ವಿದ್ಯಾರ್ಥಿ ಸಂಘಟನೆಗಳು ನಾಯಕತ್ವ ತರಬೇತಿಯ ಕೇಂದ್ರ: ಜಯಪ್ರಕಾಶ್ ಹೆಗ್ಡೆ

ಉಡುಪಿ, ಆ.31: ವಿದ್ಯಾರ್ಥಿ ಸಂಘಟನೆಗಳು ನಾಯಕತ್ವ ತರಬೇತಿಯ ಕೇಂದ್ರಗಳಾಗಿದ್ದು, ಈ ಸಂಘಟನೆಗಳ ಒಳಗೆ ಆರೋಗ್ಯಕರ ಸ್ಪರ್ಧೆ ಇರಬೇಕು ಎಂದು ಮಾಜಿ ಸಚಿವ ಜಯಪ್ರಕಾಶ್ ಹೆಗ್ಡೆ ಹೇಳಿದ್ದಾರೆ.
ಉಡುಪಿ ಕಿದಿಯೂರು ಹೊಟೇಲಿನ ಸಭಾಂಗಣದಲ್ಲಿ ಶನಿವಾರ ದಕ್ಷಿಣ ಕರ್ನಾಟಕ ವಿದ್ಯಾರ್ಥಿ ಪರಿಷತ್ ಇದರ ಉಡುಪಿ ಜಿಲ್ಲಾ ಘಟಕವನ್ನು ಉದ್ಘಾಟಿಸಿ ಅವರು ಮಾತನಾಡುತಿದ್ದರು.
ವಿದ್ಯಾರ್ಥಿ ಸಂಘಟನೆಗಳು ವಿದ್ಯಾರ್ಥಿಗಳ ಸಮಸ್ಯೆಗಳ ಬಗ್ಗೆ ಹೆಚ್ಚಿನ ಗಮನ ಹರಿಸಬೇಕು. ಹೊಸ ಉದ್ಯೋಗ ಸೃಷ್ಠಿ ಬಗ್ಗೆ ಚಿಂತನೆ ಮಾಡಬೇಕಾಗಿದೆ. ಸಾಮಾಜಿಕ ಸಮಸ್ಯೆಗಳನ್ನು ಪರಿಹರಿಸುವ ನಿಟ್ಟಿನಲ್ಲಿ ವಿದ್ಯಾರ್ಥಿ ಸಂಘಟನೆಗಳು ಇಲಾಖೆಯೊಂದಿಗೆ ಸಹಕರಿಸಬೇಕು. ಅಲ್ಲದೆ ಹೆಲ್ಮೆಟ್ ಧರಿಸಿ ವಾಹನ ಚಾಲನೆ ಸೇರಿದಂತೆ ವಿವಿಧ ವಿಚಾರಗಳ ಬಗ್ಗೆ ಜಾಗೃತಿ ಮೂಡಿಸುವ ಕೆಲಸ ಮಾಡಬೇಕು ಎಂದು ಅವರು ತಿಳಿಸಿದರು.
ಈ ಸಂದರ್ಭದಲ್ಲಿ ಜಿಪಂ ಸದಸ್ಯೆ ಗೀತಾಂಜಲಿ ಸುವರ್ಣ ಪರಿಷತ್ನ ಲಾಂಛನವನ್ನು ಅನಾವರಣಗೊಳಿಸಿದರು. ಮುಖ್ಯ ಅತಿಥಿಗಳಾಗಿ ಕಾಂಗ್ರೆಸ್ ಜಿಲ್ಲಾ ಉಪಾಧ್ಯಕ್ಷ ಪ್ರಖ್ಯಾತ್ ಶೆಟ್ಟಿ, ಕುಂದಾಪುರದ ಉದ್ಯಮಿ ಸುರೇಂದ್ರ ಶೆಟ್ಟಿ, ಕಾರ್ಕಳದ ಉದ್ಯಮಿ ಉದಯ ಶೆಟ್ಟಿ ಮುನಿಯಾಲು, ನಗರಸಭಾ ಸದಸ್ಯರಾದ ವಿಜಯ ಪೂಜಾರಿ ಬೈಲೂರು, ಪ್ರಭಾಕರ ಪೂಜಾರಿ ಮಾತನಾಡಿದರು.
ವೇದಿಕೆಯಲ್ಲಿ ಉದ್ಯಮಿಗಳಾದ ವಿನೋದ್ ಕುಮಾರ್ ಅಂಬಲಪಾಡಿ, ಸದಾನಂದ ಕಾಂಚನ್, ಸುಹಾನ್ ಬಿ.ಶೆಟ್ಟಿ, ರಂಜನ್ ಸಾಲ್ಯಾನ್ ಮೊದಲಾದ ವರು ಉಪಸ್ಥಿತರಿದ್ದರು.







