ಬಿಬಿಎಂಪಿ ಸ್ಥಾಯಿ ಸಮಿತಿ ಚುನಾವಣೆಗೆ ಹೈಕೋರ್ಟ್ ತಡೆ
![ಬಿಬಿಎಂಪಿ ಸ್ಥಾಯಿ ಸಮಿತಿ ಚುನಾವಣೆಗೆ ಹೈಕೋರ್ಟ್ ತಡೆ ಬಿಬಿಎಂಪಿ ಸ್ಥಾಯಿ ಸಮಿತಿ ಚುನಾವಣೆಗೆ ಹೈಕೋರ್ಟ್ ತಡೆ](https://www.varthabharati.in/sites/default/files/images/articles/2019/10/4/213320-1570211033.jpg)
ಬೆಂಗಳೂರು, ಅ.4: ಆರ್ಥಿಕ ಮತ್ತು ತೆರಿಗೆ ಸ್ಥಾಯಿ ಸಮಿತಿ ಅಧ್ಯಕ್ಷ ಸ್ಥಾನದ ಚುನಾವಣೆಗೆ ಹೊರಡಿಸಿರುವ ಅಧಿಸೂಚನೆ ರದ್ದುಕೋರಿ ಸಲ್ಲಿಸಿದ್ದ ಅರ್ಜಿಗೆ ಸಂಬಂಧಿಸಿದಂತೆ ಹೈಕೋರ್ಟ್ ರಾಜ್ಯ ಸರಕಾರ, ಬಿಬಿಎಂಪಿಗೆ ನೋಟಿಸ್ ಜಾರಿಗೊಳಿಸಿ, ಆಕ್ಷೇಪಣೆ ಸಲ್ಲಿಸಲು ಸೂಚಿಸಿದೆ.
ಈ ಕುರಿತು ಆರ್ಥಿಕ ಮತ್ತು ತೆರಿಗೆ ಸ್ಥಾಯಿ ಸಮಿತಿ ಅಧ್ಯಕ್ಷ ಹೇಮಲತಾ ಗೋಪಾಲಯ್ಯ ಸಲ್ಲಿಸಿದ್ದ ತಕರಾರು ಅರ್ಜಿ ವಿಚಾರಣೆ ನ್ಯಾಯಮೂರ್ತಿ ಪಿ.ಬಿ.ಭಜಂತ್ರಿ ಅವರಿದ್ದ ನ್ಯಾಯಪೀಠದಲ್ಲಿ ನಡೆಯಿತು. ಮೇಯರ್ ಮತ್ತು ಉಪಮೇಯರ್ ಚುನಾವಣೆ ಅ.1ರಂದು ನಡೆದಿದ್ದು, ಮೇಯರ್ ಆಗಿ ಬಿಜೆಪಿಯ ಗೌತಮ್ಕುಮಾರ್ ಮತ್ತು ಉಪಮೇಯರ್ ಆಗಿ ಮೋಹನ್ರಾಜ್ ಆಯ್ಕೆಯಾಗಿದ್ದರು. ಅಂದೇ ಬಿಬಿಎಂಪಿಯ 12 ಸ್ಥಾಯಿ ಸಮಿತಿಗಳಿಗೆ ಚುನಾವಣೆ ನಡೆಸಲು ಬೆಂಗಳೂರು ಪ್ರಾದೇಶಿಕ ಆಯುಕ್ತರು ಅಧಿಸೂಚನೆ ಹೊರಡಿಸಿದ್ದರು. ಆದರೆ, ಇದನ್ನು ಪ್ರಶ್ನಿಸಿ ತಕ್ಷಣ ಶಿಕ್ಷಣ ಸ್ಥಾಯಿ ಸಮಿತಿ ಅಧ್ಯಕ್ಷ ಇಮ್ರಾನ್ ಪಾಷಾ ಸೇರಿ ವಿವಿಧ 8 ಸ್ಥಾಯಿ ಸಮಿತಿಗಳ ಅಧ್ಯಕ್ಷರು ಹೈಕೋರ್ಟ್ಗೆ ತಕರಾರು ಅರ್ಜಿ ಸಲ್ಲಿಸಿದ್ದರು.
ವಿಚಾರಣೆ ನಡೆಸಿದ ನ್ಯಾಯಮೂರ್ತಿ ಬಿ.ವೀರಪ್ಪ ಅವರಿದ್ದ ಏಕಸದಸ್ಯ ನ್ಯಾಯಪೀಠ, ಸ್ಥಾಯಿ ಸಮಿತಿಗೆ ಚುನಾಯಿತಿ ಅಧ್ಯಕ್ಷರ ಅಧಿಕಾರಾವಧಿ ಒಂದು ವರ್ಷ ಇರುತ್ತದೆ. ಇದನ್ನು ಸರಕಾರ ಮೊಟಕುಗೊಳಿಸುವಂತಿಲ್ಲ ಎಂದು ಹೇಳಿ ಮಧ್ಯಂತರ ತಡೆಯಾಜ್ಞೆ ನೀಡಿ ಆದೇಶ ಹೊರಡಿಸಿ ವಿಚಾರಣೆ ಮುಂದೂಡಿತು. ಹೀಗಾಗಿ, ಅ.1ರಂದು ಚುನಾವಣೆ ನಡೆದಿರಲಿಲ್ಲ.
ಬಿಬಿಎಂಪಿ 12 ಸ್ಥಾಯಿ ಸಮಿತಿಗಳಿಗೆ 2018ರ ಡಿ.5ರಂದು ಚುನಾವಣೆ ನಡೆದಿದೆ. ಕರ್ನಾಟಕ ಮುನ್ಸಿಪಲ್ ಕಾರ್ಪೋರೇಷನ್ ಕಾಯ್ದೆಯ ಸೆಕ್ಷನ್ 11(5) ಅನ್ವಯ ಸ್ಥಾಯಿ ಸಮಿತಿ ಅಧ್ಯಕ್ಷರ ಅವಧಿ ಒಂದು ವರ್ಷ. ಈ ಪ್ರಕಾರ 2019ರ ಡಿ.4ಕ್ಕೆ ಮತ್ತು ಚುನಾವಣೆ ನಡೆಯಬೇಕು. ಆದರೆ, ಅಧಿಕಾಕಾವಧಿ ಪೂರ್ಣಗೊಳ್ಳುವ ಮೊದಲೇ ಚುನಾವಣೆ ನಿಗದಿ ಪಡಿಸಲಾಗಿತ್ತು. ಇದನ್ನು ಪ್ರಶ್ನಿಸಿ ಸ್ಥಾಯಿ ಸಮಿತಿಗಳು ಹೈಕೋರ್ಟ್ ಮೆಟ್ಟಿಲೇರಿತ್ತು.