ನಮ್ಮ ರಾಜೀನಾಮೆಯಿಂದಲೇ ಬಿಜೆಪಿ ಅಧಿಕಾರಕ್ಕೆ ಬಂದಿದೆ: ಅನರ್ಹ ಶಾಸಕ ಪ್ರತಾಪ್ ಗೌಡ ಪಾಟೀಲ್
![ನಮ್ಮ ರಾಜೀನಾಮೆಯಿಂದಲೇ ಬಿಜೆಪಿ ಅಧಿಕಾರಕ್ಕೆ ಬಂದಿದೆ: ಅನರ್ಹ ಶಾಸಕ ಪ್ರತಾಪ್ ಗೌಡ ಪಾಟೀಲ್ ನಮ್ಮ ರಾಜೀನಾಮೆಯಿಂದಲೇ ಬಿಜೆಪಿ ಅಧಿಕಾರಕ್ಕೆ ಬಂದಿದೆ: ಅನರ್ಹ ಶಾಸಕ ಪ್ರತಾಪ್ ಗೌಡ ಪಾಟೀಲ್](https://www.varthabharati.in/sites/default/files/images/articles/2019/10/1/212774-1569939769.jpg)
ಬೆಂಗಳೂರು, ಅ.1: ನಾವು ರಾಜೀನಾಮೆ ಕೊಟ್ಟಿದ್ದರಿಂದಲೇ ರಾಜ್ಯದಲ್ಲಿ ಬಿಜೆಪಿ ಸರಕಾರ ಅಧಿಕಾರಕ್ಕೆ ಬಂದಿದೆ. ಹೀಗಾಗಿ ನಮ್ಮ ಬಗ್ಗೆ ಮೃದು ಧೋರಣೆಯಿದೆ ಎಂದು ಅನರ್ಹ ಶಾಸಕ ಪ್ರತಾಪ್ ಗೌಡ ಪಾಟೀಲ್ ತಿಳಿಸಿದರು.
ಮಂಗಳವಾರ ವಿಧಾನಸೌಧದಲ್ಲಿ ಮಾತನಾಡಿದ ಅವರು, ಬೇರೆಯವರು ನಮ್ಮ ವಿಚಾರದಲ್ಲಿ ಅನಗತ್ಯವಾಗಿ ಗೊಂದಲ ಸೃಷ್ಟಿ ಮಾಡುತ್ತಿದ್ದಾರೆ. ಅದಕ್ಕೆಲ್ಲ ನಾವು ತಲೆಕೆಡಿಸಿಕೊಳ್ಳುವುದಿಲ್ಲ ಎಂದರು.
ನಮ್ಮ ಪ್ರಕರಣ ನ್ಯಾಯಾಲಯದಲ್ಲಿ ವಿಚಾರಣೆ ಹಂತದಲ್ಲಿದೆ. ಈಗಲೇ ಆ ಪಕ್ಷ ಈ ಪಕ್ಷ ಸೇರುತ್ತೇನೆ ಎಂದು ಹೇಳುವುದಿಲ್ಲ. ನ್ಯಾಯಾಲಯದ ತೀರ್ಪು ಬರಲಿ ಆನಂತರ ಯಾವ ಪಕ್ಷಕ್ಕೆ ಸೇರಬೇಕು ಎಂಬುದನ್ನು ನಾವು ನಿರ್ಧಾರ ಮಾಡುತ್ತೇವೆ ಎಂದು ಪ್ರತಾಪ್ ಗೌಡ ಪಾಟೀಲ್ ಹೇಳಿದರು.
ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ನೀಡಿರುವ ತಂತಿ ಮೇಲಿನ ನಡಿಗೆ ಹೇಳಿಕೆ ಕುರಿತು ಕೇಳಿದ್ದಕ್ಕೆ ಪ್ರತಿಕ್ರಿಯಿಸಿದ ಅವರು, ಮಾಧ್ಯಮಗಳು ಒಂದು ಹೇಳಿಕೆಯನ್ನು ಮಾತ್ರ ಪ್ರಸಾರ ಮಾಡುತ್ತಿವೆ. ಅವರು ಆ ಹೇಳಿಕೆ ಕೊಟ್ಟ ಹಿನ್ನೆಲೆಗೂ ಮಾಧ್ಯಮಗಳಲ್ಲಿ ಬರುತ್ತಿರುವ ವರದಿಗಳಿಗೂ ಸಂಬಂಧವೇ ಇಲ್ಲ ಎಂದರು.