ಬಿಜೆಪಿ ನಿರ್ದೇಶನದಂತೆ ಚುನಾವಣಾ ಆಯೋಗ ಕಾರ್ಯನಿರ್ವಹಣೆ: ಕೆ.ಸಿ. ವೇಣುಗೋಪಾಲ್

ಹೊಸದಿಲ್ಲಿ, ಸೆ. 27: ಕರ್ನಾಟಕದ ಬಿಜೆಪಿ ಸರಕಾರವನ್ನು ಗುರುವಾರ ತರಾಟೆಗೆ ತೆಗೆದುಕೊಂಡಿರುವ ಕಾಂಗ್ರೆಸ್ನ ಪ್ರಧಾನ ಕಾರ್ಯದರ್ಶಿ ಕೆ.ಸಿ. ವೇಣುಗೋಪಾಲ್, ಚುನಾವಣಾ ಆಯೋಗ ರಾಜ್ಯ ಸರಕಾರದ ನಿರ್ದೇಶನದಂತೆ ಕಾರ್ಯನಿರ್ವಹಿಸುತ್ತಿದೆ ಎಂದಿದ್ದಾರೆ.
ಅನರ್ಹಗೊಂಡ 17 ಶಾಸಕರ ಕುರಿತು ಸುಪ್ರೀಂ ಕೋರ್ಟ್ ನಿರ್ಧಾರ ಕೈಗೊಳ್ಳುವ ವರೆಗೆ ಕರ್ನಾಟಕದ 15 ವಿಧಾನ ಸಭಾ ಕ್ಷೇತ್ರಗಳ ಉಪ ಚುನಾವಣೆ ಮುಂದೂಡಲಾಗುವುದು ಎಂದು ಚುನಾವಣಾ ಆಯೋಗ ಸುಪ್ರೀಂ ಕೋರ್ಟ್ಗೆ ಮಾಹಿತಿ ನೀಡಿದ ಬಳಿಕ ವೇಣುಗೋಪಾಲ್ ಈ ಹೇಳಿಕೆ ನೀಡಿದ್ದಾರೆ. ಚುನಾವಣಾ ಆಯೋಗದ ಹೇಳಿಕೆ ಬಗ್ಗೆ ಆಘಾತ ವ್ಯಕ್ತಪಡಿಸಿದ ವೇಣುಗೋಪಾಲ್, ಕೇಂದ್ರ ಸರಕಾರದ ನಿರ್ದೇಶನದಂತೆ ಚುನಾವಣಾ ಆಯೋಗ ಕಾರ್ಯನಿರ್ವಹಿಸುತ್ತಿದೆ ಎಂದರು. ಸುಪ್ರೀಂ ಕೋರ್ಟ್ ಆದೇಶ ಬಿಜೆಪಿಗೆ ಆಘಾತ ಉಂಟು ಮಾಡಿದೆ. ‘‘ಈಗ ಅವರು ಚುನಾವಣೆಯಲ್ಲಿ ಸ್ಪರ್ಧಿಸಲು ಹಿಂಜರಿಯುತ್ತಿದ್ದಾರೆ’’ ಎಂದು ವೇಣುಗೋಪಾಲ್ ಹೇಳಿದ್ದಾರೆ.
ಕರ್ನಾಟಕ ಸಚಿವರ ಅನರ್ಹತೆ ಕುರಿತ ವಾದದ ಆಲಿಕೆಯನ್ನು ಸುಪ್ರೀಂ ಕೋರ್ಟ್ ಅಕ್ಟೋಬರ್ 22ಕ್ಕೆ ನಿಗದಿಪಡಿಸಿದೆ.
Next Story