ಘನತ್ಯಾಜ್ಯ ನಿರ್ವಹಣೆ ನಿಯಮ ಜಾರಿ ಬಗ್ಗೆ ಪ್ರಮಾಣ ಪತ್ರ ಸಲ್ಲಿಸಿ: ಹೈಕೋರ್ಟ್
![ಘನತ್ಯಾಜ್ಯ ನಿರ್ವಹಣೆ ನಿಯಮ ಜಾರಿ ಬಗ್ಗೆ ಪ್ರಮಾಣ ಪತ್ರ ಸಲ್ಲಿಸಿ: ಹೈಕೋರ್ಟ್ ಘನತ್ಯಾಜ್ಯ ನಿರ್ವಹಣೆ ನಿಯಮ ಜಾರಿ ಬಗ್ಗೆ ಪ್ರಮಾಣ ಪತ್ರ ಸಲ್ಲಿಸಿ: ಹೈಕೋರ್ಟ್](https://www.varthabharati.in/sites/default/files/images/articles/2019/09/26/212052-1569518584.jpeg)
ಬೆಂಗಳೂರು, ಸೆ.26: ಘನತ್ಯಾಜ್ಯ ನಿರ್ವಹಣೆ ನಿಯಮ-2016 ಅನ್ನು ವೈಜ್ಞಾನಿಕವಾಗಿ ಜಾರಿಗೆ ತರುವ ಬಗ್ಗೆ ಅ.11ರೊಳಗೆ ಪ್ರಮಾಣ ಪತ್ರ ಸಲ್ಲಿಸಲು ಹೈಕೋರ್ಟ್ ನಗರಾಭಿವೃದ್ಧಿ ಇಲಾಖೆಗೆ ನಿರ್ದೇಶಿಸಿದೆ.
ಅರ್ಜಿ ವಿಚಾರಣೆ ನಡೆಸಿದ ಮುಖ್ಯ ನ್ಯಾಯಮೂರ್ತಿ ಎ.ಎಸ್.ಓಕಾ ಮತ್ತು ನ್ಯಾಯಮೂರ್ತಿ ಎಸ್.ಆರ್.ಕೃಷ್ಣಕುಮಾರ್ ಅವರಿದ್ದ ವಿಭಾಗೀಯ ನ್ಯಾಯಪೀಠ, ಈ ನಿರ್ದೇಶನ ನೀಡಿತು.
ನಗರದಲ್ಲಿ ಘನತ್ಯಾಜ್ಯವನ್ನು ವೈಜ್ಞಾನಿಕವಾಗಿ ನಿರ್ವಹಣೆ ಮಾಡದಿರುವುದರಿಂದ ಪರಿಸರ ಮಾಲಿನ್ಯಕ್ಕೆ ತೊಂದರೆಯಾಗಲಿದೆ. ಘನತ್ಯಾಜ್ಯ ನಿರ್ವಹಣೆ ನಿಯಮ ಜಾರಿ ಬಗ್ಗೆ ನಗರಾಭಿವೃದ್ಧಿ ಇಲಾಖೆಯ ಅಪರ ಮುಖ್ಯ ಕಾರ್ಯದರ್ಶಿ ಖುದ್ದು ಹಾಜರಾಗಿ ಪ್ರಮಾಣ ಪತ್ರ ಸಲ್ಲಿಸಬೇಕೆಂದು ನ್ಯಾಯಪೀಠವು ನಿರ್ದೇಶಿಸಿತು.
ಘನತ್ಯಾಜ್ಯ ನಿರ್ವಹಣೆ ನಿಯಮವನ್ನು ಜಾರಿಗೆ ತರಲು ಮನಸ್ಸು ಮಾಡದಿದ್ದರೆ, ನಗರದಲ್ಲಿ ನಡೆಯುತ್ತಿರುವ ಕಟ್ಟಡ ಕಾಮಗಾರಿಗಳಿಗೆ ತಡೆ ನೀಡಲು ಆದೇಶಿಸಬೇಕಾಗುತ್ತದೆ. ನಗರದಲ್ಲಿ ಪ್ರತಿ ದಿನ 5,700 ಟನ್ ಘನತ್ಯಾಜ್ಯ ಉತ್ಪಾದನೆಯಾಗುತ್ತದೆ. ಆದರೆ, ಬಿಬಿಎಂಪಿ ಪ್ರತಿ ದಿನ ಬರೀ 1,250 ಟನ್ ಘನತ್ಯಾಜ್ಯ ಉತ್ಪಾದನೆಯಾಗುತ್ತದೆ ಎಂದು ಸುಳ್ಳು ಹೇಳುತ್ತಿದೆ. 4,450 ಟನ್ ಘನ ತ್ಯಾಜ್ಯವನ್ನು ಕಾನೂನು ಬಾಹಿರವಾಗಿ ವಿಲೇವಾರಿ ಮಾಡಲಾಗುತ್ತಿದೆ ಎಂದು ಬಿಬಿಎಂಪಿ ವಿರುದ್ಧ ಕಿಡಿಕಾರಿತು.
ಘನ ತ್ಯಾಜ್ಯವನ್ನು ಸರಿಯಾಗಿ ನಿರ್ವಹಣೆ ಮಾಡದಿದ್ದರೆ ಜನರ ಆರೋಗ್ಯದ ಮೇಲೆ ಕೆಟ್ಟ ಪರಿಣಾಮ ಬೀರುತ್ತದೆ. ಹಾಗೂ ಸಂವಿಧಾನದ ಅನುಚ್ಛೇದ 21ಅನ್ನು ಉಲ್ಲಂಘಿಸಿದಂತಾಗುತ್ತದೆ. ಹೀಗಾಗಿ, ಘನತ್ಯಾಜ್ಯ ನಿರ್ವಹಣೆ ನಿಯಮ ಜಾರಿಗೆ ತರುವ ಬಗ್ಗೆ ಪ್ರಮಾಣ ಪತ್ರ ಸಲ್ಲಿಸಿ ಎಂದು ನ್ಯಾಯಪೀಠವು ತಿಳಿಸಿತು.