ವಾಸಕ್ಕೆ ಯೋಗ್ಯವಲ್ಲದ ಮನೆಗಳಿಗೆ 5 ಲಕ್ಷ ರೂ.ಪರಿಹಾರ: ಮುಖ್ಯಮಂತ್ರಿ ಯಡಿಯೂರಪ್ಪ
ಬೆಳಗಾವಿ: ಪ್ರವಾಹ ಪರಿಹಾರ ಕಾರ್ಯ, ಅಭಿವೃದ್ಧಿ ಕಾರ್ಯಕ್ರಮಗಳ ಪರಿಶೀಲನಾ ಸಭೆ
![ವಾಸಕ್ಕೆ ಯೋಗ್ಯವಲ್ಲದ ಮನೆಗಳಿಗೆ 5 ಲಕ್ಷ ರೂ.ಪರಿಹಾರ: ಮುಖ್ಯಮಂತ್ರಿ ಯಡಿಯೂರಪ್ಪ ವಾಸಕ್ಕೆ ಯೋಗ್ಯವಲ್ಲದ ಮನೆಗಳಿಗೆ 5 ಲಕ್ಷ ರೂ.ಪರಿಹಾರ: ಮುಖ್ಯಮಂತ್ರಿ ಯಡಿಯೂರಪ್ಪ](https://www.varthabharati.in/sites/default/files/images/articles/2019/10/3/213080-1570112270.jpg)
ಬೆಳಗಾವಿ, ಅ.3: ಪ್ರತ್ಯೇಕ ರೇಷನ್ ಕಾರ್ಡ್ ಮತ್ತು ಆಧಾರ್ ಕಾರ್ಡ್ಗಳನ್ನು ಹೊಂದಿ ಒಂದೇ ಮನೆಯಲ್ಲಿ ಪ್ರತ್ಯೇಕವಾಗಿ ವಾಸಿಸುವ ಕುಟುಂಬಗಳನ್ನು ಪ್ರತ್ಯೇಕ ಘಟಕವೆಂದು ಪರಿಗಣಿಸಿ ಅವರಿಗೂ ನಿವೇಶನ ಅಥವಾ ಮನೆಗಳನ್ನು ಒದಗಿಸಲು ಕ್ರಮಕೈಗೊಳ್ಳಬೇಕು. ವಾಸಕ್ಕೆ ಯೋಗ್ಯವಲ್ಲದ ಮನೆಗಳನ್ನು ‘ಎ’ ಕೆಟಗರಿ ಎಂದು ಪರಿಗಣಿಸಿ 5 ಲಕ್ಷ ರೂ.ಪರಿಹಾರ ನೀಡಬೇಕು ಎಂದು ಅಧಿಕಾರಿಗಳಿಗೆ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಸೂಚನೆ ನೀಡಿದರು.
ಗುರುವಾರ ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ನಡೆದ ಬೆಳಗಾವಿ ಜಿಲ್ಲೆಯ ಪ್ರವಾಹ ಪರಿಹಾರ ಕಾರ್ಯಗಳ ಹಾಗೂ ಅಭಿವೃದ್ಧಿ ಕಾರ್ಯಕ್ರಮಗಳ ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.
ಒಂದೇ ದೊಡ್ಡ ಮನೆಯಲ್ಲಿ ಪ್ರತ್ಯೇಕವಾಗಿ ವಾಸಿಸುವ ಸಹೋದರರ ಕುಟುಂಬಗಳನ್ನು ಪ್ರತ್ಯೇಕ ಘಟಕ ಎಂದು ಪರಿಗಣಿಸಬೇಕು ಎಂದು ಸವದತ್ತಿ ಶಾಸಕ ಆನಂದ ಮಾಮನಿ ಒತ್ತಾಯಿಸಿದರು. ಇದಕ್ಕೆ ಸ್ಪಂದಿಸಿದ ಮುಖ್ಯಮಂತ್ರಿ, ಇಂತಹ ಪ್ರಕರಣಗಳಲ್ಲಿ ಪ್ರತ್ಯೇಕವಾಗಿ ವಾಸಿಸುವ ಕುಟುಂಬಗಳನ್ನು ಗುರುತಿಸಿ, ಕೂಡಲೇ ಅವರಿಗೂ ಎಲ್ಲ ರೀತಿಯ ಪರಿಹಾರವನ್ನು ಒದಗಿಸಬೇಕು ಎಂದು ಕಟ್ಟುನಿಟ್ಟಿನ ಸೂಚನೆ ನೀಡಿದರು.
