ಆಂಗ್ಲ ಮಾಧ್ಯಮ ಶಾಲೆ: ಆದೇಶ ಹಿಂಪಡೆಯಲು ಮುಖ್ಯಮಂತ್ರಿಗೆ ಸಾಹಿತಿಗಳ ಮನವಿ
![ಆಂಗ್ಲ ಮಾಧ್ಯಮ ಶಾಲೆ: ಆದೇಶ ಹಿಂಪಡೆಯಲು ಮುಖ್ಯಮಂತ್ರಿಗೆ ಸಾಹಿತಿಗಳ ಮನವಿ ಆಂಗ್ಲ ಮಾಧ್ಯಮ ಶಾಲೆ: ಆದೇಶ ಹಿಂಪಡೆಯಲು ಮುಖ್ಯಮಂತ್ರಿಗೆ ಸಾಹಿತಿಗಳ ಮನವಿ](https://www.varthabharati.in/sites/default/files/images/articles/2019/09/7/208863-1567862890.jpg)
ಬೆಂಗಳೂರು, ಸೆ. 7: ಕರ್ನಾಟಕ ಕೈಗಾರಿಕಾ ಮತ್ತು ವಾಣಿಜ್ಯೋದ್ಯಮ ಕನ್ನಡ ಸಂಘಗಳ ಒಕ್ಕೂಟದ ಸದಸ್ಯರ ನಿಯೋಗ ಹಿರಿಯ ಸಾಹಿತಿ, ಚಿಂತಕ ಡಾ.ಚಿದಾನಂದಮೂರ್ತಿ ನೇತೃತ್ವದಲ್ಲಿ ಸಿಎಂ ಯಡಿಯೂರಪ್ಪ ಅವರನ್ನು ಭೇಟಿ ಮಾಡಿ ಆಂಗ್ಲ ಮಾಧ್ಯಮ ಶಾಲೆ ಆದೇಶವನ್ನು ಹಿಂಪಡೆಯಬೇಕೆಂದು ಕೋರಿತು.
ಇದೇ ಸಂದರ್ಭದಲ್ಲಿ ಸಾಹಿತಿ ದೊಡ್ಡರಂಗೇಗೌಡ, ಹಿಂದಿನ ಕಾಂಗ್ರೆಸ್-ಜೆಡಿಎಸ್ ಮೈತ್ರಿ ಸರಕಾರ ಜಾರಿ ಮಾಡಿದ್ದ ಸರಕಾರಿ ಶಾಲೆಗಳಲ್ಲಿ ಇಂಗ್ಲಿಷ್ ಮಾದ್ಯಮ ಶಿಕ್ಷಣ ವ್ಯವಸ್ಥೆಯನ್ನು ಕೂಡಲೇ ಹಿಂಪಡೆಯಬೇಕು ಎಂದು ಮನವಿ ಮಾಡಿದರು.
ಆಂಗ್ಲ ಮಾಧ್ಯಮದಿಂದ ಕನ್ನಡ ಭಾಷೆ ಅವನತಿಯತ್ತ ಸಾಗುತ್ತಿದೆ. ಹೀಗಾಗಿ ಕೂಡಲೇ ಹಿಂದಿನ ಸರಕಾರದ ನಿರ್ಧಾರವನ್ನು ಹಿಂದಕ್ಕೆ ಪಡೆದು ಕನ್ನಡ ಉಳಿಸಬೇಕು ಎಂದು ಒತ್ತಾಯ ಮಾಡಿದರು. ನಾವು ಯಾರು ಇಂಗ್ಲಿಷ್ ಭಾಷೆಯ ವಿರೋಧಿಗಳಲ್ಲ. ಆದರೆ, ಒಂದು ಶಿಕ್ಷಣ ಮಾಧ್ಯಮವಾಗಿ ಕಲಿಯಲು ನಮ್ಮ ವಿರೋಧವಿದೆ ಎಂದು ಹೇಳಿದರು.
ಡಾ.ಚಿದಾನಂದಮುರ್ತಿ ಮಾತನಾಡಿ, ಸಂಖ್ಯೆ ದೃಷ್ಟಿಯಲ್ಲಿ ಖಾಸಗಿ ಶಾಲೆಗಳಿಗೆ ಹೋಗುವ ವಿದ್ಯಾರ್ಥಿಗಳ ಸಂಖ್ಯೆಗಿಂತ ಸರಕಾರಿ ಶಾಲೆಗಳಿಗೆ ಹೋಗುವವರ ವಿದ್ಯಾರ್ಥಿಗಳ ಸಂಖ್ಯೆ ತುಂಬ ಕಡಿಮೆ ಇದೆ. ಹೀಗಾಗಿ ಖಾಸಗಿ ಶಾಲೆಗಳು ಕನ್ನಡ ಮಾಧ್ಯಮದಲ್ಲಿ ಶಿಕ್ಷಣ ನೀಡುವ ವ್ಯವಸ್ಥೆ ಮಾಡುವತ್ತ ಸರಕಾರ ಗಮನ ಹರಿಸಬೇಕು ಎಂದು ಮನವಿ ಮಾಡಿದರು.
ಹಿರಿಯ ಸಾಹಿತಿ ಗೊ.ರು.ಚನ್ನಬಸಪ್ಪ ಮಾತನಾಡಿ, ಶಿಕ್ಷಣ ಕ್ಷೇತ್ರದಲ್ಲಿ ಯಾವುದೇ ರೀತಿಯ ಪ್ರಯೋಗಗಳನ್ನು ಮಾಡದೆ ಒಂದನೆ ತರಗತಿಯಿಂದ 7ನೆ ತರಗತಿ ವರೆಗೆ ಯಾವುದೇ ರೀತಿಯ ಭಾಷೆ ಬದಲಾವಣೆ ಆಗದಂತೆ ಹೊಸ ಕಾನೂನು ರಚನೆ ಮಾಡಬೇಕು ಎಂದು ಕೋರಿದರು.
ಸಾಹಿತಿಗಳ ಅಭಿಪ್ರಾಯಗಳನ್ನು ಆಲಿಸಿದ ಸಿಎಂ ಯಡಿಯೂರಪ್ಪ, ಹಿರಿಯ ಸಾಹಿತಿಗಳು, ಶಿಕ್ಷಣ ತಜ್ಞರು, ಅಧಿಕಾರಿಗಳೊಂದಿಗೆ ಶೀಘ್ರವೇ ಸಮಾಲೋಚನೆ ನಡೆಸಿ, ಆಂಗ್ಲ ಮಾಧ್ಯಮ ಶಾಲೆಗಳಿಗೆ ಸಂಬಂಧಿಸಿದ ಆದೇಶ ಹಿಂಪಡೆಯುವ ಬಗ್ಗೆ ಸೂಕ್ತ ಕ್ರಮ ಕೈಗೊಳ್ಳುವುದು ಎಂದು ಭರವಸೆ ನೀಡಿದರು.