ಸುಪ್ರೀಂ ತೀರ್ಪಿನ ಬಳಿಕ ಬಿಜೆಪಿ ಸೇರ್ಪಡೆ ಬಗ್ಗೆ ತೀರ್ಮಾನ: ಅನರ್ಹ ಶಾಸಕ ಎಂಟಿಬಿ ನಾಗರಾಜ್
"ನಾನಂತೂ ಉಪಚುನಾವಣೆ ಎದುರಿಸುತ್ತೇನೆ"
![ಸುಪ್ರೀಂ ತೀರ್ಪಿನ ಬಳಿಕ ಬಿಜೆಪಿ ಸೇರ್ಪಡೆ ಬಗ್ಗೆ ತೀರ್ಮಾನ: ಅನರ್ಹ ಶಾಸಕ ಎಂಟಿಬಿ ನಾಗರಾಜ್ ಸುಪ್ರೀಂ ತೀರ್ಪಿನ ಬಳಿಕ ಬಿಜೆಪಿ ಸೇರ್ಪಡೆ ಬಗ್ಗೆ ತೀರ್ಮಾನ: ಅನರ್ಹ ಶಾಸಕ ಎಂಟಿಬಿ ನಾಗರಾಜ್](https://www.varthabharati.in/sites/default/files/images/articles/2019/09/28/212288-1569675038.jpg)
ಬೆಂಗಳೂರು, ಸೆ. 27: ಕೆಪಿಸಿಸಿ ಅಧ್ಯಕ್ಷ ದಿನೇಶ್ ಗುಂಡೂರಾವ್ ಅವರ ಕುರಿತು ಎಸ್.ಟಿ.ಸೋಮಶೇಖರ್ ಸರಿಯಾಗಿಯೇ ಹೇಳಿದ್ದು, ಅವರ ಹೇಳಿಕೆಗೆ ನನ್ನ ಸಹಮತವಿದೆ ಎಂದು ಹೊಸಕೋಟೆ ಕ್ಷೇತ್ರದ ಅನರ್ಹ ಶಾಸಕ ಎಂಟಿಬಿ ನಾಗರಾಜ್ ತಿಳಿಸಿದ್ದಾರೆ.
ಶನಿವಾರ ಇಲ್ಲಿನ ಡಾಲರ್ಸ್ ಕಾಲನಿಯಲ್ಲಿ ಮುಖ್ಯಮಂತ್ರಿ ಯಡಿಯೂರಪ್ಪನವರನ್ನು ಭೇಟಿ ಮಾಡಿ ಉಪ ಚುನಾವಣೆಯಲ್ಲಿ ಹೊಸಕೋಟೆ ಕ್ಷೇತ್ರದಿಂದ ನನಗೆ ಟಿಕೆಟ್ ನೀಡಬೇಕೆಂದು ಮನವಿ ಮಾಡಿದ ಬಳಿಕ ಮಾಧ್ಯಮ ಪ್ರತಿನಿಧಿಗಳ ಜತೆ ಮಾತನಾಡಿದ ಅವರು, ಸೋಮಶೇಖರ್ಗೆ ನನ್ನ ಬೆಂಬಲ ಎಂದರು.
ಸ್ವಾಗತಾರ್ಹ: ಕೇಂದ್ರ ಚುನಾವಣಾ ಆಯೋಗ ಮತ್ತೆ ಉಪ ಚುನಾವಣೆ ಘೋಷಣೆ ಮಾಡಿರುವುದು ಸ್ವಾಗತಾರ್ಹ. ಸುಪ್ರೀಂ ಕೋರ್ಟ್ ತೀರ್ಪಿನ ಬಳಿಕ ಬಿಜೆಪಿ ಸೇರ್ಪಡೆ ಬಗ್ಗೆ ತೀರ್ಮಾನ ಕೈಗೊಳ್ಳಲಾಗುವುದು ಎಂದು ಎಂಟಿಬಿ ನಾಗರಾಜ್ ಸ್ಪಷ್ಟಪಡಿಸಿದರು.
ಸಂಸದ ಬಿ.ಎನ್.ಬಚ್ಚೇಗೌಡ ಅವರ ಪುತ್ರ ಶರತ್ ಬಚ್ಚೇಗೌಡಗೆ ಹೊಸಕೋಟೆ ಕ್ಷೇತ್ರದಿಂದ ಉಪಚುನಾವಣೆ ಟಿಕೆಟ್ ನೀಡುವ ಸಂಬಂಧ ಬಿಜೆಪಿ ಹೈಕಮಾಂಡ್ ತೀರ್ಮಾನಿಸಲಿದೆ. ನಾನಂತೂ ಉಪ ಚುನಾವಣೆ ಎದುರಿಸುತ್ತೇನೆ ಎಂದು ಅವರು ತಿಳಿಸಿದರು.
ಸಂಬಂಧವಿಲ್ಲ: ನನಗೂ ಕಾಂಗ್ರೆಸ್ ಪಕ್ಷಕ್ಕೂ ಯಾವುದೇ ರೀತಿಯ ಸಂಬಂಧವಿಲ್ಲ, ಆದುದರಿಂದ ಆ ಪಕ್ಷದ ನಾಯಕತ್ವ ಸೇರಿದಂತೆ ಆ ವಿಚಾರಗಳಿಗೆ ನಾನು ಪ್ರತಿಕ್ರಿಯಿಸುವುದಿಲ್ಲ ಎಂದ ಅವರು, ಸಿದ್ದರಾಮಯ್ಯ ಮತ್ತು ಕೆ.ಎಚ್.ಮುನಿಯಪ್ಪ ನಡುವಿನ ಜಗಳ ಎಲ್ಲರಿಗೂ ಗೊತ್ತಿರುವ ಸಂಗತಿ ಎಂದರು.
ಕೆ.ಎಚ್.ಮುನಿಯಪ್ಪ ಸೋಲಿಗೆ ಯಾರು ಕಾರಣ ಎಂಬುದು ಬಹಿರಂಗವಾಗಿದೆ. ಅಂದಿನ ಸ್ಪೀಕರ್ ರಮೇಶ್ ಕುಮಾರ್ ಮುನಿಯಪ್ಪ ಸೋಲಿಗೆ ಕಾರಣವಾಗಿದ್ದು, ಈ ಬಗ್ಗೆ ಮುನಿಯಪ್ಪ ಹೈಕಮಾಂಡ್ಗೆ ದೂರು ನೀಡಿದ್ದಾರೆ. ಆದರೂ ಅವರ ವಿರುದ್ಧ ಕ್ರಮ ಕೈಗೊಂಡಿಲ್ಲ ಎಂದು ವಾಗ್ದಾಳಿ ನಡೆಸಿದರು.