ಅಸಾಧ್ಯವಾಗಿರುವುದನ್ನು ಸಾಧಿಸಿದರೆ ಜೀವನದಲ್ಲಿ ಯಶಸ್ಸು: ಬಿಷಪ್ ಐಸಾಕ್ ಲೋಬೊ

ಕುಂದಾಪುರ, ಸೆ.1: ವಿದ್ಯಾರ್ಥಿಗಳು ಅಸಾಧ್ಯ ಆಗಿರುವುದನ್ನು ಸಾಧ್ಯವನ್ನಾಗಿ ಸಿದರೆ ಜೀವನದಲ್ಲಿ ಯಶಸ್ಸು ಗಳಿಸಬಹುದಾಗಿದೆ ಎಂದು ಉಡುಪಿ ಧರ್ಮ ಪ್ರಾಂತ್ಯದ ಧರ್ಮಾಧ್ಯಕ್ಷ ಅತಿ ವಂ.ಡಾ.ಜೆರಾಲ್ಡ್ ಐಸಾಕ್ ಲೋಬೊ ಹೇಳಿದ್ದಾರೆ.
ಕೆಥೊಲಿಕ್ ಸಭಾ ಉಡುಪಿ ಪ್ರದೇಶ್ ಹಾಗೂ ಮುಂಬೈ ಜಾನ್ ಡಿಸಿಲ್ವಾ ಫೌಂಡೇಶನ್ ವತಿಯಿಂದ ಕುಂದಾಪುರದ ರೋಟರಿ ಕಲಾಮಂದಿರದಲ್ಲಿ ರವಿವಾರ ವಿದ್ಯಾರ್ಥಿ ವೇತನ ಹಾಗೂ ಮಣಿಪಾಲ ಆರೋಗ್ಯ ಸುರಕ್ಷಾ ಕಾರ್ಡ್ ವಿತರಣೆ ಕಾರ್ಯಕ್ರಮವನ್ನು ಉದ್ಘಾಟಿಸಿ ಅವರು ಮಾತನಾಡುತಿದ್ದರು.
ಇಂದು ಹಣದ ಕೊರತೆಯ ಕಾರಣಕ್ಕೆ ವಿದ್ಯಾರ್ಥಿಗಳು ಶಿಕ್ಷಣದಿಂದ ವಂಚಿತ ರಾಗಬೇಕೆಂಬ ಪರಿಸ್ಥಿತಿ ನಮ್ಮಲ್ಲಿ ಇಲ್ಲ. ಯಾಕೆಂದರೆ ಹೆಚ್ಚಿನ ಸಂಖ್ಯೆಯಲ್ಲಿ ಆರ್ಥಿಕ ಧನಸಹಾಯ ನೀಡುವ ಹಲವು ಉದಾರ ಮನಸ್ಸಿನ ದಾನಿಗಳು ನಮ್ಮಲ್ಲಿ ಇದ್ದಾರೆ. ಇಂದು ಸಮಾಜದಲ್ಲಿ ಅವಕಾಶಗಳಿದ್ದು ಅದರ ಸದುಪಯೋಗವನ್ನು ವಿದ್ಯಾರ್ಥಿಗಳು ಪಡೆಯಬೇಕಾಗಿದೆ ಎಂದರು.
ಮಣಿಪಾಲ ಆರೋಗ್ಯ ಕಾರ್ಡ್ನ ಉದ್ಘಾಟನೆಯನ್ನು ನೆರವೇರಿಸಿ ದಿಕ್ಸೂಚಿ ಭಾಷಣ ಮಾಡಿದ ಮಡಿಕೇರಿ ಸಹಾಯಕ ಅರಣ್ಯ ಸಂರಕ್ಷಣಾಧಿಕಾರಿ ಶಮಾನ್ ಕ್ಯಾಸ್ತಲಿನೊ, ಕ್ರೈಸ್ತ ಸಮುದಾಯದಲ್ಲಿ ಸರಕಾರಿ ಸೇವೆಗಳಿಗೆ ಹೋಗುವವರ ಸಂಖ್ಯೆ ಕಡಿಮೆ ಇದ್ದು ಯುವಜನತೆ ಹೆಚ್ಚು ಸರಕಾರಿ ಹುದ್ದೆಗಳತ್ತ ಆಸಕ್ತಿ ತೋರಬೇಕು. ಇದಕ್ಕಾಗಿ ವಿದ್ಯಾರ್ಥಿಗಳು ತಮ್ಮ ಪ್ರಾಥಮಿಕ ಹಂತ ದಲ್ಲಿಯೇ ಪ್ರಯತ್ನ ಮಾಡಿದಾಗ ಉತ್ತಮ ಫಲಿತಾಂಶ ಪಡೆಯಲು ಸಾಧ್ಯವಿದೆ ಎಂದರು.