ಶಾಸಕರು ತಮ್ಮ ಕ್ಷೇತ್ರದಲ್ಲಿ ಬಿದ್ದ ಮನೆಗಳ ವರ್ಗೀಕರಣದಲ್ಲಿ ಏನಾದರೂ ಲೋಪದೋಷಗಳಿದ್ದರೆ ಅಧಿಕಾರಿಗಳ ಗಮನಕ್ಕೆ ತಂದು ಕೂಡಲೇ ಸರಿಪಡಿಸಬೇಕು. ಅಂತಹ ಕುಟುಂಬಗಳಿಗೂ ಎಲ್ಲ ರೀತಿಯ ಪರಿಹಾರ ನೀಡಲಾಗುವುದು. ಯಾವುದೇ ಪಕ್ಷವಿರಲಿ ಶಾಸಕರು ಪಟ್ಟಿ ನೀಡಿದರೆ ಮನೆಗಳ ವರ್ಗೀಕರಣವನ್ನು ಪರಿಷ್ಕರಣೆ ಮಾಡಿ ಪರಿಹಾರ ನೀಡಲಾಗುವುದು ಎಂದು ಅವರು ಹೇಳಿದರು.
ಮನೆಗಳ ಹಾನಿಯನ್ನು ಪರಿಶೀಲನೆ ಮಾಡುವ ಸಂದರ್ಭದಲ್ಲಿ ವರ್ಗೀಕರಣದಲ್ಲಿ ಲೋಪವೆಸಗಿದರೆ ಸಂಬಂಧಿಸಿದ ಅಧಿಕಾರಿಗಳ ವಿರುದ್ಧ ಕಠಿಣ ಕ್ರಮ ತೆಗೆದುಕೊಳ್ಳಲಾಗುವುದು ಎಂದು ಮುಖ್ಯಮಂತ್ರಿ ಎಚ್ಚರಿಕೆ ನೀಡಿದರು.
ಶಾಸಕರಾದ ಮಹಾಂತೇಶ ದೊಡ್ಡಗೌಡರ, ಮಹಾದೇವಪ್ಪಯಾದವಾಡ, ಅಂಜಲಿ ನಿಂಬಾಳ್ಕರ್, ಮಹಾಂತೇಶ ಕೌಜಲಗಿ, ಲಕ್ಷ್ಮಿ ಹೆಬ್ಬಾಳ್ಕರ್ ಮಾತನಾಡಿ, ಪ್ರವಾಹ ಸಂದರ್ಭದಲ್ಲಿ ಕುಸಿದಿರುವ ಮನೆಗಳ ಎ, ಬಿ ಮತ್ತು ಸಿ ವರ್ಗೀಕರಣ ಸಮರ್ಪಕವಾಗಿ ಆಗುತ್ತಿಲ್ಲ. ಸಾಧ್ಯವಾದರೆ ಮರು ಮೌಲ್ಯಮಾಪನ ಮಾಡಿ ಸೂಕ್ತ ಪರಿಹಾರ ನೀಡಬೇಕು ಎಂದು ಮನವಿ ಮಾಡಿದರು.
ಎ ಮತ್ತು ಬಿ ಕೆಟಗರಿ ಮಾತ್ರ ಪರಿಗಣಿಸಬೇಕು ಎಂದು ಲಕ್ಷ್ಮಿ ಹೆಬ್ಬಾಳ್ಕರ್ ಒತ್ತಾಯಿಸಿದರು. ಇದಕ್ಕೆ ಪ್ರತಿಕ್ರಿಯಿಸಿದ ಉಪ ಮುಖ್ಯಮಂತ್ರಿ ಗೋವಿಂದ ಕಾರಜೋಳ, ಎನ್ಡಿಆರ್ಎಫ್ ಮಾರ್ಗಸೂಚಿಯ ಪ್ರಕಾರ ಮಾತ್ರ ಪರಿಹಾರ ನೀಡಲು ಸಾಧ್ಯ. ಆದಾಗ್ಯೂ ಪರಿಸ್ಥಿತಿಯನ್ನು ಅವಲೋಕಿಸಿ ರಾಜ್ಯ ಸರಕಾರದಿಂದ ಪ್ರತ್ಯೇಕ ನೆರವು ನೀಡಲಾಗುವುದು ಎಂದರು.
