ಮಾಜಿ ಸಚಿವ ಡಿ.ಕೆ.ಶಿವಕುಮಾರ್ ಗೆ ನ್ಯಾಯಾಂಗ ಬಂಧನ
ಹೊಸದಿಲ್ಲಿ, ಸೆ.17: ಈಡಿ ವಶದಲ್ಲಿದ್ದ ಮಾಜಿ ಸಚಿವ ಡಿ.ಕೆ.ಶಿವಕುಮಾರ್ ಅವರಿಗೆ ಹೊಸದಿಲ್ಲಿಯ ಪಿಎಂಎಲ್ಎ ವಿಶೇಷ ನ್ಯಾಯಾಲಯ ಜಾಮೀನು ನೀಡಲು ನಿರಾಕರಿಸಿದ್ದು, ನ್ಯಾಯಾಂಗ ಬಂಧನಕ್ಕೆ ಆದೇಶಿಸಿದೆ. ಅಲ್ಲದೇ, ಜಾಮೀನು ಅರ್ಜಿಯನ್ನು ನಾಳೆಗೆ (ಸೆ.18) ಮುಂದೂಡಲಾಗಿದೆ.
ಸದ್ಯ ಡಿಕೆಶಿ ಅವರನ್ನು ಆಸ್ಪತ್ರೆಗೆ ಕರೆದೊಯ್ಯುವಂತೆ ನ್ಯಾಯಾಧೀಶರು ಸೂಚನೆ ನೀಡಿದ್ದು, ವೈದ್ಯರ ಸಲಹೆ ಮೇರೆಗೆ ಮುಂದಿನ ನಿರ್ಧಾರ ಕೈಗೊಳ್ಳಲಿದ್ದಾರೆ.
ಸದ್ಯ ಈಡಿ ವಶದಲ್ಲಿರುವ ಡಿಕೆಶಿಯನ್ನು ಈಡಿ ಅಧಿಕಾರಿಗಳು ಮಂಗಳವಾರ ಕೋರ್ಟ್ ಮುಂದೆ ಹಾಜರು ಪಡಿಸಿದರು. ಡಿ.ಕೆ.ಶಿವಕುಮಾರ್ ಪರ ವಾದಿಸಿದ ವಕೀಲರು ಜಾಮೀನು ನೀಡಬೇಕೆಂದು ಮನವಿ ಮಾಡಿದರು. ಆದರೆ ಮನವಿ ತಿರಸ್ಕರಿಸಿದ ನ್ಯಾಯಾಲಯ ಡಿಕೆಶಿ ಅವರನ್ನು ನ್ಯಾಯಾಂಗ ಬಂಧನಕ್ಕೆ ಆದೇಶಿಸಿದೆ. ನಾಳೆ ಮದ್ಯಾಹ್ನ ಜಾಮೀನು ಅರ್ಜಿ ವಿಚಾರಣೆಗೆ ಬರಲಿದೆ.
ಹೊಸದಿಲ್ಲಿ ನಿವಾಸಗಳ ಮೇಲಿನ ಐಟಿ ದಾಳಿ ಪ್ರಕರಣದಲ್ಲಿ ಆರೋಪಿಯಾಗಿರುವ ಮಾಜಿ ಸಚಿವ ಡಿ.ಕೆ ಶಿವಕುಮಾರ್ ಗೆ ಯಾವುದೇ ಕಾರಣಕ್ಕೂ ಜಾಮೀನು ನೀಡಬಾರದು ಎಂದು ಸೆ.16ರಂದು ಈಡಿ ಅಧಿಕಾರಿಗಳು ಹೊಸದಿಲ್ಲಿಯ ರೋಸ್ ಅವೆನ್ಯೂ ವಿಶೇಷ ನ್ಯಾಯಾಲಯಕ್ಕೆ ಆಕ್ಷೇಪಣೆ ಸಲ್ಲಿಸಿದ್ದರು.