ಆರೋಗ್ಯ ಕಾರ್ಡ್ ಸಂಚಾಲಕಿ ವೆರೋನಿಕಾ ಕರ್ನೆಲಿಯೊ ಮಾತನಾಡಿ, ಕಳೆದ ಸಾಲಿನಲ್ಲಿ ಉಡುಪಿ ಧರ್ಮಪ್ರಾಂತ್ಯದ 13453 ಕುಟುಂಬಗಳು ಮಣಿಪಾಲ ಆರೋಗ್ಯ ಕಾರ್ಡ್ ಹೊಂದಿದ್ದು ಸುಮಾರು 4 ಕೋಟಿ ರೂ. ಪ್ರಯೋಜನ ಪಡೆದಿದ್ದಾರೆ. ಈ ಬಾರಿ 12724 ಕುಟುಂಬಗಳು ಮಣಿಪಾಲ ಆರೋಗ್ಯ ಕಾರ್ಡುಗಳಿಗೆ ಅರ್ಜಿ ಸಲ್ಲಿಸಿದ್ದಾರೆ ಎಂದು ಮಾಹಿತಿ ನೀಡಿದರು.
ಮುಂಬೈಯ ಜಾನ್ ಡಿಸಿಲ್ವಾ ಫೌಂಡೇಶನ್ ಪ್ರಾಯೋಜಕತ್ವದಲ್ಲಿ ಕಳೆದ ಸಾಲಿನಲ್ಲಿ ಎಸ್ಎಸ್ಎಲ್ಸಿ, ಪಿಯುಸಿಯಲ್ಲಿ ಅತಿ ಹೆಚ್ಚು ಅಂಕ ಪಡೆದ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ ಹಾಗೂ ಕೆಥೊಲಿಕ್ ಸಭಾ ಪ್ರಾಯೋಜಕತ್ವ ದಲ್ಲಿ ಪ್ರತಿಭಾವಂತ ಬಡ ವಿದ್ಯಾರ್ಥಿಗಳಿಗೆ ವಿದ್ಯಾರ್ಥಿ ವೇತನವನ್ನು ಈ ಸಂದರ್ಭದಲ್ಲಿ ವಿತರಿಸಲಾಯಿತು.
ಮುಖ್ಯ ಅತಿಥಿಗಳಾಗಿ ಫೌಂಡೇಶನ್ನ ಅಧ್ಯಕ್ಷ ಜಾನ್ ಡಿಸಿಲ್ವಾ, ಗ್ಲ್ಯಾಡಿಸ್ ಡಿಸಿಲ್ವಾ, ಕುಂದಾಪುರ ವಲಯ ಪ್ರಧಾನ ಧರ್ಮಗುರು ವಂ.ಸ್ಟ್ಯಾನಿ ತಾವ್ರೊ, ಕೆಥೊಲಿಕ್ ಸಭಾ ಉಡುಪಿ ಪ್ರದೇಶ್ ಇದರ ಆಧ್ಯಾತ್ಮಿಕ ನಿರ್ದೇಶಕ ವಂ.ಫರ್ಡಿನಾಂಡ್ ಗೊನ್ಸಾಲ್ವಿಸ್, ನಿಕಟಪೂರ್ವ ಅಧ್ಯಕ್ಷ ವಲೇರಿಯನ್ ಫೆರ್ನಾಂಡಿಸ್, ಅಧ್ಯಕ್ಷ ಆಲ್ವಿನ್ ಕ್ವಾಡ್ರಸ್, ಕೋಶಾಧಿಕಾರಿ ಜೆರಾಲ್ಡ್ ರೊಡ್ರಿ ಗಸ್, ಕಾರ್ಯಕ್ರಮ ಸಂಯೋಜಕ ಡಾ.ಜೆರಾಲ್ಡ್ ಪಿಂಟೊ, ಕುಂದಾಪುರ ಘಟಕ ಅಧ್ಯಕ್ಷ ವಾಲ್ಟರ್ ಡಿಸೋಜ ಉಪಸ್ಥಿತರಿದ್ದರು.
ಕುಂದಾಪುರ ವಲಯ ಅಧ್ಯಕ್ಷ ಹೆರಿಕ್ ಗೊನ್ಸಾಲ್ವಿಸ್ ಸ್ವಾಗತಿಸಿದರು. ಕೇಂದ್ರಿಯ ಕಾರ್ಯದರ್ಶಿ ಸಂತೋಷ್ ಕರ್ನೆಲಿಯೋ ವಂದಿಸಿದರು. ಫ್ಲೈವನ್ ಡಿಸೋಜ ಮತ್ತು ಪ್ರಮೀಲಾ ಡೆಸಾ ಕಾರ್ಯಕ್ರಮ ನಿರೂಪಿಸಿದರು.







