಾರೆ.
‘‘ಒಂದು ವೇಳೆ ಜ್ಯೋತಿರಾದಿತ್ಯ ಸಿಂಧಿಯಾರನ್ನು ರಾಜ್ಯ ರಾಜಕೀಯದಿಂದ ದೂರ ಮಾಡಿದರೆ ನಾನು ಹಾಗೂ ಇತರ 500 ಜನರೊಂದಿಗೆ ಪಕ್ಷಕ್ಕೆ ರಾಜೀನಾಮೆ ನೀಡುತ್ತೇನೆ’’ಎಂದು ಕಾಂಗ್ರೆಸ್ ಮುಖಂಡ ಅಶೋಕ್ ದಂಗಿ ಪತ್ರಿಕಾಪ್ರಕಟನೆಯಲ್ಲಿ ತಿಳಿಸಿದ್ದಾರೆ.