ಫಾರೂಕ್ ಅಬ್ದುಲ್ಲಾ ಬಂಧನ ಪ್ರಶ್ನಿಸಿದ್ದ ವೈಕೊ ಅರ್ಜಿ ತಿರಸ್ಕರಿಸಿದ ಸುಪ್ರೀಂ

ಹೊಸದಿಲ್ಲಿ, ಸೆ.30: ಜಮ್ಮು ಮತ್ತು ಕಾಶ್ಮೀರದ ಮಾಜಿ ಮುಖ್ಯಮಂತ್ರಿ ಫಾರೂಕ್ ಅಬ್ದುಲ್ಲಾರ ಗೃಹಬಂಧನವನ್ನು ಪ್ರಶ್ನಿಸಿ ಎಂಡಿಎಂಕೆ ಮುಖಂಡ ವೈಕೊ ಸಲ್ಲಿಸಿದ್ದ ಹೇಬಿಯಸ್ ಕಾರ್ಪಸ್ ಅರ್ಜಿಯನ್ನು ಸುಪ್ರೀಂಕೋರ್ಟ್ ತಿರಸ್ಕರಿಸಿದೆ.
ಫಾರೂಕ್ ಅಬ್ದುಲ್ಲಾರನ್ನು ಸಾರ್ವಜನಿಕ ಸುರಕ್ಷಾ ಕಾಯ್ದೆಯಡಿ ಬಂಧಿಸಲಾಗಿದೆ. ಸರಕಾರದ ಈ ಆದೇಶವನ್ನು ಸೂಕ್ತ ನ್ಯಾಯಪೀಠದಲ್ಲಿ ಅರ್ಜಿ ಸಲ್ಲಿಸಿ ಪ್ರಶ್ನಿಸಬಹುದು ಎಂದು ನ್ಯಾಯಪೀಠ ತಿಳಿಸಿದೆ.
ತಮಿಳುನಾಡಿನ ಮಾಜಿ ಮುಖ್ಯಮಂತ್ರಿ ಸಿಎನ್ ಅಣ್ಣಾದುರೈ ಅವರ 111ನೇ ಜನ್ಮದಿನಾಚರಣೆ ಅಂಗವಾಗಿ ಸೆ.15ರಂದು ಚೆನೈಯಲ್ಲಿ ಆಯೋಜಿಸಲಾದ ಕಾರ್ಯಕ್ರಮದಲ್ಲಿ ಫಾರೂಕ್ ಅಬ್ದುಲ್ಲಾ ಭಾಗವಹಿಸಬೇಕಿತ್ತು. ಆದರೆ ಗೃಹಬಂಧನ ವಿಧಿಸಿದ್ದರಿಂದ ಅವರನ್ನು ಸಂಪರ್ಕಿಸಲು ಸಾಧ್ಯವಾಗಿಲ್ಲ ಎಂದು ಸುಪ್ರೀಂಗೆ ಸಲ್ಲಿಸಿದ್ದ ಹೇಬಿಯಸ್ ಕಾರ್ಪಸ್ ಅರ್ಜಿಯಲ್ಲಿ ವೈಕೊ ತಿಳಿಸಿದ್ದರು. ಈ ಅರ್ಜಿಯಲ್ಲಿ ಸುಪ್ರೀಂಕೋರ್ಟ್ನಲ್ಲಿ ವಿಚಾರಣೆ ನಡೆಸುವ ಯಾವುದೇ ಅಂಶಗಳಿಲ್ಲ . ಅರ್ಜಿಯನ್ನು ಸೂಕ್ತ ನ್ಯಾಯಾಲಯದಲ್ಲಿ ಸಲ್ಲಿಸಿ ಎಂದು ಸೂಚಿಸಿ ಸುಪ್ರೀಂಕೋರ್ಟ್ ಅರ್ಜಿಯನ್ನು ತಿರಸ್ಕರಿಸಿದೆ.
ಜೊತೆಗೆ, ಕಾಶ್ಮೀರದಲ್ಲಿ ರಾಜಕೀಯ ಮುಖಂಡರನ್ನು ಗೃಹಬಂಧನದಲ್ಲಿ ಇರಿಸಿರುವುದನ್ನು ಪ್ರಶ್ನಿಸಿ ಹಾಗೂ ಆ ರಾಜ್ಯದಲ್ಲಿ ನಿರ್ಬಂಧ ವಿಧಿಸಿರುವುದನ್ನು ಪ್ರಶ್ನಿಸಿ ಸಲ್ಲಿಸಲಾಗಿದ್ದ ಉಳಿದ ಎಲ್ಲಾ ಅರ್ಜಿಗಳನ್ನೂ ಸಿಜೆಐ ನೇತೃತ್ವದ ನ್ಯಾಯಪೀಠದಿಂದ ಐವರು ನ್ಯಾಯಾಧೀಶರ ನ್ಯಾಯಪೀಠಕ್ಕೆ ವರ್ಗಾಯಿಸಿದೆ.