ತಾಯಿ ಮಕ್ಕಳ ಆಸ್ಪತ್ರೆಯನ್ನಾಗಿ ಮೇಲ್ದರ್ಜೆಗೆ: ಶ್ರೀರಾಮುಲು ಭರವಸೆ
ಕುಂದಾಪುರ ಸರಕಾರಿ ಆಸ್ಪತ್ರೆಯ ಹೆರಿಗೆ ವಿಭಾಗ ಉದ್ಘಾಟನೆ

ಕುಂದಾಪುರ, ಸೆ.28: ಕುಂದಾಪುರ ತಾಲೂಕು ಸರಕಾರಿ ಆಸ್ಪತ್ರೆಯನ್ನು ತಾಯಿ - ಮಗು ಆಸ್ಪತ್ರೆಯನ್ನಾಗಿ ಮೇಲ್ದರ್ಜೆಗೇರಿಸುವುದರೊಂದಿಗೆ ಅಗತ್ಯ ಇರುವ ವೈದ್ಯರು, ಸಿಬಂದಿ ಹಾಗೂ ಅಗತ್ಯ ಸೌಲಭ್ಯಗಳನ್ನು ಒದಗಿಸಲು ಪ್ರಾಮಾಣಿಕ ಪ್ರಯತ್ನ ಮಾಡಲಾಗುವುದು ಎಂದು ರಾಜ್ಯ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವ ಶ್ರೀರಾಮುಲು ಹೇಳಿದ್ದಾರೆ.
ಉಡುಪಿ ಜಿ.ಶಂಕರ್ ಫ್ಯಾಮಿಲಿ ಟ್ರಸ್ಟ್ ವತಿಯಿಂದ ಸುಮಾರು 6 ಕೋಟಿ ರೂ. ವೆಚ್ಚದಲ್ಲಿ ಕುಂದಾಪುರದ ತಾಲೂಕು ಸಾರ್ವಜನಿಕ ಆಸ್ಪತ್ರೆಯ ಬಳಿ ನಿರ್ಮಿಸಲಾದ 150 ಹಾಸಿಗೆಗಳ ಅತ್ಯಾಧುನಿಕ ಸುಸಜ್ಜಿತ ಸೌಲಭ್ಯಗಳನ್ನು ಒಳಗೊಂಡ ದಿ.ಲಕ್ಷ್ಮಿ ಸೋಮ ಬಂಗೇರ ಹೆರಿಗೆ ವಿಭಾಗದ ನೂತನ ಕಟ್ಟಡ ವನ್ನು ಉ್ಘಾಟಿಸಿ ಅವರು ಮಾತನಾಡುತಿದ್ದರು.
ಆರೋಗ್ಯ ಇಲಾಖೆಯಲ್ಲಿರುವ ವೈದ್ಯರ ಕೊರತೆ ನೀಗಿಸಲು ವೈದ್ಯರ ನೇರ ನೇಮಕಾತಿ ಮಾಡಿಕೊಳ್ಳಲಾಗುವುದು. ಶುಶ್ರೂಷಕಿಯರ ಕನಿಷ್ಠ ವೇತನವನ್ನು 17,500ರೂ.ಗೆ ಏರಿಸಲಾಗಿದೆ. ಆಯಾಗಳ ಸೇವೆ ಖಾಯಂ ಗೊಳಿಸುವ ಕುರಿತು ಮುಖ್ಯಮಂತ್ರಿ ಹಾಗೂ ಆರ್ಥಿಕ ಇಲಾಖೆಯೊಂದಿಗೆ ಸಮನ್ವಯ ಸಾಧಿಸಿ ನ್ಯಾಯ ಕೊಡಿಸುವ ಪ್ರಯತ್ನ ಮಾಡಲಾಗುವುದು ಎಂದರು.
ಆಸ್ಪತ್ರೆಯ ಸಿಬ್ಬಂದಿ ರೋಗಿಗಳಿಗೆ ಸ್ಪಂದಿಸದ ಬಗ್ಗೆ ದೂರುಗಳು ಬಂದರೆ ಸುಮ್ಮನೆ ಇರುವುದಿಲ್ಲ. ಸರಕಾರಿ ವೈದ್ಯರು ಖಾಸಗಿಯಾಗಿಯೂ ಕ್ಲಿನಿಕ್ ತೆರೆದು ಕಾರ್ಯನಿರ್ವಹಿಸುವುದು ಗಮನಕ್ಕೆ ಬಂದರೆ ಅಲ್ಲಿಯೇ ಅಮಾನತು ಮಾಡಲಾಗುವುದು ಎಂದು ಶ್ರೀರಾಮುಲು ಎಚ್ಚರಿಕೆ ನೀಡಿದರು.
ಅಧ್ಯಕ್ಷತೆ ವಹಿಸಿದ್ದ ಶಾಸಕ ಹಾಲಾಡಿ ಶ್ರೀನಿವಾಸ ಶೆಟ್ಟಿ ಮಾತನಾಡಿ, ಬಡವರ ಅನುಕೂಲಕ್ಕೆ ಜಾರಿಗೆ ತಂದಿರುವ ಆಯುಷ್ಮಾನ್ ಯೋಜನೆಯು ಕೆಲವು ನಿಯಮಾವಳಿಗಳಿಂದಾಗಿ ಶೇ.50ರಷ್ಟು ಪ್ರಯೋಜನ ಆಗುತ್ತಿಲ್ಲ. ಅದನ್ನು ಇನ್ನಷ್ಟು ಸರಳೀಕರಣಗೊಳಿಸಬೇಕಾಗಿದೆ ಎಂದು ಸಚಿವರನ್ನು ಒತ್ತಾಯಿಸಿದರು.
ಜಿ.ಶಂಕರ್ ಫ್ಯಾಮಿಲಿ ಟ್ರಸ್ಟ್ ಪ್ರವರ್ತಕ ಡಾ.ಜಿ.ಶಂಕರ ಪ್ರಾಸ್ತಾವಿಕವಾಗಿ ಮಾತನಾಡಿದರು. ಶಾಸಕರಾದ ರಘುಪತಿ ಭಟ್, ಬಿ.ಎಂ. ಸುಕುಮಾರ ಶೆಟ್ಟಿ, ಜಿಪಂ ಅಧ್ಯಕ್ಷ ದಿನಕರ ಬಾಬು, ಕುಂದಾಪುರ ತಾಪಂ ಅಧ್ಯಕ್ಷೆ ಶ್ಯಾಮಲಾ ಕುಂದರ್, ಉಪವಿಭಾಗದ ಸಹಾಯಕ ಆಯುಕ್ತ ಕೆ.ರಾಜು, ಬಿಜೆಪಿ ಜಿಲ್ಲಾಧ್ಯಕ್ಷ ಮಟ್ಟಾರು ರತ್ನಾಕರ ಹೆಗ್ಡೆ, ಆಸ್ಪತ್ರೆ ಆರೋಗ್ಯಾಧಿಕಾರಿ ಡಾ.ರಾಬರ್ಟ್ ಉಪಸ್ಥಿತರಿದ್ದರು.
ಸತೀಶ್ ಎಂ.ನಾಯಕ್ ಸ್ವಾಗತಿಸಿದರು. ಸದಾನಂದ ಬಳ್ಕೂರು ವಂದಿಸಿದರು. ಅಶೋಕ ತೆಕ್ಕಟ್ಟೆ ಕಾರ್ಯಕ್ರಮ ನಿರೂಪಿಸಿದರು.







