ಸೋಲನ್ನು ಸವಾಲಾಗಿ ಸ್ವೀಕರಿಸಿ: ದಿನಕರ ಬಾಬು

ಉಡುಪಿ, ಸೆ.7: ಜೀವನದಲ್ಲಿ ಸ್ಪರ್ಧೆ ನಿರಂತರವಾಗಿದ್ದು, ಕ್ರೀಡಾಪಟುಗಳು ಕ್ರೀಡೆಯಲ್ಲಿ ಸೋತರೆ ಎದೆಗುಂದದೆ, ಸೋಲನ್ನು ಸವಾಲಾಗಿ ಸ್ವೀಕರಿಸಿ ಮುನ್ನಡೆ ಯಬೇಕು ಎಂದು ಉಡುಪಿ ಜಿಪಂ ಅಧ್ಯಕ್ಷ ದಿನಕರಬಾಬು ಕಿರಿಯ ಕ್ರೀಡಾಪಟುಗಳಿಗೆ ಕಿವಿಮಾತು ಹೇಳಿದ್ದಾರೆ.
ಶನಿವಾರ ಜಿಲ್ಲಾಡಳಿತ, ಜಿಪಂ, ಜಿಲ್ಲಾ ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ವತಿಯಿಂದ ಉಡುಪಿ ಅಜ್ಜರಕಾಡು ಮಹಾತ್ಮಾಗಾಂಧಿ ಜಿಲ್ಲಾ ಕ್ರೀಡಾಂಗಣದಲ್ಲಿ ಆಯೋಜಿಸಲಾದ ಉಡುಪಿ ತಾಲೂಕು ಮಟ್ಟದ ದಸರಾ ಕ್ರೀಡಾಕೂಟವನ್ನು ಉ್ಘಾಟಿಸಿ ಅವರು ಮಾತನಾಡುತಿದ್ದರು.
ಕ್ರೀಡೆಯಲ್ಲಿ ಭಾಗವಹಿಸಿ ಯಶಸ್ಸು ಗಳಿಸುವ ಸಲುವಾಗಿ ಕ್ರೀಡಾಪಟುಗಳು ಅವಿರತ ಶ್ರಮಪಡುತ್ತಾರೆ. ಇಂತಹ ಸಂದರ್ಭದಲ್ಲಿ ಕ್ರೀಡೆಯಲ್ಲಿ ಹಿನ್ನಡೆ ಯಾದಾಗ ಬೇಸರ ಪಟ್ಟುಕೊಂಡು ಸ್ಪರ್ಧೆಯಲ್ಲಿ ಭಾಗವಹಿಸಲು ಹಿಂಜರಿಯುತ್ತಾರೆ. ಆದ ಕಾರಣ ಕ್ರೀಡಾಭಿಮಾನಿಗಳು ಕ್ರೀಡಾಪಟುಗಳನ್ನು ಹುರಿದುಂಬಿಸುವ ಮೂಲಕ ಕ್ರೀಡೆಯಲ್ಲಿ ಅಭಿವೃದ್ಧಿ ಹೊಂದಲು ಪ್ರೇರೇಪಿಸಬೇಕು ಎಂದರು.
ದಸರಾ ಕ್ರೀಡಾಕೂಟದಲ್ಲಿ ಭಾಗವಹಿಸುವ ಜಿಲ್ಲಾಮಟ್ಟದ ಕ್ರೀಡಾಪಟುಗಳಿಗೆ ನೀಡಲಾಗುವ ಭತ್ಯೆಗಳನ್ನು ಮುಂದಿನ ವರ್ಷದಿಂದ ತಾಲೂಕು ಮಟ್ಟದ ಕ್ರೀಡಾಪಟುಗಳಿಗೂ ನೀಡುವ ಕುರಿತು ಸರಕಾರಕ್ಕೆ ಮನವಿ ಸಲ್ಲಿಸುವುದಾಗಿ ದಿನಕರಬಾಬು ತಿಳಿಸಿದರು.
ಉಡುಪಿ ನಗರಸಭಾ ಸದಸ್ಯೆ ರಶ್ಮಿ ಸಿ. ಭಟ್,ಡಾ. ಜಿ.ಶಂಕರ್ ಸರಕಾರಿ ಮಹಿಳಾ ಪ್ರಥಮ ದರ್ಜೆ ಕಾಲೇಜು ಮತ್ತು ಸ್ನಾತ್ತಕೋತ್ತರ ಅಧ್ಯಯನ ಕೇಂದ್ರದ ಪ್ರಾಂಶುಪಾಲ ಡಾ. ಭಾಸ್ಕರ್ ಶೆಟ್ಟಿ ಮಾತನಾಡಿದರು.
ತ್ರಿವರ್ಣದ ಬೆಲೂನ್ಗಳನ್ನು ಆಕಾಶದಲ್ಲಿ ಹಾರಿಬಿಡುವ ಮೂಲಕ ದಿನಕರ ಬಾಬು ಕ್ರೀಡಾಕೂಟಕ್ಕೆ ಚಾಲನೆ ನೀಡಿದರು.ತೆಂಕನಿಡಿಯೂರು ಸ್ಪೋರ್ಟ್ಸ್ ಕ್ಲಬ್ನ ಗೌರವಾಧ್ಯಕ್ಷ ಶಶಿಧರ್ ಕೆ. ಕುಂದರ್, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ತರಬೇತುದಾರ ಅನಂತರಾಮು ಮತ್ತಿತರರು ಉಪಸ್ಥಿತರಿದ್ದರು.
ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ಸಹಾಯಕ ನಿರ್ದೇಶಕ ಡಾ.ರೋಶನ್ ಕುಮಾರ್ ಶೆಟ್ಟಿ ಸ್ವಾಗತಿಸಿ ಉಪನ್ಯಾಸಕ ನಿತ್ಯಾನಂದ ಕಾರ್ಯಕ್ರಮ ನಿರೂಪಿಸಿ ವಂದಿಸಿದರು.









