ವಿವಿ ಪ್ಯಾಟ್ ಎಣಿಕೆ ಕೋರಿ ಪರಾಜಿತ ಅಭ್ಯರ್ಥಿ ಅರ್ಜಿ: ಚುನಾವಣೆ ಆಯೋಗಕ್ಕೆ ಹೈಕೋರ್ಟ್ ನೋಟಿಸ್
![ವಿವಿ ಪ್ಯಾಟ್ ಎಣಿಕೆ ಕೋರಿ ಪರಾಜಿತ ಅಭ್ಯರ್ಥಿ ಅರ್ಜಿ: ಚುನಾವಣೆ ಆಯೋಗಕ್ಕೆ ಹೈಕೋರ್ಟ್ ನೋಟಿಸ್ ವಿವಿ ಪ್ಯಾಟ್ ಎಣಿಕೆ ಕೋರಿ ಪರಾಜಿತ ಅಭ್ಯರ್ಥಿ ಅರ್ಜಿ: ಚುನಾವಣೆ ಆಯೋಗಕ್ಕೆ ಹೈಕೋರ್ಟ್ ನೋಟಿಸ್](https://www.varthabharati.in/sites/default/files/images/articles/2019/10/22/216002-1571763850.jpg)
ಬೆಂಗಳೂರು, ಅ.22: 2018ರಲ್ಲಿ ನಡೆದ ವಿಧಾನಸಭಾ ಚುನಾವಣೆಯಲ್ಲಿ ಗೋವಿಂದರಾಜನಗರ ವಿಧಾನಸಭಾ ಕ್ಷೇತ್ರದ ಒಟ್ಟು 271 ಮತಗಟ್ಟೆಗಳಲ್ಲಿನ ವಿವಿ ಪ್ಯಾಟ್ಗಳ ಮತ ಎಣಿಕೆಗೆ ನಿರ್ದೇಶಿಸಲು ಕೋರಿ ಪರಾಜಿತ ಅಭ್ಯರ್ಥಿ ಪ್ರಿಯಾಕೃಷ್ಣ ಸಲ್ಲಿಸಿದ್ದ ಮೇಲ್ಮನವಿ ಅರ್ಜಿಗೆ ಸಂಬಂಧಿಸಿದಂತೆ ಹೈಕೋರ್ಟ್ ಚುನಾವಣೆ ಆಯೋಗಕ್ಕೆ ನೋಟಿಸ್ ಜಾರಿಗೊಳಿಸಿ, ವಿವಿ ಪ್ಯಾಟ್ ವೊಟರ್ ಸ್ಲಿಪ್ಗಳನ್ನು ನಾಶಪಡಿಸದಂತೆ ಮಧ್ಯಂತರ ಆದೇಶ ನೀಡಿದೆ.
ಈ ಕುರಿತು ಸಲ್ಲಿಸಿದ್ದ ಮೇಲ್ಮನವಿ ಅರ್ಜಿ ವಿಚಾರಣೆ ಮುಖ್ಯ ನ್ಯಾಯಮೂರ್ತಿ ಎ.ಎಸ್.ಓಕಾ ಅವರಿದ್ದ ವಿಭಾಗೀಯ ನ್ಯಾಯಪೀಠದಲ್ಲಿ ನಡೆಯಿತು. ಅರ್ಜಿ ವಿಚಾರಣೆ ನಡೆಸಿದ ನ್ಯಾಯಪೀಠವು ಚುನಾವಣಾ ಆಯೋಗಕ್ಕೆ ನೋಟಿಸ್ ಜಾರಿಗೊಳಿಸಿದೆ. ಹೈಕೋರ್ಟ್ ಏಕ ಸದಸ್ಯ ನ್ಯಾಯಪೀಠವು ಪ್ರಿಯಾಕೃಷ್ಣ ಸಲ್ಲಿಸಿದ್ದ ಅರ್ಜಿಯನ್ನು ವಿಚಾರಣೆಗೆ ಯೋಗ್ಯವಾಗಿಲ್ಲ ಎಂದು ಅಭಿಪ್ರಾಯಪಟ್ಟು, ಅರ್ಜಿ ವಜಾಗೊಳಿಸಿತ್ತು.
ಪ್ರಕರಣವೇನು: ಗೋವಿಂದರಾಜನಗರ ವಿಧಾನಸಭಾ ಕ್ಷೇತ್ರದ ಮತ ಎಣಿಕೆ 2018ರ ಮೇ 15ರಂದು ನಡೆದಿತ್ತು. ಮತ ಎಣಿಕೆ ಮುಕ್ತಾಯದ ಬಳಿಕ ಪ್ರಿಯಾಕೃಷ್ಣ, ಹಲವು ಮತಗಟ್ಟೆಗಳ ವಿದ್ಯುನ್ಮಾನ ಮತಯಂತ್ರಗಳನ್ನು ತಿರುಚಲಾಗಿದೆ ಎಂದು ದೂರಿದ್ದರು. ಮತಗಳ ಜೊತೆಗೆ ವಿವಿ ಪ್ಯಾಟ್ನ ವೋಟರ್ ಸ್ಲಿಪ್ಗಳನ್ನೂ ಎಣಿಕೆ ಮಾಡಬೇಕೆಂದು ಚುನಾವಣಾಧಿಕಾರಿಗೆ ಮನವಿ ಮಾಡಿದ್ದರು. ಈ ಮನವಿಯನ್ನು ಚುನಾವಣಾಧಿಕಾರಿ ತಿರಸ್ಕರಿಸಿದ್ದರು.