ಪ್ರವಾಹ ಪೀಡಿತ ಪ್ರದೇಶಗಳಲ್ಲಿ ಗೋಶಾಲೆ ಆರಂಭ: ಸಚಿವ ಪ್ರಭು ಚೌವ್ಹಾಣ್
![ಪ್ರವಾಹ ಪೀಡಿತ ಪ್ರದೇಶಗಳಲ್ಲಿ ಗೋಶಾಲೆ ಆರಂಭ: ಸಚಿವ ಪ್ರಭು ಚೌವ್ಹಾಣ್ ಪ್ರವಾಹ ಪೀಡಿತ ಪ್ರದೇಶಗಳಲ್ಲಿ ಗೋಶಾಲೆ ಆರಂಭ: ಸಚಿವ ಪ್ರಭು ಚೌವ್ಹಾಣ್](https://www.varthabharati.in/sites/default/files/images/articles/2019/09/12/209647-1568297338.jpg)
ಬೆಂಗಳೂರು, ಸೆ. 12: ನೆರೆ ಪೀಡಿತ ಪ್ರದೇಶದ ಜಾನುವಾರುಗಳ ಸಂರಕ್ಷಣೆಗೆ ತಾಲೂಕಿಗೆ ಒಂದು ಗೋಶಾಲೆ ಆರಂಭಿಸಲು ಸಂಬಂಧಪಟ್ಟ ಅಧಿಕಾರಿಗಳಿಗೆ ನಿರ್ದೇಶನ ನೀಡಲಾಗಿದೆ ಎಂದು ಪಶುಸಂಗೋಪನಾ ಸಚಿವ ಪ್ರಭು ಚೌವ್ಹಾಣ್ ತಿಳಿಸಿದ್ದಾರೆ.
ಗುರುವಾರ ವಿಧಾನಸೌಧದಲ್ಲಿ ತಮ್ಮ ಕಚೇರಿಯಲ್ಲಿ ಸರಳವಾಗಿ ಪೂಜೆ ನೆರವೇರಿಸಿದ ಬಳಿಕ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, ನೆರೆ ಪೀಡಿತ ಪ್ರದೇಶಗಳಲ್ಲಿ ಅಗತ್ಯ ಇರುವ ಕಡೆಗಳಲ್ಲಿ ಗೋಶಾಲೆ ತೆರೆಯಲು ಅಧಿಕಾರಿಗಳು ಕ್ರಮ ಕೈಗೊಳ್ಳಬೇಕು ಎಂದು ಸೂಚಿಸಿದರು.
ಜಾನುವಾರುಗಳಿಗೆ ಅಗತ್ಯ ಮೇವು, ನೀರು ಸೇರಿದಂತೆ ಇನ್ನಿತರ ಸೌಲಭ್ಯ ಕಲ್ಪಿಸಲು ಆಯಾ ಜಿಲ್ಲಾಧಿಕಾರಿಗಳ ಖಾತೆಯಲ್ಲಿ ಹಣವಿದೆ ಎಂದ ಅವರು, ನೆರೆ ಪರಿಹಾರ ಕಾರ್ಯಕ್ಕೆ ರಾಜ್ಯ ಸರಕಾರ ಕ್ರಮ ಕೈಗೊಂಡಿದ್ದು, ಕೇಂದ್ರದಿಂದಲೂ ಶೀಘ್ರವೇ ನೆರವು ದೊರೆಯುವ ನಿರೀಕ್ಷೆ ಇದೆ ಎಂದು ತಿಳಿಸಿದರು.
ರಾಜ್ಯ ಸರಕಾರ ಈಗಗಾಲೇ ಅಭಿವೃದ್ದಿ ಕಾರ್ಯಗಳನ್ನು ಕೈಗೊಳ್ಳುತ್ತಿದ್ದು, ಟೇಕ್ ಆಫ್ ಆಗಿದೆ. ಆದರೆ, ವಿಪಕ್ಷಗಳ ಟೀಕೆಗಳಲ್ಲಿ ಯಾವುದೇ ಹುರುಳಿಲ್ಲ ಎಂದ ಅವರು, ನೆರೆ ಹಾನಿ ಸಂಬಂಧ ಕೇಂದ್ರಕ್ಕೆ ಈಗಾಗಲೇ ಮನವರಿಕೆ ಮಾಡಿಕೊಡಲಾಗಿದೆ ಎಂದು ತಿಳಿಸಿದರು.
ನಾನು ಸಚಿವನಾಗಿ ಅಧಿಕಾರ ವಹಿಸಿಕೊಂಡ ಬಳಿಕ ಬಳ್ಳಾರಿ, ರಾಯಚೂರು, ಯಾದಗಿರಿ ಸೇರಿದಂತೆ ಇನ್ನಿತರ ಜಿಲ್ಲೆಗಳ ಪ್ರವಾಸ ಮಾಡಿದ್ದು, ಪರಿಸ್ಥಿತಿ ಅಧ್ಯಯನ ನಡೆಸಿದ್ದೇನೆ. ಇಲಾಖೆ ಸುಧಾರಣೆಗೆ ಮುಂದಿನ ದಿನಗಳಲ್ಲಿ ಕ್ರಮ ಕೈಗೊಳ್ಳಲಿದ್ದೇನೆ ಎಂದು ಹೇಳಿದರು.
ಸಂತ್ರಸ್ತರಿಗೆ ನೆರವು ನೀಡಿ: ತಮ್ಮನ್ನು ಅಭಿನಂದಿಸಲು ಬರುವ ಯಾರೊಬ್ಬರೂ ಹಾರ-ತುರಾಯಿ ಬೇಡ. ಅವುಗಳಿಗೆ ಖರ್ಚು ಮಾಡುವ ಹಣವನ್ನು ನೆರೆ ಸಂತ್ರಸ್ಥರಿಗೆ ನೀಡಬೇಕೆಂದು ಮನವಿ ಮಾಡಿದ್ದೇನೆ. ಅದೇ ರೀತಿ ತಮ್ಮ ಕಚೇರಿಯಲ್ಲೂ ಸಂತ್ರಸ್ಥರಿಗೆ ನೆರವು ಸಂಗ್ರಹಿಸಲು ಪೆಟ್ಟಿಗೆಯನ್ನಿಟ್ಟಿದ್ದು, ಸಂಗ್ರಹ ಮೊತ್ತವನ್ನು ಸಿಎಂ ಪರಿಹಾರ ನಿಧಿಗೆ ಹಸ್ತಾಂತರಿಸಲಾಗುವುದು ಎಂದರು.
‘ನೆರೆ ಪೀಡಿತ ಪ್ರದೇಶಗಳಲ್ಲಿನ ಜಾನುವಾರುಗಳ ಸಂರಕ್ಷಣೆಗೆ ಇಲಾಖೆಯಿಂದ ಕೈಗೊಳ್ಳಬೇಕಾದ ಕ್ರಮಗಳ ಬಗ್ಗೆ ಚರ್ಚಿಸಲು ನಾಳೆ ಅಧಿಕಾರಿಗಳ ಸಭೆ ಕರೆದಿದ್ದು, ಆ ಬಳಿಕ ಮುಂದಿನ ತೀರ್ಮಾನಗಳನ್ನು ಕೈಗೊಳ್ಳಲಾಗುವುದು’
-ಪ್ರಭು ಚೌವ್ಹಾಣ್, ಪಶುಸಂಗೋಪನಾ ಸಚಿವ