ಪ್ರವಾಹದಿಂದ ಶಿಥಿಲಗೊಂಡಿರುವ ಶಾಲೆಗಳ ಪ್ರತಿಯೊಂದು ಕೊಠಡಿ ನಿರ್ಮಾಣಕ್ಕೆ ಐದು ಲಕ್ಷ ರೂಪಾಯಿ ಅನುದಾನ ನೀಡಲಾಗುವುದು. ಅದೇ ರೀತಿ ಅಂಗನವಾಡಿ ಕಟ್ಟಡಗಳ ನಿರ್ಮಾಣಕ್ಕೂ ಪ್ರತ್ಯೇಕ ಅನುದಾನ ಒದಗಿಸಲಾಗುತ್ತದೆ. ಕೂಡಲೇ ಕಾಮಗಾರಿ ಆರಂಭಕ್ಕೆ ಕ್ರಮ ಕೈಗೊಳ್ಳುವಂತೆ ಜಿಲ್ಲಾಧಿಕಾರಿಗೆ ಮುಖ್ಯಮಂತ್ರಿ ಸೂಚನೆ ನೀಡಿದರು.
ಅದೇ ರೀತಿ ದುರಸ್ತಿ ಸಾಧ್ಯವಿರುವ ಕಟ್ಟಡಗಳ ದುರಸ್ತಿಗೆ 50 ಸಾವಿರ ರೂ. ಪರಿಹಾರ ಬಿಡುಗಡೆ ಮಾಡಲಾಗುವುದು. ವಿದ್ಯುತ್ ಸಂಪರ್ಕವನ್ನು ಒಂದು ವಾರದಲ್ಲಿ ಸರಿಪಡಿಸಬೇಕು. ಮುಂದಿನ ಸಲ ಭೇಟಿ ನೀಡಿದಾಗ ವಿದ್ಯುತ್ ಸಂಪರ್ಕದ ಬಗ್ಗೆ ಯಾವುದೇ ದೂರುಗಳು ಬರಬಾರದು ಎಂದು ಅಧಿಕಾರಿಗಳಿಗೆ ಎಚ್ಚರಿಕೆ ನೀಡಿದ ಆವರು, ಬೆಳೆಹಾನಿ ಪರಿಹಾರವನ್ನು ಇನ್ನು ಕೆಲ ದಿನಗಳಲ್ಲಿ ಕೇಂದ್ರ ಸರಕಾರದಿಂದ ಬಿಡುಗಡೆಯಾಗಲಿದೆ ಎಂದು ಹೇಳಿದರು.
ಪ್ರವಾಹ ಮತ್ತು ಅತಿವೃಷ್ಟಿಯಿಂದ ಜಮೀನು ಹಾಳಾಗಿದ್ದರೆ ಅಂತಹ ಕೆಲಸಗಳನ್ನು ಉದ್ಯೋಗ ಖಾತ್ರಿ ಯೋಜನೆಯಡಿ ಕೈಗೆತ್ತಿಕೊಳ್ಳುವಂತೆ ಗೋವಿಂದ ಕಾರಜೋಳ ನಿರ್ದೇಶನ ನೀಡಿದರು. ಜಿಲ್ಲೆಯಲ್ಲಿ ಉಂಟಾಗಿರುವ ಹಾನಿ ಹಾಗೂ ಕೈಗೊಂಡ ಪರಿಹಾರ ಕಾರ್ಯಗಳ ಕುರಿತು ಜಿಲ್ಲಾಧಿಕಾರಿ ಡಾ.ಎಸ್.ಬಿ.ಬೊಮ್ಮನಹಳ್ಳಿ ಮಾಹಿತಿ ನೀಡಿದರು.
ಸಭೆಯಲ್ಲಿ ಉಪ ಮುಖ್ಯಮಂತ್ರಿ ಲಕ್ಷ್ಮಣ ಸವದಿ, ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಸಚಿವೆ ಶಶಿಕಲಾ ಜೊಲ್ಲೆ, ಸಂಸದ ಅಣ್ಣಾಸಾಹೇಬ್ ಜೊಲ್ಲೆ, ಶಾಸಕ ಅಭಯ್ ಪಾಟೀಲ್, ಜಿ.ಪಂ.ಅಧ್ಯಕ್ಷೆ ಆಶಾ ಐಹೊಳೆ, ಮುಖ್ಯಮಂತ್ರಿಯ ಕಾರ್ಯದರ್ಶಿ ಶಿವಯೋಗಿ ಕಳಸದ, ಪ್ರಾದೇಶಿಕ ಆಯುಕ್ತ ಆಮ್ಲಾನ್ ಆದಿತ್ಯ ಬಿಸ್ವಾಸ್ ಉಪಸ್ಥಿತರಿದ್ದರು.